ನೀರಿನ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ

KannadaprabhaNewsNetwork |  
Published : Jul 15, 2026, 01:30 AM IST
ಚಲುವರಾಯಸ್ವಾಮಿ ಪೋಟೋ | Kannada Prabha

ಸಾರಾಂಶ

ಮಂಡ್ಯ ಜಿಲ್ಲೆಯಲ್ಲಿ ಬೆಳೆದು ನಿಂತಿರುವ ಕಬ್ಬಿಗೆ ಹಾಗೂ ಕೆರೆ-ಕಟ್ಟೆಗಳಿಗೆ ನೀರು ಹರಿಸಬೇಕೆಂಬ ರೈತರ ಬೇಡಿಕೆ ನ್ಯಾಯಯುತವಾಗಿದೆ. ಈ ಬಗ್ಗೆ ವಿರೋಧ ಪಕ್ಷಗಳು ಕೂಡ ಸರ್ಕಾರವನ್ನು ಆಗ್ರಹಿಸುತ್ತಿವೆ. ಸಂಕಷ್ಟದ ಸಮಯದಲ್ಲಿ ರೈತರ ಪರವಾಗಿ ನಿಲ್ಲುವುದು ಪ್ರತಿಯೊಬ್ಬ ಜನಪ್ರತಿನಿಧಿಯ ಕರ್ತವ್ಯ. ರೈತರ ಹಿತ ಕಾಯುವುದು ನಮ್ಮ ಮೊದಲ ಆದ್ಯತೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲೆಯಲ್ಲಿ ಬೆಳೆದು ನಿಂತಿರುವ ಕಬ್ಬಿಗೆ ಹಾಗೂ ಕೆರೆ-ಕಟ್ಟೆಗಳಿಗೆ ನೀರು ಹರಿಸಬೇಕೆಂಬ ರೈತರ ಬೇಡಿಕೆ ನ್ಯಾಯಯುತವಾಗಿದೆ. ಈ ಬಗ್ಗೆ ವಿರೋಧ ಪಕ್ಷಗಳು ಕೂಡ ಸರ್ಕಾರವನ್ನು ಆಗ್ರಹಿಸುತ್ತಿವೆ. ಸಂಕಷ್ಟದ ಸಮಯದಲ್ಲಿ ರೈತರ ಪರವಾಗಿ ನಿಲ್ಲುವುದು ಪ್ರತಿಯೊಬ್ಬ ಜನಪ್ರತಿನಿಧಿಯ ಕರ್ತವ್ಯ. ರೈತರ ಹಿತ ಕಾಯುವುದು ನಮ್ಮ ಮೊದಲ ಆದ್ಯತೆ. ಆದರೆ, ಈ ವರ್ಷ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದೆ ಜಲಾಶಯಗಳಲ್ಲಿ ನೀರಿನ ಕೊರತೆಯಾಗಿದೆ. ಇಂತಹ ಸಂದರ್ಭದಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸುವುದು ಕೂಡ ನಮ್ಮ ಜವಾಬ್ದಾರಿ ಎಂದು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಈಗಾಗಲೇ ಜಿಲ್ಲೆಯ ಶಾಸಕರು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದೇವೆ. ಮುಖ್ಯಮಂತ್ರಿಗಳು ಈ ವಿಷಯವಾಗಿ ಸಕಾರಾತ್ಮಕವಾಗಿ ಸ್ಪಂದಿಸಿ, ನಾಳಿನ ಸಿಡಬ್ಲ್ಯೂಎಂಎ ಸಭೆ ನೋಡಿಕೊಂಡು ನೀರು ಬಿಡೋಣ ಎಂದು ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಇಂದು (ಬುಧವಾರ) ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆಯಲಿದೆ. ಈ ಮಹತ್ವದ ಸಭೆಯಲ್ಲಿ ನಮ್ಮ ರಾಜ್ಯದ ಅಧಿಕಾರಿಗಳು ರಾಜ್ಯದ ನೀರಿನ ವಾಸ್ತವಾಂಶವನ್ನು ವಿವರಿಸಿ, ಕುಡಿಯುವ ನೀರು ಹಾಗೂ ಬೆಳೆಗಳ ಪರಿಸ್ಥಿತಿಯನ್ನು ಸಮರ್ಥವಾಗಿ ಮಂಡಿಸಲಿದ್ದಾರೆ. ಈ ಸಭೆಯ ತೀರ್ಮಾನ ಏನಾಗುತ್ತದೆ ಎಂಬುದನ್ನು ನೋಡಿಕೊಂಡು ತಕ್ಷಣವೇ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರ ಜೊತೆ ಚರ್ಚಿಸಿ ನೀರು ಬಿಡುವ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ದಿನಗಳಲ್ಲಿ ಮಳೆ ಬರುವ ಸಂಭವ ಕೂಡ ಇದೆ. ಕೆಆರ್‌ಎಸ್ ಜಲಾಶಯ ತುಂಬುವ ಆಶಯ ಕೂಡ ನಮಗಿದೆ. ರೈತರು ಬಿತ್ತನೆಗೆ ಇನ್ನೂ ಅವಕಾಶ ಇದೆ. ಆದ್ದರಿಂದ ಜಿಲ್ಲೆಯ ರೈತ ಬಾಂಧವರು ಯಾವುದೇ ಕಾರಣಕ್ಕೂ ಧೃತಿಗೆಡಬಾರದು. ಇದು ರೈತರ ಬದುಕು-ಸಾವಿನ ಪ್ರಶ್ನೆ. ಈ ಸೂಕ್ಷ್ಮ ವಿಷಯದಲ್ಲಿ ಯಾರೂ ರಾಜಕೀಯ ಮಾಡುವುದು ಬೇಡ ಎಂದು ವಿಪಕ್ಷ ನಾಯಕರಲ್ಲಿ ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಕ್ಷ ಸಂಘಟನೆ ಒತ್ತು ನೀಡಿ: ಅಂಬರೀಶ್‌ಗೌಡ ಮನವಿ
ಎರಡು ದಿನದಲ್ಲಿ ನೀರು ಹರಿಸದಿದ್ದರೆ ಬೃಹತ್‌ ಹೋರಾಟ