ಬಿ.ಎಚ್.ಎಂ.ಗುರುಶಾಂತಶಾಸ್ತ್ರಿ
ಈ ಬಾರಿ ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವೆಡೆ ಮಳೆಯ ಕೊರತೆ ಉಂಟಾಗಿದೆ. ತುಂಗಾ ಹಾಗೂ ಭದ್ರಾ ನದಿಗಳ ಜಲಾನಯನ ಪ್ರದೇಶಗಳಲ್ಲಿಯೂ ನಿರೀಕ್ಷಿತ ಮಳೆಯಾಗಿಲ್ಲ. ಇದರಿಂದ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಕುಸಿದಿದೆ. ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿರುವುದರಿಂದ ಎಚ್ಎಲ್ಸಿ ಹಾಗೂ ಎಲ್ಎಲ್ಸಿ ಕಾಲುವೆಗಳಿಗೆ ನೀರು ಹರಿಸಿಲ್ಲ. ಇದರಿಂದ ಕಾಲುವೆಗಳು ಸಂಪೂರ್ಣ ಬರಿದಾಗಿದ್ದು, ನೀರಿನ ನಿರೀಕ್ಷೆಯಲ್ಲಿದ್ದ ರೈತರು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.
ಆರಂಭವಾಗದ ನಾಟಿ ಕಾರ್ಯ:ತುಂಗಭದ್ರಾ ನದಿಯ ನೀರನ್ನೇ ನಂಬಿಕೊಂಡು ನೂರಾರು ರೈತರು ಒಂದೆರಡು ತಿಂಗಳ ಹಿಂದೆಯೇ ಭತ್ತದ ಸಸಿ ಮಡಿ ಮಾಡಿಕೊಂಡಿದ್ದಾರೆ. ಜಮೀನು ಸಿದ್ಧಪಡಿಸಿ ಭತ್ತದ ನಾಟಿಗೆ ಅಗತ್ಯ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದರೂ ಕಾಲುವೆಗೆ ನೀರು ಹರಿಯದ ಕಾರಣ ನಾಟಿ ಕಾರ್ಯ ಆರಂಭಿಸಲು ಸಾಧ್ಯವಾಗಿಲ್ಲ. ಇನ್ನು ಕೆಲವೆಡೆ ಭತ್ತ ಬಿತ್ತನೆ ಮಾಡಿದ್ದು ಮಳೆ ಇಲ್ಲದೇ ಬೆಳೆ ಒಣಗುವ ಆತಂಕವಿದೆ.
ಕಾಲುವೆ ನೀರಿನ ಕೊರತೆಯಷ್ಟೇ ಅಲ್ಲದೆ, ಮಳೆಯಾಶ್ರಿತ ಪ್ರದೇಶಗಳಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ. ಮೆಕ್ಕೆಜೋಳ, ರಾಗಿ, ತೊಗರಿ, ಹತ್ತಿ, ಜೋಳ ಸೇರಿದಂತೆ ವಿವಿಧ ಬೆಳೆಗಳನ್ನು ಬಿತ್ತನೆ ಮಾಡಿರುವ ರೈತರು ಮಳೆಯ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಅಂತರ್ಜಲ ಕುಸಿತ:
ಕೃಷಿ ಇಲಾಖೆಯ ಮಾಹಿತಿಯಂತೆ, ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ 22,991 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಇತ್ತು. ಆದರೆ ಇದುವರೆಗೆ ಕೇವಲ 8,027 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ಪೂರ್ಣಗೊಂಡಿದೆ. ಇದರಲ್ಲಿ 4,421 ಹೆಕ್ಟೇರ್ ಭತ್ತ, 899 ಹೆಕ್ಟೇರ್ ತೊಗರಿ, 1,054 ಹೆಕ್ಟೇರ್ ಸೂರ್ಯಕಾಂತಿ, 586 ಹೆಕ್ಟೇರ್ ಹತ್ತಿ, 694 ಹೆಕ್ಟೇರ್ ಮೆಕ್ಕೆಜೋಳ, 232 ಹೆಕ್ಟೇರ್ ಸಜ್ಜೆ, 129 ಹೆಕ್ಟೇರ್ ಕಿರುಧಾನ್ಯ, 128 ಹೆಕ್ಟೇರ್ ಜೋಳ ಹಾಗೂ 129 ಹೆಕ್ಟೇರ್ ಕಬ್ಬು ಸೇರಿದಂತೆ ವಿವಿಧ ಬೆಳೆಗಳು ಬಿತ್ತನೆಯಾಗಿವೆ.
ತುಂಗಭದ್ರಾ ಜಲಾಶಯದ ನೀರಿನ ಲಭ್ಯತೆಯನ್ನು ಪರಿಶೀಲಿಸಿ, ಸಾಧ್ಯವಾದಷ್ಟು ಬೇಗ ಎಚ್ಎಲ್ಸಿ, ಎಲ್ಎಲ್ಸಿ ಕಾಲುವೆಗಳಿಗೆ ನೀರು ಹರಿಸಬೇಕು. ಬರ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಸರ್ಕಾರ ವಿಶೇಷ ಪರಿಹಾರ ಕ್ರಮ ಕೈಗೊಳ್ಳಬೇಕು. ಬೆಳೆ ನಷ್ಟ ಸಂಭವಿಸಿದರೆ ಸಮರ್ಪಕ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ಭತ್ತ, ಮೆಣಸಿನಕಾಯಿ ಬೆಳೆಯಲು ಲಕ್ಷಾಂತರ ರುಪಾಯಿ ವೆಚ್ಚ ಮಾಡಿ ಬೀಜ ಖರೀದಿಸಿ ಸಸಿ ಸಿದ್ಧಪಡಿಸಿಕೊಂಡಿದ್ದೇವೆ. ಜಮೀನು ಸಿದ್ಧತೆ, ಗೊಬ್ಬರ, ಕೂಲಿ ಸೇರಿದಂತೆ ಸಾಕಷ್ಟು ಹಣ ಹೂಡಿಕೆ ಮಾಡಿದ್ದೇವೆ. ಆದರೆ ಮಳೆಯ ಕೊರತೆ ಮತ್ತು ಕಾಲುವೆಗಳಿಗೆ ನೀರು ಹರಿಯದ ಕಾರಣ ಬಿತ್ತನೆ ಕಾರ್ಯ ಸ್ಥಗಿತಗೊಂಡಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಇಲ್ಲಿವರೆಗೆ ಮಾಡಿದ ಹೂಡಿಕೆಯೆಲ್ಲ ವ್ಯರ್ಥವಾಗಿ, ಭಾರೀ ನಷ್ಟ ಅನುಭವಿಸುವ ಪರಿಸ್ಥಿತಿ ಎದುರಾಗಲಿದೆ ಎನ್ನುತ್ತಾರೆ ರೈತ ನಾರಾಯಣ ಸ್ವಾಮಿ.