ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಸರ್ಕಾರದ ಯೋಜನೆಗಳನ್ನು ಅಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು. ಇದರಿಂದ ಸರ್ಕಾರಿ ಯೋಜನೆಯ ಅನುಕೂಲ ಪಡೆದುಕೊಳ್ಳಲು ಜನರಿಗೆ ಸಹಕಾರಿಯಾಗುತ್ತದೆ ಎಂದು ಶಾಸಕಿ ಶಾರದಾ ಪೂರ್ಯನಾಯ್ಕ್ ತಿಳಿಸಿದರು.ಬುಧವಾರ ನಗರದ ತಾಲೂಕು ಕಾರ್ಯಾಲಯದಲ್ಲಿ ಏರ್ಪಡಿಸಿದ್ದ 2024-25 ನೇ ಸಾಲಿನ ಮೂರನೇ ಮತ್ತು ನಾಲ್ಕನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.
ತಾಲೂಕುಗಳಲ್ಲಿ ನಾಯಿ ಕಡಿತ, ಡೆಂಗ್ಯೂ ಕಾಯಿಲೆಗಳಿಗೆ ಔಷಧಿಯ ಕೊರತೆ ಇದ್ದು, ಅದರ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕಿದೆ. ಹೊಳಲೂರು, ಆಯನೂರು ಸೇರಿದಂತೆ ತಾಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಈ ಪ್ರಕರಣಗಳು ಗಮನಕ್ಕೆ ಬಂದಿದ್ದು, ಸಾರ್ವಜನಿಕರಿಗೆ ಸರಿಯಾದ ಕ್ರಮದಲ್ಲಿ ಚಿಕಿತ್ಸೆ ಹಾಗೂ ಔಷಧಿ ಸೌಲಭ್ಯವನ್ನು ದೊರಕುವಂತೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದರು.ಗ್ರಾಮಗಳ ಜನರಿಗೆ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಲು ಆಗುವುದಿಲ್ಲ. ಆದ್ದರಿಂದ ಅವರೆಲ್ಲಾ ಸರ್ಕಾರಿ ಆಸ್ಪತ್ರೆಯನ್ನು ಅವಲಂಬಿಸಿದ್ದಾರೆ. ಅವರ ಆರೋಗ್ಯದ ಜವಾಬ್ದಾರಿ ನಮ್ಮೆಲ್ಲರದ್ದಾಗಿದ್ದು ತಾಲೂಕು ಆರೋಗ್ಯ ಅಧಿಕಾರಿಗಳು ಇದರ ಬಗ್ಗೆ ಹೆಚ್ಚಿನ ಗಮನ ಹರಿಸಿ ಕಾರ್ಯೋನ್ಮುಖರಾಗಬೇಕೆಂದು ಸೂಚನೆ ನೀಡಿದರು. ಈ ಬಾರಿಯ ಮಳೆಯಿಂದ ರೈತರಿಗೆ ಅನಕೂಲಕರವಾದ ವಾತಾವರಣವು ನಿರ್ಮಾಣವಾಗಿದೆ. ಉತ್ತಮ ಮಳೆಯಿಂದ ರೈತರಿಗೆ ಬಿತ್ತನೆ ಕೆಲಸದಲ್ಲಿ ಯಾವುದೇ ಸಮಸ್ಯೆಗಳು ಉಂಟಾಗುವುದಿಲ್ಲ. ಭತ್ತ, ಮುಸುಕಿನ ಜೋಳ, ಅಡಿಕೆಯಂತಹ ಬೆಳೆಗಳನ್ನು ಬೆಳೆಯಲು ಸಹಕಾರಿಯಾಗುತ್ತದೆ. ಕೃಷಿ ಇಲಾಖೆಯು ಬೆಳೆಗಳಿಗೆ ಬಳಸಲಾಗುವ ಗೊಬ್ಬರದ ಬಗ್ಗೆ ರೈತರಿಗೆ ಮಾಹಿತಿಯನ್ನು ನೀಡಬೇಕು. ರೈತ ಸಂಪರ್ಕ ಕೇಂದ್ರಗಳು ಜನವಸತಿ ಬಳಿ ಇದರ ಬಗ್ಗೆ ಹೆಚ್ಚು ಪ್ರಚಾರ ಮಾಡಬೇಕು. ಇದರಿಂದ ರೈತರಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಹಣ್ಣು, ತರಕಾರಿ ಮಾರಾಟ ಮಾಡುವ ವ್ಯಾಪಾರಿಗಳು ಎಪಿಎಂಸಿ ಅಡಿಯಲ್ಲಿ ಬರುತ್ತಾರೆ. ಆದರೆ ಬೀದಿಬದಿ ವ್ಯಾಪಾರಿಗಳು ಯಾಕೆ ಬರುವುದಿಲ್ಲ. ಈ ಬಗ್ಗೆ ಸಂಪೂರ್ಣವಾಗಿ ಮಾಹಿತಿ ನೀಡಬೇಕು ಎಂದು ಎಪಿಎಂಸಿ ಕಾರ್ಯದರ್ಶಿಗೆ ತಿಳಿಸಿದ ಅವರು, ಕೆಲ ಹಳ್ಳಿಗಳಲ್ಲಿ ರೈತರಿಗೆ ರಸ್ತೆ ಸಂಪರ್ಕ ಸಮರ್ಪಕವಾಗಿಲ್ಲ, ಇದರಿಂದ ರೈತರಿಗೆ ಸಮಸ್ಯೆಗಳು ಉಂಟಾಗುತ್ತಿದೆ. ಆದಷ್ಟು ಬೇಗ ಈ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡಿ ರೈತರ ಓಡಾಟಕ್ಕೆ ಅನುಕೂಲ ಮಾಡಿಕೊಡಿ ಎಂದರು.ಸಭೆಯಲ್ಲಿ ತಾಲೂಕು ಕೆಡಿಪಿ ನಾಮ ನಿರ್ದೇಶಿತ ಸದಸ್ಯರಾದ ಶಿವಾನಂದಪ್ಪ, ಎಚ್.ಪಿ.ರುದ್ರೇಶ್, ಶಿವಕುಮಾರ್, ಜಯಕೀರ್ತಿ, ಗೀತಾ, ತಾಲೂಕು ಆಡಳಿತಾಧಿಕಾರಿ ನಂದಿನಿ, ತಾಲೂಕು ಕಾರ್ಯನಿರ್ವಹಣಾಧಿಕಾರಿ ಎನ್. ತಾರಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.