ಕಂಪ್ಲಿ: ಮುಂಗಾರು ಹಂಗಾಮಿನಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪಗಳು, ಕುಡಿವ ನೀರಿನ ಸಮಸ್ಯೆಗಳು, ಸಾರ್ವಜನಿಕರ ಸುರಕ್ಷತೆ ಸಂಬಂಧಿತ ವಿಷಯಗಳಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸದೇ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ತಹಸೀಲ್ದಾರ್ ಜೂಗಲ ಮಂಜುನಾಯಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಂಗಾರು ಮಳೆ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ನೀರು ನಿಲ್ಲುವ, ಪ್ರವಾಹದ ಅಪಾಯ ಎದುರಾಗುವ ಹಾಗೂ ಜನವಸತಿ ಪ್ರದೇಶಗಳು ಜಲಾವೃತಗೊಳ್ಳುವ ಸಾಧ್ಯತೆ ಇರುವ ಪ್ರದೇಶಗಳನ್ನು ಗುರುತಿಸಿ ಮುಂಚಿತವಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅಪಾಯದ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡುವ ವ್ಯವಸ್ಥೆ ಮಾಡಬೇಕು. ಶಾಲಾ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಶಿಥಿಲಗೊಂಡ ಅಥವಾ ಅಪಾಯಕಾರಿಯಾಗಿರುವ ಕಟ್ಟಡಗಳಲ್ಲಿ ಮಕ್ಕಳನ್ನು ಕೂಡಿಸಬಾರದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ವಿದ್ಯುತ್ ಸುರಕ್ಷತೆ ಕುರಿತು ಮಾತನಾಡಿದ ತಹಸೀಲ್ದಾರ್, ಮರಗಳ ಕೊಂಬೆ, ಗಿಡಗಳು ವಿದ್ಯುತ್ ತಂತಿಗಳಿಗೆ ತಾಗಿರುವ ಬಗ್ಗೆ ಮಾಹಿತಿ ದೊರೆತ ಕೂಡಲೇ ಜೆಸ್ಕಾಂ ಅಧಿಕಾರಿಗಳ ಗಮನಕ್ಕೆ ತರಬೇಕು. ಮಳೆ-ಗಾಳಿಯಿಂದ ವಿದ್ಯುತ್ ಕಂಬಗಳು ಉರುಳುವುದು, ತಂತಿ ತುಂಡಾಗುವುದು ಅಥವಾ ವಿದ್ಯುತ್ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಜೆಸ್ಕಾಂ ಅಧಿಕಾರಿಗಳು ಮುನ್ನೆಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ ಸಮಸ್ಯೆ ಉಂಟಾದ ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದರು.ಕುಡಿವ ನೀರಿನ ಪೂರೈಕೆ ವ್ಯವಸ್ಥೆಗೆ ವಿದ್ಯುತ್ ವ್ಯತ್ಯಯ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಜೆಸ್ಕಾಂ ಇಲಾಖೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು.
ಪುರಸಭೆ ವ್ಯಾಪ್ತಿ ಸಂಭವಿಸುವ ಸಮಸ್ಯೆಗಳ ಕುರಿತು ಟಿ.ಸುಧಾಕರ ಅವರ ಮೊಬೈಲ್ 78995 74276 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಉಂಟಾಗುವ ಸಮಸ್ಯೆಗಳ ಕುರಿತು ಮಾಲತೇಶ ದೇಶಪಾಂಡೆ 96118 88105ಗೆ ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ತಿಳಿಸಿದರು.