ಕನ್ನಡಪ್ರಭ ವಾರ್ತೆ ಬೆಂಗಳೂರು
ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಬಳಸುವ ಸಂಬಂಧ ಸಭೆ ನಡೆಸಿದ್ದ ಬಿಬಿಎಂಪಿ ಮುಖ್ಯ ಆಯುಕ್ತರು ನಗರದ ವಾಣಿಜ್ಯ ಮಳಿಗೆಗಳು, ಅಂಗಡಿ ಮುಂಗಟ್ಟುಗಳು ಹಾಗೂ ಎಲ್ಲ ವಲಯದ ಉದ್ದಿಮೆಗಳನ್ನು ಜನವರಿ 15ರ ಒಳಗೆ ಸರ್ವೇ ನಡೆಸಿ ನೋಟಿಸ್ ನೀಡುವಂತೆ ಸೂಚಿಸಿದ್ದರು. ಅದರಂತೆ ಕಳೆದ ಒಂದು ವಾರದಲ್ಲಿ ಬಿಬಿಎಂಪಿಯ ಆರೋಗ್ಯಾಧಿಕಾರಿಗಳು ಪರಿಶೀಲಿಸಿ ನೋಟಿಸ್ ನೀಡಲು ಆರಂಭಿಸಿದ್ದಾರೆ.
ಈವರೆಗೆ ನಗರದಲ್ಲಿ ಒಟ್ಟು 18,886 ವಾಣಿಜ್ಯ ವ್ಯಾಪಾರಿಗಳಿಗೆ ನೋಟಿಸ್ ನೀಡಲಾಗಿದೆ. ಈ ಪೈಕಿ ಮಹದೇವಪುರ ಮತ್ತು ಬೊಮ್ಮನಹಳ್ಳಿ ವಲಯದಲ್ಲಿ 3 ಸಾವಿರಕ್ಕೂ ಅಧಿಕ ನೋಟಿಸ್ ನೀಡಲಾಗಿದೆ. ಆರ್ಆರ್ನಗರ ವಲಯದಲ್ಲಿ ಕೇವಲ 324 ನೋಟಿಸ್ ನೀಡಲಾಗಿದೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗ ಮುಖ್ಯ ಆರೋಗ್ಯಾಧಿಕಾರಿ ಡಾ। ಸೈಯದ್ ಸಿರಾಜುದೀನ್ ಮದಿನಿ ಮಾಹಿತಿ ನೀಡಿದ್ದಾರೆ.ನಾಮಫಲಕದಲ್ಲಿ ಶೇ.60ರಷ್ಟು ಕಡ್ಡಾಯವಾಗಿ ಕನ್ನಡ ಭಾಷೆ ಬಳಕೆ ಮಾಡಬೇಕು. ಇಲ್ಲವಾದರೆ, ಉದ್ದಿಮೆ ರದ್ದುಪಡಿಸುವುದು ಹಾಗೂ ಉದ್ದಿಮೆ ಮುಚ್ಚುವುದಾಗಿ ನೋಟಿಸ್ನಲ್ಲಿ ಎಚ್ಚರಿಕೆ ನೀಡಲಾಗುತ್ತಿದೆ.ಇನ್ನೊಂದು ದಿನ ಬಾಕಿ:
ಈ ಕುರಿತು ವಿವರಣೆ ನೀಡಿದ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್ ಚಂದ್ರ, ನಗರದಲ್ಲಿ 50 ಸಾವಿರಕ್ಕೂ ಅಧಿಕ ವಾಣಿಜ್ಯ-ವ್ಯಾಪಾರಿಗಳಿದ್ದು, ಕನ್ನಡ ನಾಮಫಲಕ ಬಳಸದ 18 ಸಾವಿರಕ್ಕೂ ಅಧಿಕ ಮಂದಿಗೆ ನೋಟಿಸ್ ನೀಡಲಾಗಿದೆ. ಉಳಿದವರು ಕನ್ನಡ ನಾಮಫಲಕ ಅಳವಡಿಕೆ ಮಾಡಿಕೊಂಡಿದ್ದಾರೆ. ಕನ್ನಡ ನಾಮಫಲಕ ಅಳವಡಿಕೆ ಮಾಡಿಕೊಳ್ಳದಿದ್ದರೆ ಉದ್ದಿಮೆ ಪರವಾನಗಿ ರದ್ದುಪಡಿಸುವ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.