ಸವಣೂರು ತಾಲೂಕಿನ ಮಣ್ಣೂರ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಸವಣೂರಿನ ಕೀರ್ತಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಕೈಗೊಂಡ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರವನ್ನು ಉಪವಿಭಾಗಾಧಿಕಾರಿ ಶುಭಂ ಶುಕ್ಲಾ ಉದ್ಘಾಟಿಸಿದರು.
ಸವಣೂರು: ಪ್ರತಿಯೊಬ್ಬರಲ್ಲಿ ಸಮಾಜಸೇವೆಯ ಮನೋಭಾವನೆ ಬೆಳೆಸುವಂತ ಶಕ್ತಿ ಎನ್ಎಸ್ಎಸ್ ಯೋಜನೆಗಿದೆ. ಎಲ್ಲರೂ ಒಗ್ಗೂಡಿಕೊಂಡು ಕೆಲಸವನ್ನು ಶ್ರದ್ಧೆಯಿಂದ ಕೈಗೊಂಡಾಗ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದು ಉಪವಿಭಾಗಾಧಿಕಾರಿ ಶುಭಂ ಶುಕ್ಲಾ ಹೇಳಿದರು.
ತಾಲೂಕಿನ ಮಣ್ಣೂರ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಗ್ರಾಮಸ್ಥರ ಸಹಕಾರದಿಂದ ಸವಣೂರಿನ ಕೀರ್ತಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಕೈಗೊಂಡ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಉತ್ತಮ ಶಿಕ್ಷಣವನ್ನು ಪಡೆದುಕೊಂಡು ನಾನು ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡಿ ಹಣ ಗಳಿಸಬೇಕು ಎನ್ನುವಂತಹ ಮನೋಭಾವನೆಯನ್ನು ವಿದ್ಯಾರ್ಥಿ ಜೀವನದಲ್ಲಿ ಇಟ್ಟುಕೊಂಡಿದ್ದೆ. ಆದರೆ, ಪದವಿ ವ್ಯಾಸಂಗದ ಸಮಯದಲ್ಲಿ ಎನ್ಎಸ್ಎಸ್ ಶಿಬಿರದಲ್ಲಿ ಭಾಗವಹಿಸಿ ಸಾರ್ವಜನಿಕರೊಂದಿಗೆ ಬೆರೆತು ಅವರ ಕಷ್ಟಗಳನ್ನು ಅರ್ಥೈಸಿಕೊಂಡಾಗ ಸಾರ್ವಜನಿಕ ವಲಯದಲ್ಲಿ ಕೆಲಸವನ್ನು ಮಾಡಬೇಕು ಎನ್ನುವಂತಹ ಮನೋಭಾವನೆಯಿಂದ ನಾನು 18 ಭಾರತೀಯ ನಾಗರಿಕ ಸೇವಾ ಪರೀಕ್ಷೆಯನ್ನು ಎದುರಿಸಿದ್ದರೂ ಆಗಿರಲಿಲ್ಲ. 19ನೇ ಪರೀಕ್ಷೆಯಲ್ಲಿ ಉತ್ತಿರ್ಣನಾಗಿ ಕರ್ನಾಟಕ ರಾಜ್ಯದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿತು. ಇದಕ್ಕೆ ಎನ್ಎಸ್ಎಸ್ ಯೋಜನೆ ಪ್ರೇರಣೆಯಾಗಿದೆ ಎಂದರು.
ತಹಸೀಲ್ದಾರ್ ಭರತ್ರಾಜ ಕೆ.ಎನ್. ಮಾತನಾಡಿ, ಸಮಾಜ ಸುಧಾರಣೆ ಕಾಣಬೇಕಾದರೆ ವಿದ್ಯಾರ್ಥಿ ಜೀವನದಲ್ಲಿಯೇ ಒಳ್ಳೆಯ ಗುಣಗಳನ್ನು ಬೆಳೆಸಿಕೊಳ್ಳಬೇಕು. ಆಗ ಸದೃಢ ಭಾರತ ನಿರ್ಮಾಣ ಸಾಧ್ಯ ಎನ್ನುವ ಉದ್ದೇಶದಿಂದ ಮಹಾತ್ಮ ಗಾಂಧೀಜಿ ಅವರ ಜನ್ಮದಿನದ ಸವಿನೆನಪಿಗಾಗಿ ಕಾಲೇಜು ಹಂತದಲ್ಲಿಯೆ ರಾಷ್ಟ್ರೀಯ ಸೇವಾ ಯೋಜನೆಯನ್ನು ಜಾರಿಗೆ ತಂದು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಬೆಳೆಸಲಾಗುತ್ತಿದೆ ಎಂದರು.
ಗ್ರಾಪಂ ಸದಸ್ಯೆ ಪ್ರೇಮಾ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಪ್ರಾಚಾರ್ಯ ಮಾಲತೇಶ ದಾನಪ್ಪನವರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಧಾರವಾಡ ಕೆಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಎಸ್.ವೈ. ಪಾಟೀಲ, ಗ್ರಾಪಂ ಅಧ್ಯಕ್ಷೆ ರಾಧಕ್ಕ ಹರಿಜನ, ಸುರೇಶಗೌಡ ಪಾಟೀಲ, ಮಲ್ಲನಗೌಡ ಪಾಟೀಲ, ವಿದ್ಯಾಸಂಸ್ಥೆ ಅಧ್ಯಕ್ಷೆ ಶಶಿಕಲಾ ಪೊಲೀಸ್ಗೌಡ್ರ, ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಪೋಲಿಸಗೌಡ್ರ, ಫಕೀರಗೌಡ ಪೊಲೀಸ್ಗೌಡ್ರ, ಕಲಾವಿದ ವೀರಯ್ಯ ಸಂಕಿನಮಠ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.