ಯಲಬುರ್ಗಾ: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಮಾತಿಲ್ಲ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ತನಿಖೆ ನಡೆಸಲು ಕೇಂದ್ರ ಸರ್ಕಾರ ಈಗಾಗಲೇ ಮುಂದಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಮೋದಿ ಸರ್ಕಾರ ಬದ್ಧವಿದೆ. ವಿದ್ಯಾರ್ಥಿಗಳ ಹೋರಾಟದ ಹೆಸರಿನಲ್ಲಿ ರಾಜಕೀಯ ಪಕ್ಷಗಳು ತಮ್ಮ ಅಸ್ತಿತ್ವ ಪ್ರದರ್ಶಿಸಲು ಮುಂದಾಗಿರುವುದು ದುರದೃಷ್ಟಕರ. ಎಲ್ಲ ರಾಜಕೀಯ ಪಕ್ಷಗಳು ಸಂಯಮದಿಂದ ನಡೆದುಕೊಂಡು ಅಭ್ಯರ್ಥಿಗಳ ಹಿತ ಕಾಪಾಡಬೇಕು ಎಂದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಸತ್ಯಾಗ್ರಹ ನಡೆಸಿದ ಸೋನಂ ವಾಂಗ್ಚುಕ್ ಮನೆಗೆ ತೆರಳಿ ಬೆಂಬಲ ಸೂಚಿಸುವ ಬದಲು ಪ್ರಧಾನಿ ನಿವಾಸದ ಎದುರು ಪ್ರತಿಭಟನೆ ನಡೆಸಿರುವುದು ರಾಜಕೀಯ ಪ್ರೇರಿತವಾಗಿದೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆ ವಿನಹ ಎಲ್ಲದರಲ್ಲೂ ರಾಜಕೀಯ ಮಾಡುವುದು ಸರಿಯಲ್ಲ.ಪ್ರಶ್ನೆಪತ್ರಿಕೆ ಸೋರಿಕೆ ಇದೇ ಮೊದಲ ಘಟನೆಯಲ್ಲ. ಈ ಹಿಂದೆಯೂ ದೇಶದ ವಿವಿಧ ರಾಜ್ಯಗಳಲ್ಲಿ ಅಲ್ಲದೆ ಕರ್ನಾಟಕದಲ್ಲಿಯೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಇಂತಹ ಅಕ್ರಮ ತಡೆಯಲು ಎಲ್ಲ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಮಾರುತಿ ಗಾವರಾಳ ಮಾತನಾಡಿ, ಬರ ಪರಿಸ್ಥಿತಿ ಅಧ್ಯಯನಕ್ಕಾಗಿ ಬಿಜೆಪಿ ನಾಲ್ಕು ತಂಡ ರಚಿಸಿದೆ. ರೈತರ ಸಂಕಷ್ಟಕ್ಕೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಸಲಿಂಗಪ್ಪ ಭೂತೆ, ವೀರಣ್ಣ ಹುಬ್ಬಳ್ಳಿ, ವಿಶ್ವನಾಥ ಮರಿಬಸಪ್ಪನವರ, ಶರಣಪ್ಪ ಈಳಿಗೇರ, ಅಮರೇಶ ಹುಬ್ಬಳ್ಳಿ, ಅಯ್ಯನಗೌಡ ಕೆಂಚಮ್ಮನವರ್, ಕಲ್ಲೇಶಪ್ಪ ಕರಮುಡಿ, ಅಶೋಕ ಅರಕೇರಿ, ಕಳಕಪ್ಪ ತಳವಾರ್, ಈರಪ್ಪ ಬಣಕಾರ, ವಸಂತ ಭಾವಿಮನಿ ಸೇರಿದಂತೆ ಮತ್ತಿತರರು ಇದ್ದರು.