- ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ । ಕಾಡ್ಗಿಚ್ಚು ಅಪಾಯಗಳ ಬಗ್ಗೆ ಎಚ್ಚರಿಕೆ ವಹಿಸಲು ಸೂಚನೆ
ಕನ್ನಡಪ್ರಭ ವಾರ್ತೆ ದಾವಣಗೆರೆ
ದಿನೇದಿನೇ ಹೆಚ್ಚುತ್ತಿರುವ ತೀವ್ರ ಬೇಸಿಗೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಜಾನುವಾರುಗಳ ಹಿತದೃಷ್ಟಿಯಿಂದ ಕುಡಿಯುವ ನೀರು ಮತ್ತು ಮೇವಿನ ಲಭ್ಯತೆಗಳ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಸಂಬಂಧಿಸಿದ ಅಧಿಕಾರಿಗಳು ಕಟ್ಟುನಿಟ್ಟಾಗಿ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚನೆ ನೀಡಿದರು.ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಬೇಸಿಗೆಯಲ್ಲಿ ಕುಡಿಯುವ ನೀರು, ಮೇವಿನ ಕೊರತೆ, ಮತ್ತು ಮಳೆ ಮಾಪನ, ಹವಾಮಾನ ಮಾಪನ ಕೇಂದ್ರಗಳ ನಿರ್ವಹಣೆ ಮತ್ತು ಮೇಲ್ವಿಚಾರಣೆ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಬೇಸಿಗೆ ತಾಪಮಾನ ಹೆಚ್ಚಾಗುತ್ತಿದ್ದು, ಕಾಡ್ಗಿಚ್ಚಿನ ಅಪಾಯಗಳ ಬಗ್ಗೆ ತಹಸೀಲ್ದಾರ್ಗಳು ಎಚ್ಚರಿಕೆ ವಹಿಸಬೇಕು. ಒಣಗಿದ ಎಲೆಗಳಿಗೆ ಬೆಂಕಿ ತಗುಲಿದರೆ ತೋಟಗಳು ಮತ್ತು ಇಡೀ ಗ್ರಾಮಕ್ಕೂ ಹರಡುವ ಸಾಧ್ಯತೆ ಇರುತ್ತದೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯ ಕಂದಾಯ ಗ್ರಾಮ ಆಡಳಿತಾಧಿಕಾರಿಗಳು ಸದಾ ಜಾಗರೂಕರಾಗಿರಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಜಾನುವಾರುಗಳಿಗೆ ಯಾವುದೇ ಮೇವಿನ ಕೊರತೆಯಿಲ್ಲ ಮತ್ತು ಮುಂದಿನ ಹಲವು ವಾರಗಳವರೆಗೆ ಸಾಕಾಗುವಷ್ಟು ದಾಸ್ತಾನು ಇಡಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು.
ಆರೋಗ್ಯ ಕೇಂದ್ರಗಳಲ್ಲಿ ಹಾವು ಕಡಿತದ ಅಗತ್ಯ ಔಷಧಿಗಳನ್ನು ದಾಸ್ತಾನು ಇಟ್ಟುಕೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಕ್ರಮ ವಹಿಸಬೇಕು. ಪ್ರಸ್ತುತ ಗ್ಯಾಸ್ ಸಿಲಿಂಡರ್ಗಳಿಗೆ ಬೇಡಿಕೆ ಹೆಚ್ಚಾಗಿದ್ದು, ದಾಸ್ತಾನು ಇರುವ ಬಗ್ಗೆ ಗ್ಯಾಸ್ ಏಜೆನ್ಸಿಯವರೊಂದಿಗೆ ತಹಸೀಲ್ದಾರರು ಸಭೆ ನಡೆಸಬೇಕು. ಸಾರ್ವಜನಿಕರಿಗೆ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಾಸ ಆಗದಂತೆ ಮತ್ತು ವಸತಿ ನಿಲಯಗಳಿಗೆ ಅಗತ್ಯವಿರುವಷ್ಟು ಸಿಲಿಂಡರ್ಗಳನ್ನು ಪೂರೈಕೆ ಮಾಡಲು ಸೂಚನೆ ನೀಡಬೇಕು. ಇಂಧನವನ್ನು ಯಾರು ಅನಗತ್ಯ ಸಂಗ್ರಹಣೆ ಮಾಡಬಾರದು ಎಂದರು.ಮಳೆಮಾಪನ ಕೇಂದ್ರಗಳ ನಿರ್ವಹಣೆ:
