ಕನ್ನಡಪ್ರಭ ವಾರ್ತೆ ಬೆಂಗಳೂರು ಚೆಕ್ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೀಡಾ ಸಚಿವ ಬಿ.ನಾಗೇಂದ್ರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನುರಹಿತ ವಾರಂಟ್ ಜಾರಿ ಮಾಡಿದೆ. ವಿಎಸ್ಎಲ್ ಸ್ಟೀಲ್ ಕಂಪನಿ ವ್ಯವಸ್ಥಾಪಕ ರಾಘವೇಂದ್ರ ಘೋಡ್ಕೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಮುಂದಿನ ವಿಚಾರಣೆಯನ್ನು ಅ.31ಕ್ಕೆ ಮುಂದೂಡಿಕೆ ಮಾಡಿದೆ. ನ್ಯಾಯಾಲಯಕ್ಕೆ ಹಾಜರಾಗುವಂತೆ ಈಗಾಗಲೇ ಮೂರು ಬಾರಿ ಕೋರ್ಟ್ ಆದೇಶ ನೀಡಿತ್ತು. ಅದರೂ, ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಆದೇಶಿಸಿದೆ.