ಕನ್ನಡಪ್ರಭ ವಾರ್ತೆ ಪಾವಗಡ
ರಾಷ್ಟ್ರಪ್ರೇಮದ ಜತೆಗೆ ಸ್ವಚ್ಛತೆ ಮತ್ತು ನೈರ್ಮಲ್ಯದ ಬಗ್ಗೆ ಅರಿವು ಮೂಡಿಸುವ ನಾಯಕತ್ವದ ಗುಣ ಬೆಳೆಸಿಕೊಳ್ಳುವಂತೆ ಕಾಯಕಯೋಗಿ ಶ್ರೀ ಸಿದ್ಧರಾಮೇಶ್ವರ ಸಂಘದ ಅಧ್ಯಕ್ಷ ಹಾಗೂ ಹಿರಿಯ ಮುಖಂಡ ವಡ್ಡರಹಟ್ಟಿ ದಾಸಭೋವಿ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಪಾವಗಡದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ವತಿಯಿಂದ ಶನಿವಾರ ತಾಲೂಕಿನ ಪಾಲಕುಂಟೆ ವಡ್ಡರಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ 2024- 25ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಎನ್ಎಸ್ಎಸ್ ಒಂದು ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ಈ ಶಿಬಿರವು ವಿದ್ಯಾರ್ಥಿಗಳಲ್ಲಿ ಶಿಸ್ತು, ಜಾಗೃತಿ,ಸ್ವಚ್ಛತೆ ಹಾಗೂ ದೇಶಭಕ್ತಿ ರೂಢಿಸಿಕೊಳ್ಳಲು ಹೆಚ್ಚು ಸಹಕಾರಿಯಾಗಿದೆ. ಪ್ರತಿ ವರ್ಷ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಿಂದ 7 ದಿನಗಳ ಕಾಲ ಶಿಬಿರ ಆಯೋಜಿಸಿ ತಾಲೂಕಿನ ಗಡಿ ಗ್ರಾಮಗಳಲ್ಲಿ ಸ್ವಚ್ಛತೆ ಹಾಗೂ ದೇಶಭಕ್ತಿ ಕುರಿತು ಅರಿವು ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್ಎಸ್ಎಸ್ ಘಟಕದ ಶಿಬಿರಾಧಿಕಾರಿ ಅರುಣ್ ಕುಮಾರ್ ಮಾತನಾಡಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಪ್ರತಿ ವರ್ಷ ಏಳು ದಿನಗಳ ಕಾಲ ತಾಲೂಕಿನ ಗಡಿ ಗ್ರಾಮಗಳಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರ ಆಯೋಜಿಸಲಾಗುತ್ತಿದ್ದು, ಏ.16 ರಿಂದ ಏ.22 ರವರೆಗೆ ಇಲ್ಲಿನ ಪಾಲಕುಂಟೆ ವಡ್ಡರಹಟ್ಟಿ ಗ್ರಾಮದಲ್ಲಿ ಎನ್ಎಸ್ಎಸ್ ಶಿಬಿರದ ಮೂಲಕ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಘಟಕದ ನಾಲ್ಕನೇ ದಿನದ ಕಾರ್ಯಕ್ರಮವಾಗಿದ್ದು, ಈಗಾಗಲೇ ಗ್ರಾಮದಲ್ಲಿ ಚರಂಡಿ, ನೈರ್ಮಲ್ಯ ಶುಚಿತ್ವ ಸೇರಿದಂತೆ ಶಾಲಾ ಅವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಗಿದೆ ಎಂದರು.
ಆರೋಗ್ಯ ತಪಾಸಣೆ, ದೇಶ ಭಕ್ತಿ, ಗ್ರಾಮ ಸ್ವಚ್ಛತೆ ಮತ್ತು ರಾಷ್ಟ್ರ ರಕ್ಷಣೆ ಕುರಿತು ಗ್ರಾಮದಲ್ಲಿ ಅರಿವು ಮೂಡಿಸಲಾಗಿದೆ. ಅನೇಕ ರೀತಿಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಸಲಾಗುತ್ತಿದ್ದು, 50 ಮಂದಿ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದಾರೆ. ಇನ್ನೂ ಮೂರು ದಿನಗಳ ಕಾಲ ವಡ್ಡರಹಟ್ಟಿ ಗ್ರಾಮದಲ್ಲಿ ಸ್ವಚ್ಛತೆ ಮತ್ತು ಅರಿವು ಕಾರ್ಯಕ್ರಮಗಳು ನಡೆಯಲಿದೆ ಎಂದರು.ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕದ ಉಪ ಶಿಬಿರಾಧಿಕಾರಿ ಮಮತ, ಪ್ರಾಧ್ಯಾಪಕರಾದ ನಾಗಭೂಷಣ್, ಓ.ಮಾರಪ್ಪ, ಶಿಕ್ಷಕರಾದ ರಾಮಮೂರ್ತಿ ಹಾಗೂ ಬೆಂಗಳೂರು ಸರ್ಕಾರಿ ಕಾಲೇಜಿನ ಇತಿಹಾಸ ಉಪನ್ಯಾಸಕಿ ವಡ್ಡರಹಟ್ಟಿ ಅನಿತ, ಕಾರನಾಗನಹಟ್ಟಿ ಶೆಟ್ಟಪ್ಪ, ರಾಮಾಂಜಿನಪ್ಪ ಹಾಗೂ ಇತರೆ ಅನೇಕ ಮಂದಿ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.