ಜಿಲ್ಲೆಯಲ್ಲಿನ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರ ಮತ್ತು ಟೆಲಿಮೆಟ್ರಿಕ್ ಹವಾಮಾನ ಕೇಂದ್ರಗಳ ಮೇಲ್ವಿಚಾರಣೆ ಮತ್ತು ನಿರ್ವಹಣೆ ಜವಾಬ್ದಾರಿ ಈಗ ಸಂಪೂರ್ಣವಾಗಿ ಕಂದಾಯ ಇಲಾಖೆಗೆ ಹಸ್ತಾಂತರಿಸಲಾಗಿದೆ. ಜಿಲ್ಲಾಧಿಕಾರಿ ಜಿಲ್ಲೆಯ ಎಲ್ಲ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರ ಮತ್ತು ಟೆಲಿಮೆಟ್ರಿಕ್ ಹವಾಮಾನ ಕೇಂದ್ರಗಳ ಒಟ್ಟಾರೆ ನಿಯಂತ್ರಣ ಮತ್ತು ಉಸ್ತುವಾರಿ ಹೊಂದಿರುತ್ತಾರೆ. ಅಪರ ಜಿಲ್ಲಾಧಿಕಾರಿಗಳು ಜಿಲ್ಲಾಮಟ್ಟದ ನೋಡಲ್ ಅಧಿಕಾರಿ, ತಹಸೀಲ್ದಾರ್ಗಳು ತಾಲೂಕುಮಟ್ಟದ ನೋಡಲ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ವಿವರಿಸಿದರು.206 ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರ:
ಜಿಲ್ಲೆಯಲ್ಲಿ ಮಳೆ ಮತ್ತು ಹವಾಮಾನದ ನಿಖರ ಮಾಹಿತಿಗಾಗಿ ಒಟ್ಟು 206 ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳನ್ನು 30 ಟೆಲಿಮೆಟ್ರಿಕ್ ಹವಾಮಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇವುಗಳು ರೈತರಿಗೆ ಮಳೆ ಮುನ್ಸೂಚನೆ, ಪ್ರವಾಹದ ಎಚ್ಚರಿಕೆ ಮತ್ತು ಬೆಳೆ ವಿಮೆ ಕ್ಲೈಮ್ ಮಾಡಲು ಈ ಮಳೆ ಮಾಪನ ಕೇಂದ್ರಗಳ ಮಾಹಿತಿ ಅತ್ಯಂತ ಅವಶ್ಯಕ. ಹೀಗಾಗಿ ಇವುಗಳ ಸುಸ್ಥಿತಿ ಕಾಯ್ದುಕೊಳ್ಳಲು ಆದ್ಯತೆ ನೀಡಿ ಎಂದರು.ಸಭೆಯಲ್ಲಿ ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್, ಚನ್ನಪ್ಪ, ಪಾಲಿಕೆ ಆಯುಕ್ತ ಡಾ. ಮಹಂತೇಶ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು, ತಹಸೀಲ್ದಾರರು ಉಪಸ್ಥಿತರಿದ್ದರು.
- - -(ಬಾಕ್ಸ್) * ಹೀಟ್ ರಿಸ್ಕ್ ಎಂಬ ಹೊಸ ವೆಬ್ಲಿಂಕ್ ಬಿಸಿಲಿನ ತಾಪಮಾನ ಮತ್ತು ಹವಾಮಾನ ವೈಪರೀತ್ಯಗಳನ್ನು ಮುಂಚಿತವಾಗಿ ತಿಳಿಯಲು ಐಐಎಸ್ಸಿ ಸಹಯೋಗದೊಂದಿಗೆ ಹೀಟ್ ರಿಸ್ಕ್ ಎಂಬ ಹೊಸ ವೆಬ್ಲಿಂಕ್ ಪ್ರಾಯೋಗಿಕವಾಗಿ ಬಿಡುಗಡೆ ಮಾಡಲಾಗಿದೆ. ಇದು ಮುಂದಿನ 5 ದಿನಗಳ ಹವಾಮಾನ ಮುನ್ಸೂಚನೆ ನೀಡುತ್ತದೆ. ಬಿಸಿಲಿನ ತಾಪಕ್ಕೆ ಅನುಗುಣವಾಗಿ ವಿವಿಧ ಇಲಾಖೆಗಳು ತಮ್ಮ ಕೆಲಸದ ಅವಧಿ ನ್ನು ಬದಲಾಯಿಸಿಕೊಳ್ಳಲು ಇದು ಸಹಕಾರಿಯಾಗಲಿದೆ. ಜಿಲ್ಲೆಯ ಎಲ್ಲ ಆರು ತಾಲೂಕುಗಳಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಗೆ ಪ್ರಾತ್ಯಕ್ಷಿಕೆ ಹಾಗೂ ತರಬೇತಿ ನೀಡಲಾಗಿದೆ ಎಂದರು.
- - --11ಕೆಡಿವಿಜಿ35:
ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಯಿತು. ಎಸಿ, ಪಾಲಿಕೆ ಆಯುಕ್ತರು, ತಹಸೀಲ್ದಾರರು, ಇಲಾಖೆ ಅಧಿಕಾರಿಗಳು ಇದ್ದರು.