ಹೂವಿನಹಡಗಲಿ: ಇಲ್ಲಿನ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಅಧಿಕಾರಿಗಳು ದಿಢೀರ್ ಭೇಟಿ ಪರಿಶೀಲನೆ ವೇಳೆ, ಕೆಲವು ಅಕ್ರಮ ಬೀಜ ಮಾರಾಟ ಮಾಡಿರುವುದು ಗಮನಕ್ಕೆ ಬಂದಿದೆ. ಜತೆಗೆ ವಿವಿಧ ದಾಖಲೆಗಳು ಮತ್ತು ನಾಮಫಲಕ ಇಲ್ಲದ, 11 ಅಂಗಡಿಗಳ ಮಾಲೀಕರಿಗೆ ನೋಟಿಸ್ ನೀಡಲಾಗಿದೆ ಎಂದು ಉಪ ಕೃಷಿ ನಿರ್ದೇಶಕ ನಯೀಮ್ ಪಾಷಾ ಹೇಳಿದರು.
ಅಂಗಡಿಗಳಲ್ಲಿ ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಕೀಟನಾಶಕಗಳ ದಾಸ್ತಾನು ಮತ್ತು ಮಾರಾಟ ದರದ ಫಲಕ ಕಡ್ಡಾಯವಾಗಿ ಹಾಕಬೇಕು. ನಿಷೇಧಿತ ಮತ್ತು ಅವಧಿ ಮೀರಿದ ಬಿತ್ತನೆ ಬೀಜ, ಕೀಟನಾಶಕ ಮಾರಾಟ ಮಾಡಬಾರದು. ರೈತರಿಗೆ ಕಡ್ಡಾಯವಾಗಿ ಜಿಎಸ್ಟಿ ಬಿಲ್ ನೀಡಬೇಕು. ಹೆಚ್ಚಿನ ಲಾಭದ ಆಸೆಗೆ ಸರ್ಕಾರ ನಿತಯಮಾವಳಿ ಮೀರಿದ್ದು ಕಂಡುಬಂದಲ್ಲಿ ಅಂತಹ ಮಾರಾಟಗಾರರ ಪರವಾನನಿ ರದ್ದುಪಡಿಸುವ ಜತೆಗೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಸಹಾಯಕ ಕೃಷಿ ನಿರ್ದೇಶಕ ಮೊಹಮ್ಮದ್ ಅಶ್ರಫ್ ಮಾತನಾಡಿ, ಎಲ್ಲ ಕಡೆಗೂ ಡಿಎಪಿ ರಸಗೊಬ್ಬರ ಲಭ್ಯತೆ ಕಡಿಮೆಯಾಗಿದೆ. ಇದಕ್ಕೆ ಪರ್ಯಾಯವಾಗಿ ಇತರೆ ಸಂಯುಕ್ತ (20-20-0-13, 10-26-26 ಹಾಗೂ ಇತರ) ರಸಗೊಬ್ಬರ ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.ಕಳಪೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡುವುದು ಕಂಡುಬಂದಲ್ಲಿ ಅವರ ಮಾರಾಟ ಪರವಾನಗಿ ರದ್ದುಪಡಿಸುವ ಜತೆಗೆ, ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.
ಕೃಷಿ ಅಧಿಕಾರಿಗಳಾದ ಮಂಜುನಾಥ ಲಮಾಣಿ, ಕಿರಣಕುಮಾರ್ ಇತರರಿದ್ದರು.