ಜನತೆ ನೆನೆಯುವ ರೀತಿಯಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು: ಡಾ.ಎಚ್.ಕೃಷ್ಣ

KannadaprabhaNewsNetwork |  
Published : Oct 28, 2024, 01:16 AM IST
25ಕೆಎಂಎನ್ ಡಿ36 | Kannada Prabha

ಸಾರಾಂಶ

ಪ್ರತಿಯೊಬ್ಬರ ಜೀವನದಲ್ಲಿ ಹಣವು ಅಗತ್ಯ. ಹಣವನ್ನು ನ್ಯಾಯಯುತವಾಗಿ ದುಡಿದು ಸಂಪಾದಿಸಬೇಕು. ಯಾವುದೇ ಅಧಿಕಾರಿಗಳು ಹಣದ ದೃಷ್ಟಿಯಿಂದ ಕೆಲಸ ಮಾಡದೆ ಸಾರ್ವಜನಿಕರ ಹಿತದೃಷ್ಟಿಯಿಂದ ಕೆಲಸ ಮಾಡಿದಾಗ ಸತತ ಪ್ರಯತ್ನ ಹಾಗೂ ಪ್ರಾಮಾಣಿಕ ಕೆಲಸಗಳಿಂದ ಯಶಸ್ಸು ದೊರೆಯುತ್ತದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಸರ್ಕಾರಿ ಇಲಾಖೆಯಲ್ಲಿ ಸೇವೆ ಮಾಡುವವರು ಜನರು ನೆನೆಯುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಅಧಿಕಾರಿಗಳಿಗೆ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕೈಗೊಂಡಿದ್ದ ಪ್ರವಾಸದ ಬಗ್ಗೆ ಸಭೆ ನಡೆಸಿ ಮಾತನಾಡಿ, ಸರ್ಕಾರಿ ಇಲಾಖೆಯಲ್ಲಿ ಸೇವೆ ಮಾಡಲು ಅವಕಾಶ ಸಿಗುವುದು ಕೆಲವರಿಗೆ ಮಾತ್ರ. ಅಧಿಕಾರಿಗಳು ಶ್ರಮವಹಿಸಿ ಕೆಲಸ ಮಾಡಬೇಕು ಎಂದರು.

ಪ್ರತಿಯೊಬ್ಬರ ಜೀವನದಲ್ಲಿ ಹಣವು ಅಗತ್ಯ. ಹಣವನ್ನು ನ್ಯಾಯಯುತವಾಗಿ ದುಡಿದು ಸಂಪಾದಿಸಬೇಕು. ಯಾವುದೇ ಅಧಿಕಾರಿಗಳು ಹಣದ ದೃಷ್ಟಿಯಿಂದ ಕೆಲಸ ಮಾಡದೆ ಸಾರ್ವಜನಿಕರ ಹಿತದೃಷ್ಟಿಯಿಂದ ಕೆಲಸ ಮಾಡಿದಾಗ ಸತತ ಪ್ರಯತ್ನ ಹಾಗೂ ಪ್ರಾಮಾಣಿಕ ಕೆಲಸಗಳಿಂದ ಯಶಸ್ಸು ದೊರೆಯುತ್ತದೆ ಎಂದರು.

ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ- 2013 ದೇಶದ ಎಲ್ಲಾ ರಾಜ್ಯಗಳಲ್ಲೂ ಜಾರಿಯಾಗಿದೆ. ಜಾರ್ಖಂಡ್, ಪಂಜಾಬ್, ಆಂಧ್ರಪ್ರದೇಶ ರಾಜ್ಯಗಳಲ್ಲಿ ಶೇ. 100 ರಷ್ಟು ಜಾರಿಯಾಗಿದೆ. ಆದರೆ, ನಮ್ಮ ಕರ್ನಾಟಕ ರಾಜ್ಯದಲ್ಲಿ ಶೇ.90ರಷ್ಟು ಜಾರಿಯಲ್ಲಿದೆ. ನಮ್ಮ ರಾಜ್ಯದಲ್ಲೂ ಕೂಡ ಶೇ.100 ರಷ್ಟು ಜಾರಿಯಾಗಲು ಪ್ರತಿಯೊಬ್ಬರ ಸಹಕಾರವು ಮುಖ್ಯವಾಗಿದೆ ಎಂದರು.

