ವಿವಿಧ ಇಲಾಖೆ ಅಧಿಕಾರಿಗಳು ಗುರಿ ಸಾಧನೆಯಡೆಗೆ ಗಮನ ಹರಿಸಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ

KannadaprabhaNewsNetwork |  
Published : Aug 27, 2024, 01:45 AM ISTUpdated : Aug 27, 2024, 12:21 PM IST
ಸಭೆಯನ್ನು ಉದ್ದೇಶಿಸಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ ಮಾತನಾಡಿದರು.  | Kannada Prabha

ಸಾರಾಂಶ

ಇಲಾಖಾಧಿಕಾರಿಗಳು ತಮಗೆ ವಹಿಸಿದ ಯೋಜನೆಗಳ ಅನುಷ್ಠಾನದಲ್ಲಿ ಅಥವಾ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಶಿಸ್ತು ಬದ್ಧವಾಗಿ ಕಾರ್ಯನಿರ್ವಹಿಸುವುದರೊಂದಿಗೆ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ ಅಧಿಕಾರಿಗಳಿಗೆ ಸೂಚಿಸಿದರು.

ಗದಗ : ಜಿಲ್ಲಾಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಯೋಜನೆಗಳ ಸಮರ್ಪಕ ಅನುಷ್ಠಾನದೆಡೆಗೆ ಗಮನ ಹರಿಸಬೇಕು. ನಿಗದಿಪಡಿಸಿದ ಗುರಿ ಸಾಧನೆಯಡೆಗೆ ಕ್ರಿಯಾಶೀಲವಾಗಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇಲಾಖಾಧಿಕಾರಿಗಳು ತಮಗೆ ವಹಿಸಿದ ಯೋಜನೆಗಳ ಅನುಷ್ಠಾನದಲ್ಲಿ ಅಥವಾ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಶಿಸ್ತು ಬದ್ಧವಾಗಿ ಕಾರ್ಯನಿರ್ವಹಿಸುವುದರೊಂದಿಗೆ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಯಾವುದೇ ರೀತಿಯ ಕರ್ತವ್ಯ ಲೋಪಕ್ಕೆ ಅವಕಾಶ ನೀಡದೆ ಅರ್ಹರಿಗೆ ಇಲಾಖೆಯ ಸೌಲಭ್ಯ ಸುಲಭವಾಗಿ ದೊರಕಿಸಲು ಪ್ರಾಮಾಣಿಕ ಕಾರ್ಯವನ್ನು ಮಾಡಬೇಕು.

ಸರ್ಕಾರಿ ಸಂಸ್ಥೆಗಳಲ್ಲಿ ಸಾರ್ವಜನಿಕ ದೂರುಗಳಿಗೆ ಆಸ್ಪದ ಇಲ್ಲದಂತೆ ನೋಡಿಕೊಳ್ಳಬೇಕು. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಂಡು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಯೋಜನೆಯ ಪ್ರಯೋಜನ ಲಭ್ಯವಾಗಬೇಕು. ಜಿಲ್ಲೆಯ ಸಾರ್ವಜನಿಕರಿಗೆ ಆರೋಗ್ಯದ ಹಿತದೃಷ್ಟಿಯಿಂದ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ಲಭ್ಯವಾಗಬೇಕು.

ಆಸ್ಪತ್ರೆ ಸೇರಿದಂತೆ ಸರ್ಕಾರಿ ಸಂಸ್ಥೆಗಳಲ್ಲಿ ಮೂಲಭೂತ ಸೌಲಭ್ಯಗಳು ಇರುವಂತೆ ಅಧಿಕಾರಿ ವರ್ಗ ನಿಗಾ ವಹಿಸಬೇಕು. ಗದಗ ಕೃಷಿ ಪ್ರಧಾನ ಜಿಲ್ಲೆಯಾಗಿದ್ದು, ಕೃಷಿ ಚಟುವಟಿಕೆಗೆ ಅಗತ್ಯವಿರುವ ಸರ್ಕಾರದ ಸೌಕರ್ಯಗಳನ್ನು ಅರ್ಹರಿಗೆ ದೊರಕುವಂತೆ ಗಮನ ಹರಿಸಬೇಕು. ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಜಿಲ್ಲೆಯ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಸೌಕರ್ಯಗಳು ತಲುಪಬೇಕು. ಜೊತೆಗೆ ಶೈಕ್ಷಣಿಕ ಗುಣಮಟ್ಟ ಸುಧಾರಣೆಯೆಡೆಗೆ ಸಂಬಂಧಿತ ಇಲಾಖೆಯ ಮುಖ್ಯಸ್ಥರು ಅಗತ್ಯವಿರುವ ಕ್ರಮಗಳನ್ನು ಕೈಗೊಂಡು ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಮುಂದಾಗಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಗದಗ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಕುರಿತಂತೆ ಅಂಕಿ ಅಂಶಗಳ ಸಮೇತ ವಸ್ತು ಸ್ಥಿತಿಯನ್ನು ಹಾಗೂ ಪ್ರವಾಹ ನಿರ್ವಹಣೆಗೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ವಿವರಿಸಿದರು.

