ಕನ್ನಡಪ್ರಭ ವಾರ್ತೆ ನಾಪೋಕ್ಲು (ಕೊಡಗು)
ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಕೇರಳ ರಾಜ್ಯದ ಕೊಯಿಕೊಡು ನಾದಾಪುರಂ ಗ್ರಾಮದ ಶರಣ್ಯ ಪತ್ತೆಗೆ ಶನಿವಾರವೂ ಕಾರ್ಯಾಚರಣೆ ಮುಂದುವರೆಯಿತು. ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಶ್ವಾನದಳ ಸೇರಿದಂತೆ ಸಾರ್ವಜನಿಕರು ಕೂಡಾ ಕಾರ್ಯಾಚರಣೆ ನಡೆಸುತ್ತಿದ್ದು, ಯುವತಿಯ ಬಗ್ಗೆ ಯಾವುದೇ ಸುಳಿವು ಸಿಗಲಿಲ್ಲ. ಯುವತಿಯ ಕುಟುಂಬಸ್ಥರು ವಿರಾಜಪೇಟೆ ಕ್ಷೇತ್ರದ ಶಾಸಕ ಎ ಎಸ್ ಪೊನ್ನಣ್ಣ ಅವರನ್ನ ಭೇಟಿ ಮಾಡಿದ್ದಾರೆ. ಕಾರ್ಯಾಚರಣೆ ಚುರುಕುಗೊಳಿಸಲು ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕ ಎ ಎಸ್ ಪೊನ್ನಣ್ಣ ಸೂಚನೆ ನೀಡಿದ್ದಾರೆ. ಡ್ರೋನ್ ಕ್ಯಾಮೆರಾ ಶ್ವಾನದಳದೊಂದಿಗೆ ಪೊಲೀಸ್ ಹಾಗೂ ಅರಣ್ಯ ಇಲಾಖೆಯ 4 ತಂಡಗಳಿಂದ ಬಿರುಸಿನ ಶೋಧ ಕಾರ್ಯ ನಡೆಯುತ್ತಿದೆ. ಮೊಬೈಲ್ ಸಿಮ್ ಟ್ರ್ಯಾಕಿಂಗ್ ಲೊಕೇಶನ್ ಮೂಲಕವೂ ಹುಡುಕಾಟ ನಡೆಯುತ್ತಿದೆ. ಕಳೆದ ಮೂರು ದಿನಗಳಿಂದ ಶೋಧ ಕಾರ್ಯದಲ್ಲಿ ಸಿಬ್ಬಂದಿ ನಿರತರಾಗಿದ್ದಾರೆ. ತಡಿಯಂಡಮೋಳ್ ಬೆಟ್ಟಕ್ಕೆ ಎಎನ್ಎಫ್ ತಂಡ ಆಗಮಿಸಿದ್ದು, ಕಾರ್ಯಾಚರಣೆ ನಡೆಸುತ್ತಿದೆ.