ಅಭಿವೃದ್ಧಿ, ಒಳ್ಳೆ ಆಡಳಿತಕ್ಕೆ ಅಧಿಕಾರಿಗಳು ಸಹಕರಿಸಿ: ಸಚಿವ ಡಾ.ಶರಣಪ್ರಕಾಶ

KannadaprabhaNewsNetwork | Published : Jan 27, 2024 1:18 AM

ಸಾರಾಂಶ

ರಾಯಚೂರಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 75ನೇ ಗಣರಾಜ್ಯೋತ್ಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ತದನಂತರ ಸಂವಿಧಾನ ಜಾಗೃತಿ ಜಾಥಕ್ಕೆ ಸಚಿವರು ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಅಭಿವೃದ್ಧಿ ಜೊತೆಗೆ ಒಳ್ಳೆ ಆಡಳಿತ ನಡೆಸಲು ಅಧಿಕಾರಿಗಳು ಸಹಕರಿಸಬೇಕು. ಅಷ್ಟೇ ಅಲ್ಲದೇ ಜನ ಸಮಸ್ಯೆಗಳನ್ನಿಟ್ಟುಕೊಂಡು ಕಚೇರಿಗಳಿಗೆ ಬಂದಲ್ಲಿ ಪ್ರಮಾಣಿಕವಾಗಿ ಸ್ಪಂದಿಸುವ ಕೆಲಸ ಮಾಡಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್ ಹೇಳಿದರು.

ಸ್ಥಳೀಯ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ 75ನೇ ಗಣರಾಜ್ಯೋತ್ಸವ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಶುಕ್ರವಾರ ಮಾತನಾಡಿದರು. ಜಿಲ್ಲೆಯಲ್ಲಿ ಪಾರದರ್ಶಕ ಮತ್ತು ಭ್ರಷ್ಟಾಚಾರ ರಹಿತ ಆಡಳಿತ ನಡೆಸಲು ಜಿಲ್ಲೆಯ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಮತ್ತು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಪ್ರತಿಯೊಬ್ಬ ಭಾರತೀಯರಿಗೆ ಗಣರಾಜ್ಯೋತ್ಸವ ಅತ್ಯಂತ ಮಹತ್ವದ ದಿನ. ಬಲಿಷ್ಠ ರಾಷ್ಟ್ರ ನಿರ್ಮಾಣ ಮತ್ತು ಸದಾ ಕಾಲ ರಾಷ್ಟ್ರದ ಅಭಿವೃದ್ಧಿಗಾಗಿ ದೀಕ್ಷೆ ತೊಡುವ ದಿನ ಇದು. ಅಂಬೇಡ್ಕರ್ ದೇಶಕ್ಕೆ ನೀಡಿದ ಸಂವಿಧಾನ ಅರ್ಥೈಸಿಕೊಂಡು ಪ್ರತಿಯೊಬ್ಬರು ಅವರ ಆಶಯದಲ್ಲಿ ನಡೆಯಕು. ಅತಿದೊಡ್ಡ ಮತ್ತು ಅತ್ಯಂತ ವಿಶೇಷವಾದ ಪ್ರಜಾಪ್ರಭುತ್ವ ಹಾಗೂ ಸಮಾನತೆ ಸಾರುವ ದೇಶ ನಮ್ಮದು. ಇಂತಹ ದೇಶದ ರಕ್ಷಣೆ, ಸಂಸ್ಕೃತಿ ಎತ್ತಿ ಹಿಡಿಯಬೇಕು. ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬ ಭಾರತೀಯನು ಶ್ರಮಿಸಬೇಕು ಎಂದು ಹೇಳಿದರು.

ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ದೇವರು. ಪ್ರಜೆಗಳಿಗೆ ಎಲ್ಲ ಸೌಲಭ್ಯ ಒದಗಿಸುವುದು ಆಯಾ ರಾಜ್ಯ ಸರ್ಕಾರಗಳ ಕರ್ತವ್ಯ ಮತ್ತು ಜವಾಬ್ದಾರಿ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ರಾಜ್ಯದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಯೋಜನೆ ಮತ್ತು ಸವಲತ್ತು ಮುಟ್ಟಿಸಲಾಗುತ್ತಿದೆ. ಸರ್ಕಾರದ ಬೊಕ್ಕಸದ ಸಿಂಹಪಾಲನ್ನು ರಾಜ್ಯದ ಬಡವರಿಗಾಗಿ ಮೀಸಲಿರಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಮುಖಂಡರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸಂವಿಧಾನ ಜಾಗೃತಿ ಜಾಥಕ್ಕೆ ಚಾಲನೆ:

ದೇಶದ ಅತ್ಯಂತ ಪವಿತ್ರ ಗ್ರಂಥ ಸಂವಿಧಾನದ ಆಶಯ ಮನೆ ಮನೆಗೆ ತಲುಪಿಸುವ ಹಿನ್ನೆಲೆ ಕರ್ನಾಟಕ ಸರ್ಕಾರವು ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಂಡಿದ್ದು, ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್ ಚಾಲನೆ ನೀಡಿದರು.

ಕಾರ್ಯಕ್ರಮದ ಮೂಲ ಆಶಯದಂತೆ ರಾಯಚೂರು ಜಿಲ್ಲಾಡಳಿತ, ಜಿಪಂ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಅಶ್ರಯದಲ್ಲಿ ಜ.26 ರಿಂದ ಫೆ.22ರವರೆಗೆ ಒಟ್ಟು 28 ದಿನ ಇಡೀ ಜಿಲ್ಲೆಯಾದ್ಯಂತ 179 ಗ್ರಾಪಂ ಮತ್ತು 13 ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಜಾಥಾ(ಎಲ್‌ಇಡಿ ಪರದೆಯುಳ್ಳ ಟ್ಯಾಬ್ಲೋ) ಸ್ತಬ್ಧಚಿತ್ರ ವಾಹನದೊಂದಿಗೆ ಸಂಚರಿಸಲಿದೆ.

Share this article