ಹೊಸಕೋಟೆ: ಕೇಂದ್ರದಲ್ಲಿ ಯುಪಿಎ ಸರ್ಕಾರದ ನೇತೃತ್ವದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಜಾರಿಗೆ ತಂದಿದ್ದ ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆ ಹೆಸರನ್ನು ಬದಲಾಯಿಸಿ ಯೋಜನೆಯನ್ನೇ ಕಗ್ಗೊಲೆ ಮಾಡಲು ಕೇಂದ್ರ ಸರ್ಕಾರ ಹೊರಟಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಆರೋಪಿಸಿದರು.
ಪ್ರಧಾನಿ ಮೋದಿ ನರೇಗಾ ಯೋಜನೆಯನ್ನು ಕುರಿತು ಕಾಂಗ್ರೆಸ್ ದೇಶವನ್ನು ಅಭಿವೃದ್ದಿಪಡಿಸಿದ್ದರೆ ಜನರಿಗೆ ಗುಂಡಿ ತೋಡುವ ಕೆಲಸ ಕೊಡುವ ಯೋಜನೆ ಏಕೆ ಬೇಕಾಗಿತ್ತು ಎಂದು ಪ್ರಶ್ನಿಸಿದ್ದರು. ಮನರೇಗಾ ಕಾಂಗ್ರೆಸ್ ಸರ್ಕಾರದ ವೈಫಲ್ಯದ ಸ್ಮಾರಕವಾಗಿದ್ದು ಈ ಯೋಜನೆ ರದ್ದು ಮಾಡುವುದಿಲ್ಲ. ಅದು ಕಾಂಗ್ರೆಸ್ ಆಡಳಿತದ ದೌರ್ಬಲ್ಯಗಳ ನೆನೆಪಿಗಾಗಿ ಉಳಿಯಬೇಕು ಎಂದಿದ್ದರು. ಆದರೆ ಈಗ ಹೆಸರು ಬದಲಾಯಿಸಿ ಗ್ರಾಮಸಭೆಗಳ ಅಧಿಕಾರ ಕಡಿತಗೊಳಿಸಿ, ದೆಹಲಿ ಮಟ್ಟದಲ್ಲಿ ಯೋಜನೆಗಳನ್ನು ನಿರ್ಧರಿಸುತ್ತಿದೆ. ರಾಜ್ಯಗಳ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಹಾಕುತ್ತಿದೆ. ಆದ್ದರಿಂದ ಕೇಂದ್ರದ ಜನವಿರೋಧಿ ನೀತಿಗಳ ವಿರುದ್ಧ ಗ್ರಾಪಂ ಮಟ್ಟದಲ್ಲಿ ಸಭೆ ನಡೆಸಿ ಬೃಹತ್ ಹೋರಾಟ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದರು.
ಎಐಸಿಸಿ ಕರ್ನಾಟಕ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ತ ಮಾತನಾಡಿ, ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಮನರೇಗಾ ಯೋಜನೆ ಜಾರಿಗೊಳಿಸಿತ್ತು. ಅದರೆ ಈಗ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಯೋಜನೆಗಳ ಹೆಸರು ಬದಲಾಯಿಸಿ ಒಡೆದು ಆಳುವ ನೀತಿ ಅನುಸರಿಸಿ ಕೀಳು ಮಟ್ಟದ ರಾಜಕಾರಣ ಮಾಡುತ್ತಿದೆ. ಕೇಂದ್ರ ಸರ್ಕಾರ ಮನರೇಗಾ ಹೆಸರು ಬದಲಾವಣೆ ರಾಜಕೀಯ ಖಂಡನೀಯ. ಗ್ರಾಮೀಣರಿಗೆ ಹಾಗೂ ಬಡವರಿಗೆ ಅನುಕೂಲವಾಗಿದ್ದ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸದೆ ಹೆಸರು ಬದಲಾಯಿಸ ಹೊರಟಿದೆ. ಕೇಂದ್ರ ಸರ್ಕಾರದ ಈ ನಡೆ ವಿರೋಧಿಸಿ ಕಾಂಗ್ರೆಸ್ ಜ.28ರಂದು ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು ಕಾರ್ಯಕರ್ತರು ಬೆಂಬಲ ನೀಡಬೇಕು ಎಂದರು.ಗ್ರಾಪಂ ಅಧ್ಯಕ್ಷ ಮುತ್ಕೂರು ಸಂತೋಷ್, ಕಾಂಗ್ರೆಸ್ ಮುಖಂಡ ಬಿ.ಎಂ.ಪ್ರಕಾಶ್, ಬಿಎಂಆರ್ಡಿಎ ಅಧ್ಯಕ್ಷ ಕೇಶವಮೂರ್ತಿ, ಸದಸ್ಯ ಎಚ್.ಎಂ.ಸುಬ್ಬರಾಜ್ ಇತರರು ಹಾಜರಿದ್ದರು.
ಫೋಟೋ: 25 ಹೆಚ್ಎಸ್ಕೆಹೊಸಕೋಟೆ ತಾಲೂಕಿನ ಮುತ್ಕೂರು ಗ್ರಾಮಕ್ಕೆ ಭೇಟಿ ನೀಡಿದ್ದ ಎಐಸಿಸಿ ಕರ್ನಾಟಕ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ತ ನರೇಗಾದಡಿ ಅಭಿವೃದ್ಧಿ ಪಡಿಸಿರುವ ಕಲ್ಯಾಣಿಯನ್ನು ವೀಕ್ಷಿಸಿದರು. ಶಾಸಕ ಶರತ್ ಬಚ್ಚೇಗೌಡ ಇತರರಿದ್ದರು.