ಅಕ್ಟೋಬರ್ 22 ರಿಂದ 24 ರವರೆಗೆ ವಿವಿಧ ತಾಲೂಕಿನಲ್ಲಿ ಪ್ರವಾಸ ಕೈಗೊಂಡು ಆಸ್ಪತ್ರೆ, ಚಿನ್ನದ ಅಂಗಡಿ, ವಸತಿ ಶಾಲೆಗಳು ಪಡಿತರ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಂಡುಬಂದ ನ್ಯೂನತೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವಿಸ್ತೃತ ವರದಿ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು

ನಂತರ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಅವರು ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಚೇರಿ, ಆಸ್ಪತ್ರೆ, ಪೆಟ್ರೋಲ್ ಬಂಕ್, ವಿದ್ಯಾರ್ಥಿ ನಿಲಯ, ಚಿನ್ನದ ಅಂಗಡಿ, ಅಕ್ಕಿ ಗಿರಣಿ, ಅಂಗನವಾಡಿ ಕೇಂದ್ರ, ಶಾಲಾ ಹಾಗೂ ಇನ್ನಿತರೆ ಭೇಟಿ ನೀಡಿ ಸಂಬಂಧಿಸಿದ ಅಧಿಕೃತ ವರದಿ ನೀಡಿದ್ದು, ಈ ವರದಿ ಮೇರೆಗೆ ಎಲ್ಲಾ ಅಧಿಕಾರಿಗಳು ಕ್ರಮ ಕೈಗೊಂಡು ಅನುಪಾಲನಾ ವರದಿಯನ್ನು ಆಯೋಗಕ್ಕೆ ನೀಡಬೇಕು ಎಂದರು.

ಎಲ್ಲಾ ಅಧಿಕಾರಿಗಳು ನಿಮ್ಮ ವ್ಯಾಪ್ತಿಗೆ ಸಂಬಂಧಿಸಿದ ಕೆಳಹಂತದ ಅಧಿಕಾರಿ ನೌಕರರುಗಳಿಗೆ ಸರಿಯಾದ ನಿರ್ದೇಶನ ನೀಡಿ ಉತ್ತಮ ಕೆಲಸವಾಗಬೇಕು. ಪ್ರತಿಯೊಂದು ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳಿಗೆ ಆಹಾರ ನೀಡುವುದು ಎಷ್ಟು ಮುಖ್ಯವೋ ಮೂಲ ಸೌಕರ್ಯ ನೀಡಿ ಉತ್ತಮ ವಾತಾವರಣ ಕಲ್ಪಿಸುವುದು ಕೂಡ ಅಷ್ಟೇ ಮುಖ್ಯವಾಗಿದೆ ಎಂದರು.

ಮಿಮ್ಸ್ ನಲ್ಲಿ ಬಹಳ ತೊಂದರೆಗಳು ಇರುವುದು ಕಂಡುಬಂದಿದೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಚಿಕಿತ್ಸೆ ನೀಡುವುದು ಎಷ್ಟು ಮುಖ್ಯವೋ ಉತ್ತಮ ಗುಣಮಟ್ಟದ ಆಹಾರ ನೀಡುವುದು ಅದಕ್ಕಿಂತ ಮುಖ್ಯ. ರೋಗಿಗಳಿಗೆ ಸರಿಯಾದ ಆಹಾರ ವಿತರಿಸಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ ಎಂದರು.

ಸಭೆಯಲ್ಲಿ ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಕೃಷ್ಣ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ರಾಜಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮೋಹನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಧಿವೇಶನ ಮುಗಿದ ಬಳಿಕ ಡಿಕೆಶಿಗೆ ಶುಭಸುದ್ದಿ : ಇಕ್ಬಾಲ್
ಬೆಳಗಾವೀಲೂ ‘ಕೈ’ ಡಿನ್ನರ್‌ ಸಭೆಗೆ ಬಿವೈವಿ ಕಿಡಿ