ಜಿಪಂ ಸಿಇಒ ಭರತ್ ಎಸ್. ಮಾತನಾಡಿ, ವಿವಿಧ ಇಲಾಖೆಗಳ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸೂಚಿಸಲಾಗಿದೆ. ನಿಗದಿತ ಅವಧಿಯೊಳಗೆ ಸರ್ಕಾರ ನಿಗದಿಪಡಿಸಿದ ಆರ್ಥಿಕ, ಭೌತಿಕ ಗುರಿ ಸಾಧನೆಗೆ ಶ್ರಮಿಸಲಾಗುವುದು ಎಂದು ತಿಳಿಸಿದರು.

ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ.ಎಚ್. ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಗೋವಿನಜೋಳ, ಹೆಸರು, ಶೇಂಗಾ, ಸೂರ್ಯಕಾಂತಿ, ಹತ್ತಿ, ಈರುಳ್ಳಿ, ಮೆಣಸಿನಕಾಯಿ ಪ್ರಮುಖವಾಗಿ ಬೆಳೆಗಳಾಗಿವೆ. ಹಿಂಗಾರು ಹಂಗಾಮಿಗೆ ಕಡಲೆ, ಹಿಂಗಾರು ಜೋಳ, ಗೋಧಿ, ಸೂರ್ಯಕಾಂತಿ, ಹತ್ತಿ ಪ್ರಮುಖ ಬೆಳೆಗಳಾಗಿವೆ. ಆಗಸ್ಟ್‌ 13ರ ವರೆಗೆ ಜಿಲ್ಲೆಯಲ್ಲಿ ಒಟ್ಟಾರೆ ಏಳು ತಾಲೂಕುಗಳಲ್ಲಿ 308336 ಹೆಕ್ಟೇರ್‌ ಬಿತ್ತನೆಯಾಗಿದೆ. 12654 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯವಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಇಲ್ಲ ಎಂದರು.

ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಶಶಿಕಾಂತ ಕೋಟಿಮನಿ ಮಾತನಾಡಿ, ಇದು ವರೆಗೆ 9890 ಟನ್ ಹಣ್ಣಿನ ಉತ್ಪಾದನೆಯಾಗಿದೆ. 383 ಹೆಕ್ಟೇರ್‌ ಪ್ರದೇಶದಲ್ಲಿ ಹಣ್ಣಿನ ಸಸಿ ನೆಡಲಾಗಿದೆ. 51300 ಹಣ್ಣಿನ ಸಸಿ ವಿತರಣೆಯಾಗಿದ್ದು, 34976 ಟನ್ ತರಕಾರಿ ಉತ್ಪಾದನೆಯಾಗಿದೆ. 14590 ತೆಂಗಿನ ಸಸಿಗಳನ್ನು ವಿತರಿಸಲಾಗಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ ಮಾತನಾಡಿ, 135 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಆ ಪೈಕಿ 67 ಮಕ್ಕಳು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 345 ಕಾಮಗಾರಿಗಳು ಕೆಆರ್‌ಐಡಿಎಲ್‌ನಿಂದ ಪ್ರಾರಂಭವಾಗಿದ್ದು ವಿವಿಧ ಹಂತಗಳಲ್ಲಿವೆ. ಸಮಾಜ ಕಲ್ಯಾಣ ಇಲಾಖೆಯಿಂದ ಈಗಾಗಲೇ 42 ವಸತಿ ನಿಲಯಗಳಿದ್ದು, ಇನ್ನೂ 6 ಹಾಸ್ಟೆಲ್‌ಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ತಿಳಿಸಿದರು.

ಸಭೆಯಲ್ಲಿ ಎಡಿಸಿ ಅನ್ನಪೂರ್ಣ ಎಂ., ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಡಿಡಿಪಿಐ ಜಿ.ಎಲ್. ಬಾರಾಟಕ್ಕೆ, ರವಿ ಗುಂಜೀಕರ್, ರಮೇಶ ಪಾಟೀಲ, ಡಿ.ಎಚ್.ಒ. ಡಾ. ಎಸ್.ಎಸ್. ನೀಲಗುಂದ ಸೇರಿದಂತೆ ಎಲ್ಲ ಜಿಲ್ಲಾಮಟ್ಟದ ಅಧಿಕಾರಿಗಳು, ಆಯಾ ತಾಲೂಕುಗಳ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಜರಿದ್ದರು.

ಪಡಿತರ ಅಂಗಡಿಗಳಿಗೆ ಭೇಟಿ

ಸಭೆಯ ನಂತರ ಆಹಾರ, ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಕಾರ್ಯದರ್ಶಿ ರಮಣದೀಪ್ ಚೌಧರಿ ವಿವಿಧ ಪಡಿತರ ಅಂಗಡಿಗಳಿಗೆ ಭೇಟಿ ನೀಡಿ, ವಿತರಿಸುವ ಸಾಮಗ್ರಿಗಳು ಸೇರಿದಂತೆ ಪರಿಶೀಲನೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