ರೋಣ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಮನರೇಗಾ) ಅಡಿಯಲ್ಲಿ ನೋಂದಾಯಿತ ಕುಟುಂಬಗಳ ಜಾಬ್ ಕಾರ್ಡ್ಗಳ ಇ- ಕೆವೈಸಿ ವ್ಯಾಲಿಡೇಶನನ್ನು ತುರ್ತಾಗಿ ಪೂರ್ಣಗೊಳಿಸಲು ರೋಣ ಮತ್ತು ಗಜೇಂದ್ರಗಡ ತಾಪಂ ಸಿಬ್ಬಂದಿ ಶ್ರಮ ವಹಿಸಬೇಕೆಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಬಿ. ಕಂದಕೂರ ಸೂಚಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ರೋಣ ಮತ್ತು ಗಜೇಂದ್ರಗಡ ತಾಲೂಕುಗಳ ಮನರೇಗಾ ಸಿಬ್ಬಂದಿಯ ಸಭೆಯನ್ನುದ್ದೇಶಿಸಿ ಮಾತನಾಡಿ, ಈ ಕಾರ್ಯಕ್ಕೆ ಎಲ್ಲ ನರೇಗಾ ಕೂಲಿಕಾರರು ಸಕ್ರಿಯವಾಗಿ ಭಾಗವಹಿಸಿ, ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದರು.ಮನರೇಗಾ ಯೋಜನೆಯ ಸಕ್ರಿಯ ಕೂಲಿಕಾರರ ಜಾಬ್ ಕಾರ್ಡ್ಗಳನ್ನು ಇ- ಕೆವೈಸಿ ಮೂಲಕ ಪರಿಶೀಲಿಸುವ ಕಾರ್ಯವು ತುರ್ತಾಗಿ ನಡೆಯುತ್ತಿದೆ. ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡ್ ವ್ಯಾಲಿಡೇಶನ್ ಅನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದರು.ಮನರೇಗಾ ಯೋಜನೆಯಡಿ ನೋಂದಾಯಿತ ಕೂಲಿಕಾರರ ಮಾಹಿತಿಯನ್ನು ಎನ್ಎಂಎಂಎಸ್(ನರೇಗಾ ಮೊಬೈಲ್ ಮಾನಿಟರಿಂಗ್ ಸಿಸ್ಟಮ್) ತಂತ್ರಾಂಶದಲ್ಲಿ ಇ- ಕೆವೈಸಿ ಮೂಲಕ ಅಪ್ಡೇಟ್ ಮಾಡಲಾಗುತ್ತಿದೆ. ಈಗಾಗಲೇ ಗ್ರಾಮ ಮಟ್ಟದಲ್ಲಿ ಜನರಿಗೆ ಈ ಕುರಿತು ಜಾಗೃತಿ ಮೂಡಿಸಲಾಗಿದ್ದು, ರೋಣ ಮತ್ತು ಗಜೇಂದ್ರಗಡ ತಾಲೂಕುಗಳ ನರೇಗಾ ಶಾಖೆಯ ಐಇಸಿ ವಿಭಾಗವು ತಯಾರಿಸಿದ ಧ್ವನಿ ಮುದ್ರಿಕೆಯನ್ನು ಕಸ ಸಂಗ್ರಹ ವಾಹನಗಳ ಮೂಲಕ ಪ್ರಸಾರ ಮಾಡಲು ಸೂಚಿಸಲಾಗಿದೆ ಎಂದರು.
ಗ್ರಾಮ ಪಂಚಾಯಿತಿ ಮಟ್ಟದ ಸಿಬ್ಬಂದಿಗೆ ಇ- ಕೆವೈಸಿ ಅಪ್ಡೇಟ್ ಕಾರ್ಯಕ್ಕೆ ತರಬೇತಿ ನೀಡಲಾಗಿದ್ದು, ಈ ಮೂಲಕ ಪ್ರಗತಿ ಸಾಧಿಸಲು ಸೂಚನೆ ನೀಡಲಾಗಿದೆ. ಆದರೆ, ಕೆಲವು ಗ್ರಾಮಗಳಲ್ಲಿ ಕೂಲಿಕಾರರು ವೈಯಕ್ತಿಕ ಕೆಲಸಕ್ಕಾಗಿ ಮನೆಯಿಂದ ಹೊರಗಡೆ ಇರುವುದರಿಂದ, ಮನೆ- ಮನೆ ಭೇಟಿಯ ಸಂದರ್ಭದಲ್ಲಿ ಮೇಟ್ಗಳು ಅಥವಾ ನರೇಗಾ ಸಿಬ್ಬಂದಿಗೆ ಅವರು ಲಭ್ಯವಾಗದಿರುವುದು ಇ- ಕೆವೈಸಿ ಪ್ರಕ್ರಿಯೆಯನ್ನು ನಿಧಾನಗೊಳಿಸಿದೆ. ಇದರಿಂದ ಭವಿಷ್ಯದಲ್ಲಿ ಕೂಲಿಕಾರರಿಗೆ ಕೆಲಸ ನೀಡುವಾಗ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ ಎಂದರು.ಗ್ರಾಮ ಪಂಚಾಯಿತಿಗಳಲ್ಲಿ ಇ- ಕೆವೈಸಿ ಪ್ರಕ್ರಿಯೆಯನ್ನು ಉಚಿತವಾಗಿ ನಡೆಸಲಾಗುತ್ತಿದ್ದು, ಮೇಟ್ಗಳ ಮೂಲಕವೂ ಈ ಸೌಲಭ್ಯವನ್ನು ಪಡೆಯಬಹುದು. ಇ- ಕೆವೈಸಿ ಯೋಜನೆಯು ಮನರೇಗಾ ಕಾರ್ಯಕ್ರಮದ ಪಾರದರ್ಶಕ ಅನುಷ್ಠಾನಕ್ಕೆ ಮಹತ್ವದ ಹೆಜ್ಜೆಯಾಗಿದೆ. ಆದ್ದರಿಂದ ಎಲ್ಲ ಕೂಲಿಕಾರರು ಮತ್ತು ಕಾಯಕ ಬಂಧುಗಳು ಕಡ್ಡಾಯವಾಗಿ ಇ- ಕೆವೈಸಿ ಅಪ್ಡೇಟ್ ಮಾಡಿಸಿಕೊಳ್ಳಬೇಕು ಎಂದರು.
ಹೆಚ್ಚಿನ ಮಾಹಿತಿಗಾಗಿ ಪಿಡಿಒ, ಕಾರ್ಯದರ್ಶಿ, ಡಿಇಒ, ಬಿಎಫ್ಟಿ, ಜಿಕೆಎಂ ಅವರನ್ನು ಸಂಪರ್ಕಿಸಲು ಸಿಬ್ಬಂದಿಗೆ ಸೂಚಿಸಲಾಗಿದೆ. ಈ ಅಭಿಯಾನವನ್ನು ಯಶಸ್ವಿಗೊಳಿಸಲು ಎಲ್ಲರೂ ಸಹಕರಿಸಬೇಕೆಂದರು. ಈ ವೇಳೆ ಮನರೇಗಾ ಸಿಬ್ಬಂದಿ ಇದ್ದರು.