ಶಿರಸಿ: ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಡಿ. ೩ಮತ್ತು ೪ ರಂದು ಶಿರಸಿ ನಗರದ ನೆಮ್ಮದಿಯ ರಂಗಧಾಮದಲ್ಲಿ ಅದ್ಧೂರಿಯಾಗಿ ಮತ್ತು ಅಚ್ಚುಕಟ್ಟಾಗಿ ಆಯೋಜಿಸಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಶಿರಸಿಯಲ್ಲಿ ೨೫ ವರ್ಷಗಳ ನಂತರ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಎಲ್ಲ ಇಲಾಖೆ ಅಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.
ಸಮ್ಮೇಳನದ ದಿನ ಮಾರಿಕಾಂಬಾ ದೇವಸ್ಥಾನದಿಂದ ಮೆರವಣಿಗೆ ಪ್ರಾರಂಭವಾಗಲಿದೆ. ಸ್ತಬ್ಧ ಚಿತ್ರಗಳ ಮೆರವಣಿಗೆಯೂ ನಡೆಯಲಿದೆ. ಊಟೋಪಚಾರ ವ್ಯವಸ್ಥೆ ಸೇರಿದಂತೆ ಯಾವುದೇ ಲೋಪದೋಷಗಳು ಆಗದಂತೆ ನೋಡಿಕೊಳ್ಳಬೇಕು. ಸಮಿತಿಯಲ್ಲಿರುವ ಸದಸ್ಯರು ತಮ್ಮ ಜವಾಬ್ದಾರಿಯನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸಬೇಕು. ಸಮ್ಮೇಳನಕ್ಕೆ ಸರ್ಕಾರದಿಂದ ₹೩ ಲಕ್ಷ ಅನುದಾನ ಬರಲಿದೆ. ₹೧೭ ಲಕ್ಷ ಖರ್ಚಾಗಬಹುದು ಎಂದು ಅಂದಾಜಿಸಲಾಗಿದೆ. ಎಲ್ಲರ ಸಹಕಾರ ಅಗತ್ಯವಿದೆ. ೨೫ ವರ್ಷಗಳ ನಂತರ ಶಿರಸಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಅತ್ಯಂತ ಸಂತಸದ ಸಂಗತಿಯಾಗಿದೆ. ಕನ್ನಡ ಹಬ್ಬವನ್ನು ಅತ್ಯಂತ ಯಶಸ್ವಿಯಾಗಿ ನಡೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸಮ್ಮೆಳನಾಧ್ಯಕ್ಷರ ಆಯ್ಕೆ ಮುಂದಿನ ದಿನಗಳಲ್ಲಿ ನಡೆಯಲಿದೆ ಎಂದರು.ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಮಾತನಾಡಿ. ಪಾರದರ್ಶಕವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಶಿರಸಿಯ ಸಾರ್ವಜನಿಕರ ಸಮ್ಮೇಳನವಾಗಬೇಕು. ಹಾಗಾಗಿ, ಎಲ್ಲರ ಸಹಕಾರ ಅಗತ್ಯವಿದೆ. ತಮ್ಮ ಮನೆಯ ಕಾರ್ಯಕ್ರಮ ಎಂದು ಭಾವಿಸಿ ಎಲ್ಲರೂ ಭಾಗವಹಿಸಬೇಕು. ಲಾಂಛನ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಸಹ ಶಿರಸಿಯಲ್ಲಿ ಶಾಸಕರ ನೇತೃತ್ವದಲ್ಲಿ ನಡೆಯಲಿದೆ ಎಂದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಶ್ರೀಧರ ಮುಂದಲಮನಿ, ಕಸಾಪ ಶಿರಸಿ ಘಟಕದ ಅಧ್ಯಕ್ಷ ಜಿ.ಸುಬ್ರಾಯ ಭಟ್ ಬಕ್ಕಳ, ಡಿಡಿಪಿಐ ಬಸವರಾಜ, ನಗರಸಭೆ ಪೌರಾಯುಕ್ತ ಕಾಂತರಾಜ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಗದೀಶ್ ಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ನಾಯ್ಕ, ಜಿಲ್ಲಾ ಕಸಾಪ ಕಾರ್ಯದರ್ಶಿ ಪಿ.ಆರ್.ನಾಯ್ಕ, ಜಾನಪದ್ ಪರಿಷತ್ ಜಿಲ್ಲಾಧ್ಯಕ್ಷ ಹಾಗೂ ಸ್ಕಾಡ್ವೆಸ್ನ ಡಾ. ವೆಂಕಟೇಶ್ ನಾಯ್ಕ ಹಾಗೂ ಕಸಾಪ ಶಿರಸಿ ಘಟಕದ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರು ಇದ್ದರು.