ತಾಲೂಕು ಮಟ್ಟದ ಅಧಿಕಾರಿಗಳ ತುರ್ತು ಸಭೆಯಲ್ಲಿ ಸಿಇಒ ಸೋಮಶೇಖರ್ ಎಚ್ಚರಿಕೆಕನ್ನಡಪ್ರಭ ವಾರ್ತೆ ಚಳ್ಳಕೆರೆ
ಬುಧವಾರ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ತುರ್ತು ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಗಿಂಕ ದೌರ್ಜನ್ಯ, ಬಲವಂತ ವಿವಾಹದ ಘಟನೆಗಳು ನಡೆಯುತ್ತಿವೆ. ಪತ್ರಿಕೆಗಳಲ್ಲಿ ಈ ವರದಿಯನ್ನು ನೋಡಿದ ಮೇಲೆ ವಿಷಯ ತಿಳಿಯುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಜಾಗೃತರಾದಲ್ಲಿ ಸಮಸ್ಯೆಗಳನ್ನು ನಿಯಂತ್ರಿಸಬಹುದಾಗಿದೆ. ರೆಡ್ಡಿಹಳ್ಳಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಗೆ ವಿವಾಹ ಮಾಡಲು ಯತ್ನಿಸಿದ ಐವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಸಿಡಿಪಿಒ ಹಾಗೂ ಬಿಇಒಗೆ ಸೂಚಿಸಿದರು.ಕಳೆದ ತಿಂಗಳು ಪ್ರಕಟವಾದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ತೃಪ್ತಿ ತಂದಿಲ್ಲ. ಈ ತಾಲೂಕಿನಲ್ಲಿ ಶೇ.62ರ ಸಾಧನೆಯಾಗಿದೆ. ಫಲಿತಾಂಶ ಕಳಪೆಯಾದರೆ ಶಿಕ್ಷಣ ಇಲಾಖೆಯನ್ನೇ ಹೊಣೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮುಖ್ಯ ಶಿಕ್ಷಕರು, ಶಿಕ್ಷಕರ ಸಭೆ ಕರೆದು ಫಲಿತಾಂಶವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಬೇಕು ಎಂದು ಹೇಳಿದರು.
ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಗ್ರಾಮಜನರೊಂದಿಗೆ ನಿಕಟ ಸಂಪರ್ಕ ಹೊಂದಿರುತ್ತಾರೆ. ಪ್ರತಿಯೊಂದು ಹಂತದಲ್ಲೂ ಆರೋಗ್ಯವೂ ಸೇರಿದಂತೆ ಹಲವಾರು ವಿಷಯಗಳ ಜಾಗೃತಿ ಕಾರ್ಯಗಾರವನ್ನು ಅವರು ಕೈಗೊಳ್ಳುತ್ತಾ ಬಂದಿದ್ದಾರೆ. ಅವರ ಮೂಲಕವೂ ಬಾಲ್ಯವಿವಾಹ ಜಾಗೃತಿ ಕಾರ್ಯಕ್ರಮ ನಡೆಸಬೇಕು ಎಂದು ಹೇಳಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ, ಸಿಡಿಪಿಒ ರಾಜಾನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ಎಸ್ಟಿ ಕಲ್ಯಾಣಾಧಿಕಾರಿ ಶಿವರಾಜ್, ಸಮಾಜ ಕಲ್ಯಾಣಾಧಿಕಾರಿ ದೇವ್ಲಾನಾಯ್ಕ, ಬಿಸಿಎಂ ಅಧಿಕಾರಿ ರಮೇಶ್, ಆರೋಗ್ಯಾಧಿಕಾರಿ ಡಾ.ಕಾಶಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಬಿ.ತಿಪ್ಪೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.