ಕನ್ನಡಪ್ರಭ ವಾರ್ತೆ ತುಮಕೂರುಹೇಮಾವತಿ ನಾಲೆಯಿಂದ ಬುಗುಡನಹಳ್ಳಿಯಲ್ಲಿ ಸಂಗ್ರಹವಾಗುವ ನೀರು ಮುಂದಿನ 8 ತಿಂಗಳ ಕಾಲ ನಗರಕ್ಕೆ ಪೂರೈಕೆ ಮಾಡಬಹುದಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ತಿಳಿಸಿದರು. ತುಮಕೂರು ನಗರದ ಬುಗುಡನಹಳ್ಳಿ ಕೆರೆಗೆ ಅಧಿಕಾರಿಗಳೊಂದಿಗೆ ಸೋಮವಾರ ಭೇಟಿ ನೀಡಿದ ನಂತರ ನಗರದ ಎಂ.ಜಿ.ಸ್ಟೇಡಿಯಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಗೊರೂರು ಜಲಾಶಯದಿಂದ ಹೇಮಾವತಿ ನಾಲೆಗೆ ಮೇ 23 ರಂದು ನೀರು ಹರಿಯಬಿಟ್ಟಿದ್ದು, ಮೇ 25 ರ ರಾತ್ರಿ ಬುಗಡನಹಳ್ಳಿ ಕೆರೆಗೆ ನೀರು ತಲುಪಿದೆ. ನಗರದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಹಾಸನದಲ್ಲಿ ಇತ್ತೀಚೆಗೆ ಜರುಗಿದ ನೀರಾವರಿ ಸಮಿತಿ ನಿರ್ಣಯದಂತೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ತುಮಕೂರಿಗೆ ಗೊರೂರು ಜಲಾಶಯದಿಂದ ನೀರು ಹರಿಸಲಾಗಿದೆ. ಮುಂದಿನ ೫೦ ದಿನಗಳಿಗೆ ಮಾತ್ರ ಪೂರೈಕೆ ಮಾಡುವಷ್ಟು ಕೆರೆಯಲ್ಲಿ ನೀರು ಲಭ್ಯವಿತ್ತು. ಮುಂದಾಲೋಚನೆಯಿಂದ ಕೆರೆಗೆ ನೀರು ಹರಿಸಲಾಗಿದೆ ಎಂದು ತಿಳಿಸಿದರು. ಹೇಮಾವತಿ ನೀರನ್ನು ಬುಗುಡನಹಳ್ಳಿ ಕೆರೆಯಲ್ಲಿ ಸಂಗ್ರಹಿಸಿ ಶುದ್ಧೀಕರಿಸಿ ನಾಗರಿಕರಿಗೆ ಪೂರೈಕೆ ಮಾಡಲಾಗುವುದು. ಹೇಮಾವತಿ ಜಲಾಶಯದಿಂದ ಪ್ರತಿ ದಿನ 2 ಟಿಎಂಸಿ ನೀರನ್ನು ಹರಿಸಲು ನೀರಾವರಿ ಸಲಹಾ ಸಮಿತಿಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಮುಂದಿನ 8 ದಿನಗಳಲ್ಲಿ ಕೆರೆ ಭರ್ತಿಯಾಗಲಿದ್ದು, ಕೆರೆ ಭರ್ತಿಯಾದ ನಂತರ ಹೆಬ್ಬಾಕ, ನರಸಾಪುರ, ಅಮಾನಿಕೆರೆಗೆ ನೀರನ್ನು ತುಂಬಿಸುವ ಪ್ರಯತ್ನ ಮಾಡಲಾಗುವುದು. ಪ್ರಸಕ್ತ ವರ್ಷ ಅವಧಿಗೂ ಮುನ್ನವೇ ಮಳೆಗಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆಯಾಗದು ಎಂದು ಹೇಳಿದರು. ಪ್ರಸಕ್ತ ವರ್ಷ ಗ್ರಾಮೀಣ ಪ್ರದೇಶ ಹಾಗೂ ನಗರ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ತಲೆದೋರದಂತೆ ಜಿಲ್ಲಾಡಳಿತದಿಂದ ಈಗಾಗಲೇ ಸಭೆಗಳನ್ನು ನಡೆಸಿ ನೀಲನಕ್ಷೆಯನ್ನು ಸಿದ್ಧಪಡಿಸಿ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಜಿಲ್ಲಾ ಕೇಂದ್ರ ಸ್ಥಾನದಲ್ಲಿ 35 ಲಕ್ಷ ರು.