ಕನ್ನಡಪ್ರಭ ವಾರ್ತೆ ಮಂಡ್ಯ
ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ನಗರಸಭೆ ವ್ಯಾಪ್ತಿಯ ಸಾರ್ವಜನಿಕರು, ಗಣೇಶೋತ್ಸವ ಸಮಿತಿಗಳು ಕಡ್ಡಾಯವಾಗಿ ಪರಿಸರ ಸಂರಕ್ಷಣಾ ನಿಯಮ ಪಾಲಿಸಬೇಕು ಎಂದು ನಗರಸಭೆಯ ಪೌರಾಯುಕ್ತರು ಸೂಚಿಸಿದ್ದಾರೆ.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶನಗಳನ್ವಯ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಹಾಗೂ ಇತರೆ ರಾಸಾಯನಿಕ ವಸ್ತುಗಳಿಂದ ತಯಾರಿಸಿದ ಗೌರಿ ಗಣೇಶ ಮೂರ್ತಿಗಳ ತಯಾರಿಕೆ, ದಾಸ್ತಾನು, ಸಾಗಾಣಿಕೆ, ಪ್ರದರ್ಶನ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ವಿಷಕಾರಿ, ರಾಸಾಯನಿಕ, ಲೋಹಯುಕ್ತ ಹಾಗೂ ಕೃತಕ ಬಣ್ಣಗಳಿಂದ ಅಲಂಕರಿಸಿದ ಮೂರ್ತಿಗಳ ತಯಾರಿಕೆ ಮತ್ತು ಮಾರಾಟಕ್ಕೂ ಅವಕಾಶವಿಲ್ಲ.ನೈಸರ್ಗಿಕ ಮಣ್ಣು ಅಥವಾ ಜೇಡಿ ಮಣ್ಣು, ಪರಿಸರ ಸ್ನೇಹಿ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳನ್ನು ಮಾತ್ರ ತಯಾರಿಸಿ ಮಾರಾಟ ಮಾಡಲು ಮತ್ತು ಪೂಜಿಸಲು ಅವಕಾಶವಿದೆ. ಪಿಒಪಿ ಹಾಗೂ ರಾಸಾಯನಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳನ್ನು ಕೆರೆ, ನದಿ, ಕಾಲುವೆ, ಬಾವಿ ಸೇರಿದಂತೆ ಯಾವುದೇ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಸಾರ್ವಜನಿಕ ಗಣೇಶೋತ್ಸವ ಸಮಿತಿಗಳು ಸಂಬಂಧಪಟ್ಟ ಪ್ರಾಧಿಕಾರಗಳಿಂದ ಅಗತ್ಯ ಅನುಮತಿ ಪಡೆದು. ವಿಸಲಾಗುವ ಎಲ್ಲಾ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ಕ್ಯಾರಿಬ್ಯಾಗ್ಗಳನ್ನು ಬಳಸಬಾರದು. ಬಳಸುವುದು ಕಂಡುಬಂದಲ್ಲಿ ದಂಡ ವಿಧಿಸಲಾಗುವುದು ಎಚ್ಚರಿಸಿದರು.
ಪ್ಲಾಸ್ಟಿಕ್ ವಸ್ತುಗಳು, ಕ್ಯಾರಿ ಬ್ಯಾಗ್ಗಳು, ಕಪ್ಗಳು, ತಟ್ಟೆಗಳು, ಚಮಚಗಳು, ಸ್ಟ್ರಾಗಳು, ಥರ್ಮೋಕೋಲ್ ಅಲಂಕಾರಿ ವಸ್ತುಗಳು ಸೇರಿದಂತೆ ನಿಷೇತ ಪ್ಲಾಸ್ಟಿಕ್ ಉತ್ಪನ್ನಗಳು ಬಳಸಬಾರದು ಅಲ್ಲದೆ, ಗಣೇಶೋತ್ಸವ ಸಮಿತಿಗಳು ಹಸಿ ತ್ಯಾಜ್ಯ, ಒಣ ತ್ಯಾಜ್ಯ ಹಾಗೂ ಪೂಜಾ ತ್ಯಾಜ್ಯವನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ಮಂಡ್ಯ ನಗರಸಭೆಯ ತ್ಯಾಜ್ಯ ಸಂಗ್ರಹಣಾ ವಾಹನಕ್ಕೆ ಹಸ್ತಾಂತರಿಸಬೇಕು ಎಂದರು.