ಅನಧಿಕೃತ ಕಟ್ಟಡ ಕಾನೂನು ವ್ಯಾಪ್ತಿಯಲ್ಲಿ ಸಕ್ರಮಕ್ಕೆ ಸೂಚನೆ

KannadaprabhaNewsNetwork | Published : Dec 24, 2023 1:45 AM

ಸಾರಾಂಶ

ಹತ್ತು ಹಲವು ವರ್ಷಗಳ ಹಿಂದೆಯೇ ಕಟ್ಟಡ, ಮನೆಗಳನ್ನು ನಿರ್ಮಿಸಿಕೊಂಡಿದ್ದರೂ ಕೂಡ ಅಂಥ ಕುಟುಂಬಗಳಿಗೆ ಇದುವರೆಗೂ ಹಕ್ಕುಪತ್ರ ನೀಡಲಾಗಿಲ್ಲ. ಹಕ್ಕುಪತ್ರ ನೀಡಿ, ಮನೆಗಳನ್ನು ಸಕ್ರಮಗೊಳಿಸಲು ಕಾನೂನಿನಲ್ಲಿ ಅವಕಾಶ ಇದ್ದರೂ ಸಹ ಈ ಕುರಿತು ಇದುವರೆಗೂ ಯಾರೊಬ್ಬರೂ ಗಮನ ಹರಿಸಿಲ್ಲ. ಇದರಿಂದಾಗಿ ತಾಲೂಕಿನಲ್ಲಿ ಸಾವಿರಾರು ಕುಟುಂಬಗಳು ಅತಂತ್ರ ಸ್ಥಿತಿಯಲ್ಲಿವೆ. ಕೂಡಲೇ ಎಲ್ಲ ಪಿಡಿಒಗಳೊಂದಿಗೆ ಸಭೆ ನಡೆಸಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಅನಧಿಕೃತ ಮನೆಗಳ ಬಗೆಗೆ ಸ್ಪಷ್ಟ ಮಾಹಿತಿ ಸಂಗ್ರಹಿಸಿ ಎಂದು ತಹಸೀಲ್ದಾರ್ ರೇಣುಕವ್ವಗೆ ಶ್ರೀನಿವಾಸ ಮಾನೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಹಾನಗಲ್ಲ

ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಮತ್ತು ಖಾಸಗಿ ಸರ್ವೆ ನಂಬರ್ ಜಮೀನುಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ೧೩,೬೨೨ ಕಟ್ಟಡ, ಮನೆಗಳಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಕಾನೂನು ವ್ಯಾಪ್ತಿಯಲ್ಲಿ ಹಕ್ಕುಪತ್ರ ನೀಡಿ ಸಕ್ರಮಗೊಳಿಸಲು ಶಾಸಕ ಶ್ರೀನಿವಾಸ ಮಾನೆ ತಾಲೂಕು ತಹಶೀಲ್ದಾರ ಹಾಗೂ ಅಧಿಕಾರಿಗಳಿಗೆ ಸೂಚಿಸಿದರು.

