12 ರಂದು ದ.ಕ. ಲೋಕ ಅದಾಲತ್‌ನಲ್ಲಿ 3,148 ಪ್ರಕರಣ ಇತ್ಯರ್ಥ ಗುರಿ: ನ್ಯಾ.ಬಸವರಾಜ

KannadaprabhaNewsNetwork |  
Published : Jul 06, 2025, 11:48 PM IST
ನ್ಯಾಯಮೂರ್ತಿ ಬಸವರಾಜ ಸುದ್ದಿಗೋಷ್ಠಿ | Kannada Prabha

ಸಾರಾಂಶ

ಈ ಲೋಕ ಆದಾಲತ್ ಕಾರ್ಯಕ್ರಮದಲ್ಲಿ ನ್ಯಾಯಾಧಿಶರು, ಮಂಗಳೂರು ವಕೀಲರ ಸಂಘದ ಅಧ್ಯಕ್ಷರು ಹಾಗೂ ಸದಸ್ಯರುಗಳು, ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿ, ಅಭಿಯೋಜಕರು, ಇನ್ಸೂರೆನ್ಸ್ ಕಂಪೆನಿಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು‘ತ್ವರಿತ ನ್ಯಾಯಕ್ಕಾಗಿ’ ಎಂಬ ಘೋಷ ವಾಕ್ಯದೊಂದಿಗೆ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ವ್ಯಾಜ್ಯ ಇತ್ಯರ್ಥ ಪಡಿಸಿ ಕೊಳ್ಳಿರಿ ಎನ್ನುವ ಮೂಲಕ ರಾಜಿಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥ ಪಡಿಸುವ ಲೋಕ ಅದಾಲತ್ ಕಾರ್ಯ ಕ್ರಮ ಜು.12 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಇತ್ಯರ್ಥವಾಗಿ ಲೋಕ ಅದಾಲತ್ ಯಶಸ್ವಿಯಾಗಲು ಎಲ್ಲರೂ ಸಹಕರಿಸಬೇಕು ಎಂದು ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರು ಮತ್ತು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ ಮನವಿ ಮಾಡಿದ್ದಾರೆ.

ಮಂಗಳೂರಿನ ಜಿಲ್ಲಾ ಕೋರ್ಟ್‌ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಲೋಕ ಆದಾಲತ್ ಕಾರ್ಯಕ್ರಮದಲ್ಲಿ ನ್ಯಾಯಾಧಿಶರು, ಮಂಗಳೂರು ವಕೀಲರ ಸಂಘದ ಅಧ್ಯಕ್ಷರು ಹಾಗೂ ಸದಸ್ಯರುಗಳು, ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿ, ಅಭಿಯೋಜಕರು, ಇನ್ಸೂರೆನ್ಸ್ ಕಂಪೆನಿಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.

ಈ ಲೋಕ ಅದಾಲತ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣ ಸೇರಿದಂತೆ ಹಲವಾರು ಪರಸ್ಪರ ರಾಜಿಯಾಗಬಹುದಾ ಸಿವಿಲ್, ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುವುದು. ಅಲ್ಲದೆ ಬ್ಯಾಂಕುಗಳಿಗೆ ಸಂಬಂಧಿಸಿದ ಸಾಲದ ಹಣದ ವಸೂಲಾತಿ ಪ್ರಕರಣಗಳು, ವಿದ್ಯುಚ್ಛಕ್ತಿ ಮಂಡಳಿ, ಜಲ ಮಂಡಳಿ ಅಥವಾ ಜಿಲ್ಲಾ ನ್ಯಾಯಾಲಯಕ್ಕೆ ಬರಬಹುದಾದ ಇತರೆ ಯಾವುದೇ ಪ್ರಕರಣಗಳನ್ನು ಪೂರ್ವ ವ್ಯಾಜ್ಯ ಪ್ರಕರಣಗಳೆಂದು ಪರಿಗಣಿಸಲಾಗುವುದು. ಅವುಗಳಲ್ಲಿ ಉಭಯ ಕಕ್ಷಿದಾರರನ್ನು ಕರೆಸಿ ರಾಜಿ ಸಂಧಾನ ಮೂಲಕ ವಿವಾದಗಳನ್ನು ಬಗೆಹರಿಸಿ ನ್ಯಾಯ ಒದಗಿಸಲಾಗುವುದು ಎಂದರು.

