ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಲೋಕ ಅದಾಲತ್ ನಲ್ಲಿ ಪ್ರಕರಣಗಳನ್ನು ಸುಲಭ ಹಾಗೂ ಶೀಘ್ರವಾಗಿ ಯಾವುದೇ ಶುಲ್ಕ, ಖರ್ಚು ಇಲ್ಲದೇ ತೀರ್ಮಾನ ಮಾಡಿಕೊಳ್ಳಬಹುದು.
ಜನತಾ ನ್ಯಾಯಾಲಯದಲ್ಲಿ ಒಬ್ಬರು ಹಾಲಿ ನ್ಯಾಯಾಧೀಶರು ಹಾಗೂ ನುರಿತ ವಕೀಲರು ಸಂಧಾನಕಾರರಾಗಿ ಇರುತ್ತಾರೆ. ನ್ಯಾಯಾಲಯದಲ್ಲಿ ಚಾಲ್ತಿ ಇರುವ ಪ್ರಕರಣಗಳು ಹಾಗೂ ನ್ಯಾಯಾಲಯ ಪ್ರವೇಶಿಸದೇ ಇರುವಂತಹ ಪ್ರಕರಣಗಳನ್ನು ಜನತಾ ನ್ಯಾಯಾಲಯದಲ್ಲಿ ಪರಿಹರಿಸಿಕೊಳ್ಳಬಹುದು ಎಂದರು.ಕಳೆದ ಮೆಗಾ ಲೋಕ್ ಅದಾಲತ್ನಲ್ಲಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿದ್ದ 3,772 ವ್ಯಾಜ್ಯ ಪ್ರಕರಣ ಹಾಗೂ 1,13,399 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ಒಟ್ಟು 1,18,520 ಪ್ರಕರಣಗಳನ್ನು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ವಿಲೇವಾರಿ ಮಾಡಲಾಗಿದೆ. ಮದುವೆ ಬಂಧನ ಮುರಿಯುವುದು ನ್ಯಾಯಾಲಯದ ಕೆಲಸವಲ್ಲ. ಅಂತಿಮ ಹಂತದವರೆಗೂ ಪತಿ-ಪತ್ನಿಯರಿಗೆ ಒಟ್ಟಾಗಿ ಜೀವಿಸಲು ತಿಳಿ ಹೇಳಲಾಗುತ್ತದೆ. ಈ ಹಿನ್ನಲೆ ಕಳೆದ ಲೋಕ ಅದಾಲತ್ನಲ್ಲಿ ಚಿತ್ರದುರ್ಗ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ವಿಚೇಧನಕ್ಕಾಗಿ ಅರ್ಜಿ ಸಲ್ಲಿಸಿದ್ದ ಒಟ್ಟು 9 ಜೋಡಿಗಳನ್ನು ಪುನಃ ಒಂದು ಮಾಡಲಾಗಿದೆ ಎಂದು ನ್ಯಾಯಾಧೀಶ ರೋಣ್ ವಾಸುದೇವ್ ಮಾಹಿತಿ ನೀಡಿದರು.ಲೋಕ ಅದಾಲತ್ನಲ್ಲಿ ವ್ಯಾಜ್ಯಪೂರ್ವ ಪ್ರಕರಣಗಳಾದ ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಉದ್ಯೋಗ, ಕಾರ್ಮಿಕ, ವೇತನ, ವಿದ್ಯುತ್, ನೀರು ಇತರೆ ಸೇವಾ ಶುಲ್ಕದ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಅವಕಾಶವಿದೆ. ಇದರರೊಂದಿಗೆ ನ್ಯಾಯಾಲಯದ ವ್ಯಾಜ್ಯದಲ್ಲಿರುವ ನಾನ್ ಕಾಂಪೌಂಡ್ ಬಲ್ ಹಾಗೂ ಗಂಭೀರ ತರದ ಅಪರಾಧಿಕ ಪ್ರಕರಣಗಳನ್ನು ಹೊರತು ಪಡಿಸಿ, ಇತರೆ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಬಹುದು ಎಂದರು.
ಆಗಸ್ಟ್ 29 ರಿಂದ ವಿಶೇಷ ಲೋಕ್-ಅದಾಲತ್
ಜುಲೈ 29 ರಿಂದ ಆಗಸ್ಟ್ 3ವರೆಗೆ ಸರ್ವೋಚ್ಛ ನ್ಯಾಯಾಲಯದಲ್ಲಿ ವಿಶೇಷ ಲೋಕ್-ಅದಾಲತ್ ನಡೆಯಲಿದೆ. ಇದರಲ್ಲಿ 606 ಪ್ರಕರಣಗಳನ್ನು ಇತ್ಯರ್ಥಕ್ಕೆ ಕೈಗೊತ್ತಿಕೊಳ್ಳಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆಯ 19 ಪ್ರಕರಣಗಳನ್ನು ರಾಜಿ ಸಂಧಾನಕ್ಕಾಗಿ ಸರ್ವೋಚ್ಛ ನ್ಯಾಯಾಲಯ ಗುರುತಿಸಿದೆ. ಈ ಪ್ರಕರಣಗಳ ಕಕ್ಷಿದಾರರು ಅದಾಲತ್ ಕಲಾಪದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಜಿಲ್ಲಾ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರಕರಣಗಳ ಪಟ್ಟಿಯ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ವೆಬ್ ಸೈಟ್ನಲ್ಲಿ ಲಭ್ಯವಿದೆ. ಪ್ರಕರಣದ ಕಕ್ಷಿದಾರರು ವಿಡಿಯೋ ಕಾನ್ಫರೆನ್ಸ್ ಕೇಂದ್ರಗಳಿಗೆ ಭೇಟಿ ನೀಡಿ ಇದರ ಸದುಯೋಗ ಪಡಿಸಿಕೊಂಡು ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳುವಂತೆ ನ್ಯಾಯಾಧೀಶ ರೋಣ್ ವಾಸುದೇವ್ ಕೋರಿದ್ದಾರೆ.
ಲೋಕ ಅದಾಲತ್ ಕುರಿತು ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ dlsachitradurga1@gmail.com ಹಾಗೂ ಸದಸ್ಯ ಕಾರ್ಯದರ್ಶಿಯವರ ಕಚೇರಿ ಮೊಬೈಲ್ ಸಂಖ್ಯೆ 91411 93935 ಹಾಗೂ ದೂ. ಸಂಖ್ಯೆ 08194- 222322 ಗೆ ಸಂಪರ್ಕಿಸಬಹುದು ಎಂದರು. ಈ ವೇಳೆ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯ್ ಇದ್ದರು.