ಹರಪನಹಳ್ಳಿ: ನ್ಯಾ. ಎಚ್. ಕಾಂತರಾಜ್ ಆಯೋಗದ ಜಾತಿಗಣತಿ ವರದಿ ಜಾರಿಗೊಳಿಸಲು ಆಗ್ರಹಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಜ. 28ರಂದು ಚಿತ್ರದುರ್ಗದ ಮಾದಾರ ಚನ್ನಯ್ಯ ಪೀಠದ ಪಕ್ಕದ ಮೈದಾನದಲ್ಲಿ ಸಮಾವೇಶ ಆಯೋಜಿಸಿದೆ ಎಂದು ರೇಷ್ಮೆ ನಿಗಮದ ಮಾಜಿ ಅಧ್ಯಕ್ಷ ದಾವಣಗೆರೆ ಡಿ. ಬಸವರಾಜ ತಿಳಿಸಿದರು.
ಈ ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಳಾಗಿದ್ದ ಸಂದರ್ಭದಲ್ಲಿ ₹158 ಕೋಟಿ ಹಣ ಖರ್ಚು ಮಾಡಿ ಸುಮಾರು 1.50 ಲಕ್ಷಕ್ಕೂ ಅಧಿಕ ಅಧಿಕಾರಿಗಳನ್ನು ನೇಮಕ ಮಾಡಿ ಮನೆ ಮನೆಗೂ ತೆರಳಿ ಸಮೀಕ್ಷೆ ಮಾಡಿಸಿದ್ದಾರೆ. ಆದರೆ ಇದನ್ನು ಕೆಲವೇ ಕೆಲವು ವ್ಯಕ್ತಿಗಳು ಕಾಂತರಾಜ್ ವರದಿ ಅವೈಜ್ಞಾನಿಕವಾಗಿದೆ ಎಂದು ಅಪಸ್ವರ ಎತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಂದಿನ ಸಮಾವೇಶದಲ್ಲಿ ಮಹಿಳಾ ರಾಜಕೀಯ ಮೀಸಲಾತಿ ಕಾಯ್ದೆಯನ್ನು ಕೂಡಲೇ ಜಾರಿ ಮಾಡಬೇಕು, ಲೋಕಸಭೆ ಮತ್ತು ವಿಧಾನಸಭೆ ಸ್ಥಾನಗಳಿಗೂ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿ ನೀಡಬೇಕು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಬಲಪಡಿಸುವ ಮೂಲಕ ಯಾವುದೇ ಒತ್ತಡಗಳಿಗೆ ಮಣಿಯದೆ ಕಾಂತರಾಜ್ ಆಯೋಗದ ವರದಿಯನ್ನು ತಕ್ಷಣ ಜಾರಿಗೊಳಿಸುವಂತೆ ಒತ್ತಾಯಿಸಲಾಗುವುದು ಎಂದರು.ಪ್ರಗತಿಪರ ಚಿಂತಕ ಕೋಡಿಹಳ್ಳಿ ಭೀಮಪ್ಪ ಮಾತನಾಡಿ, ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳ ಮೇಲೆ ಪಟ್ಟಭದ್ರ ಹಿತಾಸಕ್ತಿಗಳಿಂದ ಶೋಷಣೆಯಾಗುತ್ತಿದೆ. ಹಾಗಾಗಿ ಒಗ್ಗಟ್ಟಿನಿಂದ ಶಕ್ತಿ ಪ್ರದರ್ಶಿಸಬೇಕಿದೆ ಎಂದರು.
ಕುರುಬ ಸಮಾಜದ ತಾಲೂಕು ಅಧ್ಯಕ್ಷ ಬಂಡ್ರಿ ಗೋಣಿಬಸಪ್ಪ ಮಾತನಾಡಿ, ಕಾಂತರಾಜ್ ವರದಿ ಜಾರಿಗೂ ವಿರೋಧ ವ್ಯಕ್ತಪಡಿಸುವುದು ಸಮಂಜಸವಲ್ಲ. ಸದನದಲ್ಲಿ ಇಟ್ಟು ವರದಿಯ ಸಾಧಕ- ಬಾಧಕಗಳನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು ಎಂದರು.