ಹುಬ್ಬಳ್ಳಿ:
ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಂಚಿತ ಆರ್.ಎಂ. ಕುಬೇರಪ್ಪ ಅವರು ಕಾಂಗ್ರೆಸ್ ವಿರುದ್ಧ ಈ ಹೋರಾಟ ಸಂಘಟಿಸುತ್ತಿದ್ದು, ಕಾಂಗ್ರೆಸ್-ಅಹಿಂದ ಹೋರಾಟಕ್ಕೆ ಹಾವೇರಿ ವೇದಿಕೆಯಾಗಲಿದೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕುಬೇರಪ್ಪ, ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಲು ಅಹಿಂದ ವರ್ಗದವರಾದ ನಾವು ಸಾಕಷ್ಟು ಶ್ರಮಿಸಿದ್ದೇವೆ. ಹಗಲಿರುಳು ದುಡಿದಿದ್ದೇವೆ. ಆದರೆ, ರಾಜ್ಯದಲ್ಲಿ ನಡೆಯಲಿರುವ ಪರಿಷತ್ನ ನಾಲ್ಕು ಸ್ಥಾನಗಳ ಚುನಾವಣೆ ಪೈಕಿ ಮೂರಲ್ಲಿ ಮೇಲ್ವರ್ಗದವರಿಗೆ ನೀಡಲಾಗಿದೆ. ಅಹಿಂದ ವರ್ಗಕ್ಕೆ ನೀಡಿಯೇ ಇಲ್ಲ. ಎಲ್ಲಿದೆ ಸಾಮಾಜಿಕ ನ್ಯಾಯ? ಎಂದು ಪ್ರಶ್ನಿಸಿದರು.ಕಳೆದ ಬಾರಿ ಕಾಂಗ್ರೆಸ್ ಅಧಿಕಾರದಲ್ಲಿ ಇರಲಿಲ್ಲ. ಆಗ ನನಗೆ ಟಿಕೆಟ್ ನೀಡಿ ಕಣಕ್ಕಿಳಿಸಿದ್ದರು. ನಾನಾಗ 15 ಸಾವಿರಕ್ಕೂ ಅಧಿಕ ಮತ ಪಡೆದಿದ್ದೆ. ಆದರೆ, ಈಗ ಪಕ್ಷ ಅಧಿಕಾರದಲ್ಲಿದೆ. ನನಗೆ ಟಿಕೆಟ್ ಕೊಟ್ಟಿಲ್ಲ. ನನಗೆ ಟಿಕೆಟ್ ನೀಡದಿರಲು ಕಾರಣವೇನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ಈ ಎಲ್ಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಾವೇರಿಯಲ್ಲಿ ಫೆ.13ರಂದು ನಡೆಯಲಿರುವ ಸಾವಿರ ದಿನದ ಸಾಧನಾ ಸಮಾವೇಶದಲ್ಲಿ ನಾವು ಸಾವಿರ ಅಹಿಂದ ಹೋರಾಟಗಾರರನ್ನು ಜತೆಗೂಡಿಸಿಕೊಂಡು ಪ್ರತಿಭಟನಾ ಸಮಾವೇಶ ನಡೆಸುತ್ತೇವೆ. ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಾರೆ. ಆದರೆ, ಎಲ್ಲಿದೆ ಸಾಮಾಜಿಕ ನ್ಯಾಯ. ಇದನ್ನು ಸರಿಪಡಿಸಿದರೆ ಉತ್ತಮ. ಇಲ್ಲದಿದ್ದಲ್ಲಿ ನಿಮ್ಮೊಂದಿಗೆ ನಾವು ಇರಲ್ಲ ಎಂದು ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಡಾ. ಎಸ್.ಜಿ. ಸೋನೇಖಾನ್ ಇದ್ದರು.