ಪ್ರವಾಹ ಹಾನಿ ಪರಿಶೀಲಿಸಿದ ಅಧಿಕಾರಿಗಳು

KannadaprabhaNewsNetwork | Published : Aug 1, 2024 1:55 AM

ಸಾರಾಂಶ

ಗೋಕಾಕ: ಪ್ರವಾಹದಿಂದ ಹಾನಿಗೊಳಗಾಗಿರುವ ಲೋಳಸೂರ ಸೇತುವೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಲ್ ಮತ್ತು ಜಿಲ್ಲಾಧಿಕಾರಿ ಮೊಹಮ್ಮದ್ ಷನ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಲೆ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನೀರಿನ ರಭಸಕ್ಕೆ ಸೇತುವೆ ಮೇಲಿನ ರಸ್ತೆ ಹಾಳಾಗಿದ್ದು, ಮುಖ್ಯಮಂತ್ರಿ ಅವರಿಗೆ ಜಿಲ್ಲೆಯ ಪರಿಸ್ಥಿತಿ ಬಗ್ಗೆ ತಿಳಿಸಲಾಗುವುದು. ಮೂರು ದಿನಗಳಿಂದ ಮಳೆ ಕಡಿಮೆಯಾಗಿದ್ದು, ಪ್ರವಾಹ ಪರಿಸ್ಥಿತಿ ತಗ್ಗಿದೆ.

ಗೋಕಾಕ: ಪ್ರವಾಹದಿಂದ ಹಾನಿಗೊಳಗಾಗಿರುವ ಲೋಳಸೂರ ಸೇತುವೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಲ್ ಮತ್ತು ಜಿಲ್ಲಾಧಿಕಾರಿ ಮೊಹಮ್ಮದ್ ಷನ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಲೆ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನೀರಿನ ರಭಸಕ್ಕೆ ಸೇತುವೆ ಮೇಲಿನ ರಸ್ತೆ ಹಾಳಾಗಿದ್ದು, ಮುಖ್ಯಮಂತ್ರಿ ಅವರಿಗೆ ಜಿಲ್ಲೆಯ ಪರಿಸ್ಥಿತಿ ಬಗ್ಗೆ ತಿಳಿಸಲಾಗುವುದು. ಮೂರು ದಿನಗಳಿಂದ ಮಳೆ ಕಡಿಮೆಯಾಗಿದ್ದು, ಪ್ರವಾಹ ಪರಿಸ್ಥಿತಿ ತಗ್ಗಿದೆ. ನಗರದ ಚಿಕ್ಕೋಳಿ ಮತ್ತು ಲೋಳಸೂರ ಸೇತುವೆ ಮೇಲೆ ನೀರಿನ ಪ್ರಮಾಣ ಇಳಿದಿದೆ. ಪರ್ಯಾಯ ವ್ಯವಸ್ಥೆ ಬಗ್ಗೆ ಶೀಘ್ರ ಕೈಮಗೊಳ್ಳಲಾಗುವುದು. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತನಾಡಿದ್ದು, ಗೋಕಾಕ ಸೇರಿ ಪ್ರವಾಹ ಸ್ಥಿತಿಗತಿ ಬಗ್ಗೆ ಚರ್ಚೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಮಳೆ ಕಡಿಮೆಯಾಗಿದ್ದರಿಂದ ಹಿಡಕಲ್ ಜಲಾಯಶಕ್ಕೆ ಮೇಲಿನಿಂದ ಬರುತ್ತಿರುವ 35 ಸಾವಿರ ಕ್ಯುಸೆಕ್‌ ನೀರನ್ನು ಘಟಪ್ರಭಾ ನದಿಗೆ ಹರಿಬಿಡಲಾಗುತ್ತಿದೆ. ಸದ್ಯಕ್ಕೆ ಜಿಲ್ಲೆಗೆ ಯಾವುದೇ ತೊಂದರೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಲೋಳಸೂರ ಸೇತುವೆಗೆ ದುರಸ್ತಿಗೆ ಕ್ರಮ: ಮುಖ್ಯಮಂತ್ರಿಗಳ ಗಮನಕ್ಕೆ ತಂದು ಲೋಳಸೂರ ಸೇತುವೆ ದುರಸ್ತಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು. ಕಂದಾಯ ಸಚಿವರು ಬೆಳಗಾವಿಗೆ ಬಂದ ಸಂದರ್ಭದಲ್ಲಿ ಹಲವು ವಿಚಾರಗಳನ್ನು ಅವರ ಗಮನಕ್ಕೆ ತರಲಾಗಿದ್ದು, ಅವರು ಸಹ ಸ್ಪಂದಿಸಿದ್ದಾರೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಲೋಳಸೂರ ಸೇತುವೆ ಬಗ್ಗೆ ಪರಿಶೀಲಿಸಿ ವರದಿ ಕೊಟ್ಟ ನಂತರ ಸಂಚಾರಕ್ಕೆ ಮುಕ್ತಮಾಡಲಾಗುವುದು ಎಂದು ಹೇಳಿದರು.

ಇದೇ ವೇಳೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿಗಳು ನಗರದಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪ್ರೋಬೆಷನರಿ ಐಎಎಸ್ ಅಧಿಕಾರಿ ಭರತ ಕುಮಾರ್ ಮೀನಾ, ತಹಸೀಲ್ದಾರ್ ಡಾ.ಮೋಹನ ಭಸ್ಮೆ, ನೋಡಲ್ ಅಧಿಕಾರಿ ಬಸವರಾಜ ಕುರಿಹುಲಿ, ಪೌರಾಯುಕ್ತ ರಮೇಶ ಜಾಧವ, ಡಾ.ಎಂ.ಎಸ್.ಕೊಪ್ಪದ, ಎಂ.ಎಚ್.ಗಜಾಕೋಶ, ಶಿವಾನಂದ ಹಿರೇಮಠ, ಎಇಇ ಪಾಟೀಲ್ ಸೇರಿದಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಇದ್ದರು.

Share this article