ಬೆಂಬಲ ಬೆಲೆ ಯೋಜನೆಯಡಿ ಬತ್ತ ಉತ್ಪನ್ನ ಖರೀದಿ ಕೇಂದ್ರ ಆರಂಭಕ್ಕೆ ಸೂಚನೆ

KannadaprabhaNewsNetwork |  
Published : Nov 11, 2023, 01:17 AM ISTUpdated : Nov 11, 2023, 01:18 AM IST
ರಘುನಂದನಮೂರ್ತಿ | Kannada Prabha

ಸಾರಾಂಶ

ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬತ್ತ ಉತ್ಪನ್ನ ಖರೀದಿ ಕೇಂದ್ರಗಳನ್ನು ಹಾವೇರಿ ಜಿಲ್ಲೆಯ ವಿವಿಧ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಆರಂಭಿಸುವಂತೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಸೂಚನೆ ನೀಡಿದರು.

ಹಾವೇರಿ: ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬತ್ತ ಉತ್ಪನ್ನ ಖರೀದಿ ಕೇಂದ್ರಗಳನ್ನು ಜಿಲ್ಲೆಯ ವಿವಿಧ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಆರಂಭಿಸುವಂತೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿದ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರ ನಿಗಧಿಪಡಿಸಿದ ಬೆಂಬಲ ಬೆಲೆಯಡಿ ಸರ್ಕಾರದ ಮಾರ್ಗಸೂಚಿ ಅನ್ವಯ ಎಫ್.ಎ.ಕ್ಯೂ. ಗುಣಮಟ್ಟ ಹೊಂದಿದ ಬತ್ತ ಖರೀದಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಬೆಂಬಲ ಬೆಲೆ ಯೋಜನೆಯಡಿ ಬತ್ತ ಖರೀದಿ ಕೇಂದ್ರವನ್ನು ಹಾನಗಲ್, ಶಿಗ್ಗಾಂವಿ, ಹಿರೇಕೆರೂರು ಮತ್ತು ರಾಣಿಬೆನ್ನರು ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ತೆರೆಯಲು ಸೂಚನೆ ನೀಡಿದರು.

ಬತ್ತವನ್ನು ಪ್ರತಿ ಎಕರೆಗೆ ೨೫ ಕ್ವಿಂಟಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ ೪೦ ಕ್ವಿಂಟಲ್ ಖರೀದಿಗೆ ಅವಕಾಶವಿದೆ. ರೈತರಿಂದ ಖರೀದಿಸಿದ ಮೊತ್ತವನ್ನು ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಯಾದ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಬೇಕು. ಖರೀದಿಸಿದ ೧೫ ದಿನದೊಳಗಾಗಿ ಹಣ ಪಾವತಿಯಾಗಬೇಕು ಎಂದು ಸೂಚನೆ ನೀಡಿದರು.

ಬೆಂಬಲ ಬೆಲೆಯಡಿ ಬತ್ತ ಖರೀದಿ ಕೇಂದ್ರ ಆರಂಭಿಸಿರುವ ಕುರಿತಂತೆ ವ್ಯಾಪಕ ಪ್ರಚಾರ ನಡೆಸಿ, ಕರಪತ್ರ, ಬ್ಯಾನರ್ ಅಳಡಿಸುವ ಮೂಲಕ ರೈತರಿಗೆ ಮಾಹಿತಿ ತಲುಪಿಸಬೇಕು. ರೈತರಿಂದ ಖರೀದಿಸಿದ ಬತ್ತ ಉತ್ಪನ್ನ ದಾಸ್ತಾನು ಮಾಡಿಕೊಳ್ಳಲು ಮುಂಜಾಗ್ರತಾ ಕ್ರಮವಾಗಿ ಉಗ್ರಾಣಗಳನ್ನು ಕಾಯ್ದಿರಿಸಬೇಕು ಎಂದು ಸೂಚನೆ ನೀಡಿದರು.

ನೋಡಲ್ ಅಧಿಕಾರಿಗಳ ನೇಮಕ: ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳ ಪ್ರಕ್ರಿಯೆ ಮೇಲೆ ನಿಗಾ ವಹಿಸಲು ಹಾಗೂ ವ್ಯವಸ್ಥಿತವಾಗಿ ಸುಗಮವಾಗಿ ನಡೆಸಲು ಆಯಾ ತಾಲೂಕು ತಹಸೀಲ್ದಾರ್ ಹಾಗೂ ಸಂಬಂಧಪಟ್ಟ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕರನ್ನು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಬೆಂಬಲ ಬೆಲೆ: ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಬತ್ತ-ಸಾಮಾನ್ಯ ಪ್ರತಿ ಕ್ವಿಂಟಲ್‌ಗೆ ₹೨,೧೮೩, ಬತ್ತ -ಗ್ರೇಡ್ ಎ ಪ್ರತಿ ಕ್ವಿಂಟಲ್‌ಗೆ ₹೨,೨೦೩ರಂತೆ ಸರ್ಕಾರ ಆದೇಶ ಹೊರಡಿಸಿದೆ. ನ. ೧೫ರಿಂದ ಡಿ. ೩೧ರ ವರೆಗೆ ರೈತರ ನೋಂದಣಿ ಆರಂಭಕ್ಕೆ ಹಾಗೂ ೦೧-೧೨-೨೦೨೩ರಿಂದ ೩೧-೦೩-೨೦೨೪ರ ವರೆಗೆ ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಂಡಳಿ ನಿಯಮಿತ ಸಂಸ್ಥೆಯ ಮೂಲಕ ಖರೀದಿಸಲು ಆದೇಶಿಸಲಾಗಿದೆ ಎಂದರು.

ಬಿತ್ತನೆ ಪ್ರದೇಶ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬತ್ತ ೨೯,೧೩೦ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಹಾನಗಲ್ ತಾಲೂಕಿನಲ್ಲಿ ೧೪,೩೫೦ ಹೆಕ್ಟೇರ್, ಶಿಗ್ಗಾಂವಿ ತಾಲೂಕಿನಲ್ಲಿ ೪,೫೮೨, ರಾಣಿಬೆನ್ನೂರು ತಾಲೂಕಿನಲ್ಲಿ ೭,೭೮೦ ಹೆಕ್ಟೇರ್ ಹಾಗೂ ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕಿನಲ್ಲಿ ಕ್ರಮವಾಗಿ ೩೮೮ ಹಾಗೂ ೧,೪೯೫ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಂಟಿ ಕೈಷಿ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ತೋಟಗಾರಿಕೆ, ಸಹಕಾರಿ ಸಂಘಗಳ ಉಪನಿಬಂಧಕರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಶಾಖಾ ವ್ಯವಸ್ಥಾಪಕರು, ರಾಜ್ಯ ಉಗ್ರಾಣ ನಿಗಮದ ವ್ಯವಸ್ಥಾಪಕರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನಕ್ಷರತೆ ಬಾಲ್ಯ ವಿವಾಹ ಕೇಸ್‌ ರದ್ದತಿಗೆ ಆಧಾರವಾಗದು: ಕೋರ್ಟ್‌
ಕೆಎಸ್‌ಡಿಎಲ್‌ನಿಂದ ₹400ನ ಮಲ್ಲಿಗೆ ಸೋಪ್‌!