ಈ ಬಾರಿ ‘ಸಾಥಿ’ ಅಭಿಯಾನದಡಿ ಪರಿತ್ಯಕ್ತ, ಪೋಷಕರಿಲ್ಲದ ಮಕ್ಕಳಿಗೆ ಆಧಾರ್ ಕಾರ್ಡ್ ಅನ್ನು ಮಾಡಿಸಲಾಗುತ್ತಿದೆ. ಅದಕ್ಕೆ ಅಗತ್ಯವಾದ ಜನನ ಪ್ರಮಾಣ ಪತ್ರವನ್ನು ಪಾಲಿಕೆಯವರು ಮಾಡಿಕೊಡಬೇಕು. ಅಲ್ಲದೆ ವಿಮಾ ಕಂಪನಿಗಳ ಸಹಿತ ವಿವಿಧ ಇಲಾಖೆಗಳು ಪ್ರಸಕ್ತ ನ್ಯಾಯಾಲಯದಲ್ಲಿ ಹಾಲಿ ಹಾಗೂ ಬಾಕಿ ಇರುವ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.3,148 ಪ್ರಕರಣ ಇತ್ಯರ್ಥ ಗುರಿ:

2025 ಮಾರ್ಚ್ 8 ರಂದು ನಡೆದ ಲೋಕ ಅದಾಲತ್‌ನಲ್ಲಿ ಒಟ್ಟು 57,105 ಪ್ರಕರಣಗಳು ಇದ್ದು ಅದರಲ್ಲಿ 6,324 ಪ್ರಕರಣವನ್ನು ಕೈಗೆತ್ತಿ ಗೊಂಡು ಅದರಲ್ಲಿ ಸುಮಾರು 3,510 ಪ್ರಕರಣಗಳು ವಿಲೇವಾರಿ ಆಗಿವೆ. ಇನ್ನು ಪೂರ್ವ ಮೊಕದ್ದಮೆಗಳಲ್ಲಿ 46,330 ಮೊಕದ್ದಮೆಗಳಲ್ಲಿ 37,549 ಇತ್ಯರ್ಥ ಆಗಿದೆ. ಜು. 12ರ ಲೋಕ ಅದಾಲತ್‌ನಲ್ಲಿ 57,305 ರಷ್ಟು ಪ್ರಕರಣಗಳಲ್ಲಿ 9,302 ಪ್ರಕರಣಗಳ ವಿಚಾರಣೆ ನಡೆದು, 3,148 ಪ್ರಕರಣವನ್ನು ಕೈಗೆತ್ತಿಗೊಂಡು ಇತ್ಯರ್ಥಗೊಳಿಸಲು ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದರು.

ಮಹಿಳೆಯರಿಗೆ, ಮಕ್ಕಳಿಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ (ಆಯಾಯ ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರದಿಂದ) ಉಚಿತ ಕಾನೂನು ನೆರವು ದೊರೆಯಲಿದೆ. ಕೆಲವೊಂದು ಪ್ರಕರಣಗಳು ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಂಡರೆ ಪ್ರಕರಣ ಇತ್ಯರ್ಥಗೊಳಿಸಲು ನ್ಯಾಯಾಲಯಕ್ಕೆ ಕಟ್ಟಿದ ಶುಲ್ಕವನ್ನು ವಾಪಸ್‌ ನೀಡಲಾಗುವುದು ಎಂದರು.

ಲೋಕ ಅದಾಲತ್‌ನಲ್ಲಿ ಸಾಧ್ಯವಾದಷ್ಟು ಪ್ರಕರಣಗಳು ವಿಲೇವಾರಿಗೊಂಡರೆ, ನ್ಯಾಯಾಲಯದಲ್ಲಿರುವ ಪ್ರಸಕ್ತ ವಿಚಾರಣೆಯಲ್ಲಿರುವ ಪ್ರಕರಣಗಳು ಬೇಗನೆ ವಿಲೇವಾರಿಯಾಗಲಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಕಾನೂನು ಸೇವೆಗಳ ಪ್ರಾಧಿಕಾರದಿಂದ ಬಾಕಿ ಇರುವ ವ್ಯಾಜ್ಯಗಳ ಬಗ್ಗೆ ಸೂಕ್ತವಾದ ಮಾಹಿತಿಯನ್ನು ಪಡೆದುಕೊಂಡು ಸದುಪಯೋಗ ಪಡೆದು ಕೊಳ್ಳಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಸದಸ್ಯ ಕಾರ್ಯದರ್ಶಿ ಜೈಬುನ್ನಿಸ ಇದ್ದರು.

----------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!