ಲಕ್ಷ್ಮೇಶ್ವರ: ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಪರಿಹಾರ ಹುಡುಕಿಕೊಂಡು ಬಂದಾಗ ಅಧಿಕಾರಿಗಳು ಸ್ಪಂದಿಸುವ ಮೂಲಕ ಜನರ ಕಷ್ಟಕ್ಕೆ ನೆರವಾಗಬೇಕು ಎಂದು ಲೋಕಾಯುಕ್ತ ಪೊಲೀಸ್ ಅಧಿಕಾರಿ ರವಿ ಪುರುಷೋತ್ತಮ ಹೇಳಿದರು.
ಸಾರ್ವಜನಿಕರು ವಿವಿಧ ಸರ್ಕಾರಿ ಕಚೇರಿಗಳಿಗೆ ಅಲೆದರೂ ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯುತ್ತಿಲ್ಲ ಎಂಬುದು ನೋವಿನ ಸಂಗತಿಯಾಗಿದೆ. ಅಧಿಕಾರಿಗಳು ಸಮಸ್ಯೆ ಹೇಳಿಕೊಂಡು ಬರುವ ಜನರಿಗೆ ತಮ್ಮ ಇಲಾಖೆಯಲ್ಲಿ ಆಗಬೇಕಾದ ಕೆಲಸಕ್ಕೆ ವಿನಾಕಾರಣ ತೊಂದರೆ ನೀಡದೆ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿ ಅವರ ಕಷ್ಟಕ್ಕೆ ಸ್ಪಂದಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.
ಬುಧವಾರ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ವೇಳೆ ಕಂದಾಯ, ಕೃಷಿ, ಹೆಸ್ಕಾಂ, ಪುರಸಭೆಗೆ ಸಂಬಂಧಿಸಿದಂತೆ ಒಟ್ಟು 9 ಅರ್ಜಿ ಬಂದಿವೆ ಎಂದು ಹೇಳಿದರು.ಈ ವೇಳೆ ಪಿಐ ಎಸ್.ಎಸ್. ತೇಲಿ, ತಹಸೀಲ್ದಾರ್ ವಾಸುದೇವ ಸ್ವಾಮಿ, ಇಓ ಕೃಷ್ಣಪ್ಪ ಧರ್ಮರ, ಪುರಸಭೆಯ ಮುಖ್ಯಾಧಿಕಾರಿ ಮಹೇಶ ಹಡಪದ, ಕೃಷಿ ಸಹಾಯಕ ಅಧಿಕಾರಿ ಚಂದ್ರಶೇಖರ ನರಸಮ್ಮನವರ, ಗ್ರೇಡ್-2 ತಹಸೀಲ್ದಾರ್ ಮಂಜುನಾಥ ಅಮಾಸಿ ಸೇರಿದಂತೆ ಅನೇಕರು ಇದ್ದರು.