ಕನ್ನಡಪ್ರಭ ವಾರ್ತೆ ಬೀದರ್
ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಈ ಸರ್ಕಾರದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಿ. ರಂದೀಪ್ ತಿಳಿಸಿದರು.ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲಾಮಟ್ಟದಲ್ಲಿಯೂ ಸ್ಥಳೀಯವಾಗಿ ಸಮಸ್ಯೆಗಳಿದ್ದರೆ ಅವುಗಳನ್ನು ನಮ್ಮ ಗಮನಕ್ಕೆ ತರಬೇಕು ಮತ್ತು ಸರ್ಕಾರದ ಕಾರ್ಯಕ್ರಮಗಳನ್ನು ಜಿಲ್ಲಾ, ತಾಲೂಕು, ಹೋಬಳಿ ಹಾಗೂ ಗ್ರಾಮ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕೆಂದು ಸೂಚಿಸಿದರು.
ಪ್ರತಿ ತಿಂಗಳು ಕ್ಷೇತ್ರ ಭೇಟಿಯ ಜೊತೆಗೆ ಆದ್ಯತೆಯ ಮೇಲೆ ಜಿಲ್ಲೆಯ ವಿಷಯಗಳನ್ನು ಗಮನಕ್ಕೆ ತರಬೇಕು ಎನ್ನುವುದು ಮುಖ್ಯಮಂತ್ರಿಗಳ ನಿರ್ದೆಶನವಿದ್ದು ಇದೇ ಜ. 31ರಂದು ಪ್ರಗತಿ ಪರಿಶೀಲನೆ ನಡೆಸಲಿದ್ದು, ಆಯಾ ಇಲಾಖೆಗಳ ಮಾಹಿತಿಯನ್ನು ನೀಡುವದರ ಜೊತೆಗೆ ಜಿಲ್ಲೆಯಲ್ಲಿ ಆಗಿರುವ ಉತ್ತಮ ಕೆಲಗಳ ಬಗ್ಗೆ ತಿಳಿಸಬೇಕು ಎಂದರು.ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಹೆಚ್ಚಳ ಕುರಿತಂತೆ ಕೆಲವು ಶಾಲೆಗಳನ್ನು ದತ್ತು ಕೊಡಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಕೆಲವು ಅಧಿಕಾರಿಗಳನ್ನು ನೇಮಿಸಲಾಗಿದೆ. ವಿಷಯ ಪರಿಣಿತ ಶಿಕ್ಷಕರನ್ನು ಕರೆಯಿಸಿ ಮಕ್ಕಳಿಗೆ ಕಲಿಸುವ ಪ್ರಯತ್ನ ಮಾಡಲಾಗುತ್ತಿದೆ. ಕೆಕೆಆರ್ಡಿಬಿಯಿಂದ ಸಮಾಲೋಚಕರನ್ನು ನೇಮಕ ಮಾಡಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆಮಾಡುವ ಸ್ಕ್ಯಾನಿಂಗ್ ಕೇಂದ್ರಗಳ ವಿರುದ್ಧ ಇಲ್ಲಿಯವರೆಗೆ ಯಾವುದೇ ಒಂದು ಪ್ರಕರಣ ದಾಖಲಾಗಿಲ್ಲ. ಸ್ಕ್ಯಾನಿಂಗ್ ಕೇಂದ್ರಗಳ ದಾಖಲಾತಿಗಳನ್ನು ಸರಿಯಾಗಿ ಪರಿಶೀಲನೆ ಮಾಡಿದಾಗ ಪ್ರಕರಣಗಳು ಬೆಳಕಿಗೆ ಬರುತ್ತವೆ. ಗಡಿ ಜಿಲ್ಲೆಗಳಲ್ಲಿ ಇದಕ್ಕೆ ಒತ್ತು ನೀಡಬೇಕಿದೆ ಹಾಗೂ ನೋಂದಣಿ ಇಲ್ಲದೆ ಕೆಲಸ ನಿರ್ವಹಿಸುವ ನಕಲಿ ವೈದ್ಯರು ಕಂಡು ಬಂದರೆ ಅಂಥವರ ಮೇಲೆ ಕ್ರಮ ಜರುಗಿಸಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚಿಸಿದರು.ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾತನಾಡಿ, ಬಸವಕಲ್ಯಾಣದಲ್ಲಿ ಅನುಭವ ಮಂಟಪದ ಕಾಮಗಾರಿ ನಡೆಯುತ್ತಿದೆ. ಭಾಲ್ಕಿ ಹಾಗೂ ಔರಾದ್ನಲ್ಲಿ ಏತ ನೀರಾವರಿ ಕಾಮಗಾರಿಗಳು ನಡೆಯುತ್ತಿವೆ. ಹುಲಸೂರು, ಕಮಲನಗರ ಹಾಗೂ ಚಿಟಗುಪ್ಪ ಹೊಸ ತಾಲೂಕುಗಳಿಗೆ ತಾಲೂಕು ಆಡಳಿತ ಭವನ ಆಗಬೇಕಿದೆ ಎಂಬ ಮಾಹಿತಿಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ, ಬೀದರ್ ಸಹಾಯಕ ಆಯುಕ್ತರಾದ ಲವೀಶ ಓರ್ಡಿಯಾ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಮೇಶ ಕೋಲಾರ ಸೇರಿದಂತೆ ಮತ್ತಿತರ ಅಧಿಕಾರಿಗಳು ಇದ್ದರು.