ತಹಸೀಲ್ದಾರ ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಹತ್ತು ಹಲವು ವರ್ಷಗಳ ಹಿಂದೆಯೇ ಕಟ್ಟಡ, ಮನೆಗಳನ್ನು ನಿರ್ಮಿಸಿಕೊಂಡಿದ್ದರೂ ಕೂಡ ಅಂಥ ಕುಟುಂಬಗಳಿಗೆ ಇದುವರೆಗೂ ಹಕ್ಕುಪತ್ರ ನೀಡಲಾಗಿಲ್ಲ. ಹಕ್ಕುಪತ್ರ ನೀಡಿ, ಮನೆಗಳನ್ನು ಸಕ್ರಮಗೊಳಿಸಲು ಕಾನೂನಿನಲ್ಲಿ ಅವಕಾಶ ಇದ್ದರೂ ಸಹ ಈ ಕುರಿತು ಇದುವರೆಗೂ ಯಾರೊಬ್ಬರೂ ಗಮನ ಹರಿಸಿಲ್ಲ. ಇದರಿಂದಾಗಿ ತಾಲೂಕಿನಲ್ಲಿ ಸಾವಿರಾರು ಕುಟುಂಬಗಳು ಅತಂತ್ರ ಸ್ಥಿತಿಯಲ್ಲಿವೆ. ಕೂಡಲೇ ಎಲ್ಲ ಪಿಡಿಒಗಳೊಂದಿಗೆ ಸಭೆ ನಡೆಸಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಅನಧಿಕೃತ ಮನೆಗಳ ಬಗೆಗೆ ಸ್ಪಷ್ಟ ಮಾಹಿತಿ ಸಂಗ್ರಹಿಸಿ ಎಂದು ತಹಸೀಲ್ದಾರ್ ರೇಣುಕವ್ವಗೆ ಶ್ರೀನಿವಾಸ ಮಾನೆ ಸೂಚಿಸಿದರು.

ಹೊಸ ಕಂದಾಯ ಗ್ರಾಮ, ಉಪ ಗ್ರಾಮಗಳ ರಚನೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಸಲ್ಲಿಸಲಾಗಿರುವ ಪ್ರಸ್ತಾವನೆ ಯಾವ ಹಂತದಲ್ಲಿದೆ ಎನ್ನುವುದನ್ನು ಗಮನಿಸಿ. ಈಗಾಗಲೇ ಕೆಲ ಸರ್ಕಾರಿ ಜಮೀನು ಗ್ರಾಮ ಪಂಚಾಯಿತಿಗೆ ಹಸ್ತಾಂತರವಾಗಿರುವ ಬಗೆಗೆ ಮಾಹಿತಿ ಇದ್ದು, ಪರಿಶೀಲನೆ ಕೈಗೊಂಡು ಹಕ್ಕುಪತ್ರ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ ಎಂದೂ ಮಾನೆ ಸೂಚನೆ ನೀಡಿದರು.

ಗ್ರಾಮ ಲೆಕ್ಕಾಧಿಕಾರಿ ಹಾಗೂ ಪಿಡಿಒಗಳಿಂದ ವಿವರ ಮಾಹಿತಿ ಪಡೆದು, ಯಾವುದೇ ಮನೆಗಳೂ ಬಿಟ್ಟು ಹೋಗದಂತೆ ವರದಿ ಸಿದ್ಧಪಡಿಸಿ. ವರ್ಷದ ಒಳಗಾಗಿ ಹಕ್ಕುಪತ್ರ ರಹಿತ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕಾಳಜಿ ವಹಿಸಿ ಕೆಲಸ ನಿರ್ವಹಿಸಿ ಎಂದು ಶಾಸಕರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹಾನಗಲ್ ತಾಲೂಕಿನಲ್ಲಿ ೧೩,೬೨೨ ಕುಟುಂಬಗಳಿಗೆ ಮನೆಯ ಹಕ್ಕುಪತ್ರ ಇಲ್ಲ. ಈ ಎಲ್ಲ ಕುಟುಂಬಗಳಿಗೂ ಹಕ್ಕುಪತ್ರ ನೀಡುವ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ. ವರ್ಷದ ಒಳಗೆ ಹಕ್ಕುಪತ್ರ ವಿತರಿಸುವ ಗುರಿ ಹೊಂದಲಾಗಿದ್ದು, ಈ ವಿಚಾರದಲ್ಲಿ ಸಮಾರೋಪಾದಿಯಲ್ಲಿ ಲಸ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ತಾಪಂ ಇಒ ದೇವರಾಜ, ಸಹಾಯಕ ನಿರ್ದೇಶಕ ಚನ್ನಬಸಪ್ಪ ಹಾವಣಗಿ ಈ ಸಂದರ್ಭದಲ್ಲಿದ್ದರು.

Share this article