ಗಳ ವೆಚ್ಚದಲ್ಲಿ ಅಲಂಕಾರಿಕ ಮೀನುಗಳ ಪ್ರದರ್ಶನಕ್ಕಾಗಿ ಮತ್ಸ್ಯಾಲಯವನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ. ವಿಶೇಷವಾಗಿ ಶಾಲಾ ಮಕ್ಕಳನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಮತ್ಸ್ಯಾಲಯವನ್ನು ನಿರ್ಮಿಸಲಾಗುತ್ತಿದೆ. ವಿವಿಧ ಜಾತಿಯ ಮೀನುಗಳ ಪರಿಚಯ, ಅಧ್ಯಯನಕ್ಕಾಗಿ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಲಿದೆ. ಸದ್ಯದಲ್ಲಿಯೇ ಈ ಮತ್ಸ್ಯಾಲಯವನ್ನು ಉದ್ಘಾಟಿಸಲಾಗುವುದು ಎಂದು ತಿಳಿಸಿದರು. ಬುಗುಡನಹಳ್ಳಿ ಕೆರೆಯಲ್ಲಿ ಬೆಳೆದಿರುವ ಜಾಲಿಗಿಡ, ಜಂಗಲ್, ಗಿಡ-ಗಂಟೆಗಳನ್ನು ಕೂಡಲೇ ತೆರವುಗೊಳಿಸಲು ಕ್ರಮಕೈಗೊಳ್ಳಬೇಕು. ಕೆರೆಗೆ ಯಾವುದೇ ಕಲುಷಿತ ನೀರು ಸೇರದಂತೆ ಎಚ್ಚರಿಕೆವಹಿಸಬೇಕು ಎಂದು ಪಾಲಿಕೆ ಆಯುಕ್ತ ಅಶ್ವಿಜ ಅವರಿಗೆ ನಿರ್ದೇಶನ ನೀಡಿದರು. ನರಸಾಪುರ ಗೇಟ್ನಿಂದ ಜಲಸಂಗ್ರಹಾಗಾರಕ್ಕೆ ಸೇರುವ ರಸ್ತೆಯನ್ನು ಅಗಲೀಕರಣಗೊಳಿಸಬೇಕು. ಕೆರೆ ಏರಿ ಮೇಲೆ ತಿರುಗಾಡಲು ಅನುಕೂಲ ಮಾಡಿಕೊಡಬೇಕು ಎಂದು ಸ್ಥಳೀಯ ಗ್ರಾಮಸ್ಥರು ಸಚಿವರಿಗೆ ಮನವಿ ಮಾಡಿದರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಗೊರೂರು ಜಲಾಶಯದಿಂದ ಮೇ 23 ರಿಂದ ಹೇಮಾವತಿ ನಾಲೆಗೆ ನೀರು ಹರಿಸಲಾಗಿದ್ದು, ಮೇ 25 ರಾತ್ರಿ 11.15 ಗಂಟೆಗೆ ತುಮಕೂರಿಗೆ ನೀರು ತಲುಪಿದೆ. ಸಂಗ್ರಹವಾದ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪಾವಗಡ ಶಾಸಕ ಹೆಚ್.ವಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಹೇಮಾವತಿ ನಾಲಾ ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಸಿ. ಸಂಪತ್ ಕುಮಾರ್, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಎ.ಸಿ. ಶಿವಶಂಕರ್, ತೋಟಗಾರಿಕೆ ಉಪನಿರ್ದೇಶಕ ಶಾರದಮ್ಮ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ: ಗಿರೀಶ್ ಬಾಬುರೆಡ್ಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.