ಉಡುಪಿ: ಕೇರಳದ ಪಾಲಕ್ಕಾಡ್ ವಿಭಾಗದಲ್ಲಿದ್ದ ಮಂಗಳೂರು ರೈಲ್ವೆ ವಲಯನ್ನು ನಮ್ಮದೇ ರಾಜ್ಯದ ಮೈಸೂರು ವಿಭಾಗಕ್ಕೆ ಸೇರಿಸುವ ಆದೇಶವಾಗಿದ್ದು, ಅದರಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.ಮಂಗಳೂರನ್ನು ಮೈಸೂರು ವಿಭಾಗಕ್ಕೆ ಸೇರಿಸುವಲ್ಲಿ ಮುತುವರ್ಜಿ ತೋರಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಶ್ರಮ ವಹಿಸಿದ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಕೋಟ ಹೇಳಿದ್ದಾರೆ.ಕೇರಳ ಸರ್ಕಾರದ ಬೆದರಿಕೆಗೆ ಕೇಂದ್ರ ರೈಲ್ವೆ ಇಲಾಖೆ ಮಣಿಯುವುದಿಲ್ಲ. ಈ ಬಗ್ಗೆ ಕನ್ರಾಟಕದ ಜನ ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವ ಸೋಮಣ್ಣ ಸ್ಪಷ್ಟಪಡಿಸಿದ್ದಾರೆ ಎಂದು ಕೋಟ ಹೇಳಿದ್ದಾರೆ.ಕೇರಳ ಸರ್ಕಾರ ಮತ್ತು ಅಲ್ಲಿನ ಸಂಸದರು ಎಷ್ಟು ವಿರೋಧಿಸಿದರೂ ನಮ್ಮ ನಿಲುವಿನಲ್ಲಿ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಇದು ಕೇವಲ ಕರಾವಳಿ ಭಾಗದ ಪ್ರಶ್ನೆಯಲ್ಲ, ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ ಸಾಕಷ್ಟು ಆದಾಯ ಬರುತ್ತದೆ. ನಮ್ಮ ಭಾಗದ ರೈಲ್ವೆ ಅಭಿವೃದ್ಧಿಗೂ ಇದರಿಂದ ಬಹು ದೊಡ್ಡ ಕೊಡುಗೆ ಆಗಲಿದೆ. ಮುಂದಿನ ದಿನಗಳಲ್ಲಿ ಕೊಂಕಣ ರೈಲ್ವೆ ಭಾರತೀಯ ರೈಲ್ವೆ ಜೊತೆಗೆ ವಿಲೀನ, ರೈಲ್ವೆ ಹಳಿ ಡಬ್ಲಿಂಗ್, ಹೊಸ ರೈಲು ಯೋಜನೆ ಸೇರಿದಂತೆ ಅನೇಕ ಯೋಜನೆಗಳ ಕುರಿತು ನಮ್ಮ ಪ್ರಯತ್ನವನ್ನು ಮುಂದುವರಿಸಲಾಗುತ್ತದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.