ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆಗೆ ಸೂಚನೆ

KannadaprabhaNewsNetwork |  
Published : Mar 08, 2024, 01:54 AM IST
7ಕೆಎಂಎನ್‌ಡಿ-6ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಪಾಲನೆ ಕುರಿತು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ, ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅಂತರ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. | Kannada Prabha

ಸಾರಾಂಶ

ಲೋಕಸಭಾ ಚುನಾವಣೆಯಲ್ಲಿ ಕಟ್ಟುನಿಟ್ಟಾಗಿ ಮಾದರಿ ನೀತಿಸಂಹಿತೆ ಪಾಲನೆ ಮಾಡಬೇಕಿದೆ. ಚಾಮರಾಜನಗರ, ಮಂಡ್ಯ ಜಿಲ್ಲೆಗಳನ್ನು ಸಂಪರ್ಕಿಸುವ ಗಡಿಭಾಗಗಳ ಚೆಕ್‌ ಪೋಸ್ಟ್ ಗಳಲ್ಲಿ ಪರಿಣಾಮಕಾರಿಯಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಪರಸ್ಪರ ಸಮನ್ವಯ ಸಹಕಾರದಿಂದ ಅತ್ಯಂತ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ಜಿಲ್ಲೆಗಳ ಗಡಿಭಾಗಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣಾ ಕಾರ್ಯವನ್ನು ಕೈಗೊಳ್ಳುವಂತೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕೊಳ್ಳೇಗಾಲ ತಾಲೂಕಿನ ಭರಚುಕ್ಕಿಯ ಮಯೂರ ಸಭಾಂಗಣದಲ್ಲಿ ಗುರುವಾರ ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಪಾಲನೆ ಕುರಿತು ನಡೆದ ಅಂತರ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಉಭಯ ಜಿಲ್ಲಾಧಿಕಾರಿಗಳು ಮಾತನಾಡಿದರು.

ಲೋಕಸಭಾ ಚುನಾವಣೆಯಲ್ಲಿ ಕಟ್ಟುನಿಟ್ಟಾಗಿ ಮಾದರಿ ನೀತಿಸಂಹಿತೆ ಪಾಲನೆ ಮಾಡಬೇಕಿದೆ. ಚಾಮರಾಜನಗರ, ಮಂಡ್ಯ ಜಿಲ್ಲೆಗಳನ್ನು ಸಂಪರ್ಕಿಸುವ ಗಡಿಭಾಗಗಳ ಚೆಕ್‌ ಪೋಸ್ಟ್ ಗಳಲ್ಲಿ ಪರಿಣಾಮಕಾರಿಯಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಪರಸ್ಪರ ಸಮನ್ವಯ ಸಹಕಾರದಿಂದ ಅತ್ಯಂತ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಬೇಕೆಂದು ತಿಳಿಸಿದರು.

ಜಿಲ್ಲೆಗಳ ಗಡಿ ಭಾಗದಲ್ಲಿ ಬರುವ ಚೆಕ್‌ ಪೋಸ್ಟ್ ಗಳು 24*7 ಅವಧಿಯಲ್ಲೂ ಕಾರ್ಯನಿರ್ವಹಿಸಬೇಕು. ವ್ಯಾಪಕವಾಗಿ ವಾಹನಗಳ ತಪಾಸಣೆ ಮಾಡಬೇಕು. ಗೂಡ್ಸ್ ವಾಹನಗಳಲ್ಲಿ ಸಾಗಿಸಲಾಗುವ ಸಾಮಗ್ರಿಗಳನ್ನು ಪರಿಶೀಲಿಸಬೇಕು. ಸೂಕ್ತ ದಾಖಲೆಗಳು ಇವೆಯೇ ಎಂದು ಪರಿಶೀಲಿಸಬೇಕು. ವಾಣಿಜ್ಯ ತೆರಿಗೆ ಅಧಿಕಾರಿಗಳ ತಂಡ ಸಹ ಸಂಪೂರ್ಣವಾಗಿ ಪರಿಶೀಲನೆ ಮಾಡಬೇಕು ಎಂದರು.

ಚೆಕ್‌ ಪೋಸ್ಟ್ ಗಳಲ್ಲಿ ದಾಖಲೆ ಇಲ್ಲದೆ ಸಾಗಿಸಲಾಗುವ ಹಣ, ಅಕ್ರಮ ಮದ್ಯ, ಆಮಿಷ ಉಡುಗೊರೆ ವಸ್ತುಗಳು ಕಂಡು ಬಂದಲ್ಲಿ ಕೂಡಲೇ ಕ್ರಮ ಜರುಗಿಸಬೇಕು. ಎರಡು ಜಿಲ್ಲೆಗಳ ಅಧಿಕಾರಿಗಳು ಸೂಕ್ತ ಮಾಹಿತಿ ವಿನಿಮಯ ಮಾಡಿಕೊಂಡು ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಉಭಯ ಜಿಲ್ಲೆಗಳ ಗಡಿ ಭಾಗಗಳಲ್ಲಿ ವಿಶೇಷ ಕಣ್ಗಾವಲು ಇರಬೇಕು. ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣಾ ಪ್ರಕ್ರಿಯೆಗೆ ಪೂರಕವಾಗುವಂತೆ ಹಾಗೂ ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಚಾಮರಾಜನಗರ ಜಿಲ್ಲೆಯ ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ, ಮಂಡ್ಯ ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಉಭಯ ಜಿಲ್ಲೆಗಳ ಅಬಕಾರಿ, ಕಂದಾಯ, ಪೊಲೀಸ್, ಸಹಾಯಕ ಚುನಾವಣಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''