ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ಬಿಮ್ಸ್ ಆವರಣದಲ್ಲಿ ಶುಕ್ರವಾರ ಬಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ, ಗೃಹವೈದ್ಯರ ವಸತಿ ನಿಲಯ ನಿರ್ಮಾಣಕ್ಕೆ ಶಿಲಾನ್ಯಾಸ, ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾಗಿರುವ ನಗರ ಬಸ್ ನಿಲ್ದಾಣ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪಿಎಂ-ಉಷಾ(ಮೇರು) ಕಟ್ಟಡ ಕಾಮಗಾರಿಗಳು ಮತ್ತು ಹೆದ್ದಾರಿಯಿಂದ ವಿಶ್ವವಿದ್ಯಾಲಯದ ರಸ್ತೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಕಾರಣಾಂತರಗಳಿಂದ ಕುಂಟುತ್ತ ಸಾಗಿದ್ದ ಬಿಮ್ಸ್ ಆಸ್ಪತ್ರೆಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಇದೀಗ ಆರಂಭಿಸಲಾಗಿದೆ. ಹಂತ ಹಂತವಾಗಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದರು. ಕೆಎಲ್ಇ ಸಂಸ್ಥೆಯಿಂದ ವೈದ್ಯರನ್ನು ನಿಯೋಜಿಸಿ ಉಚಿತ ಸೇವೆ ಒದಗಿಸಿರುವುದರಿಂದ ಸರ್ಕಾರದ ವತಿಯಿಂದ ಧನ್ಯವಾದ ತಿಳಿಸಿದರು.ಬಡವರು, ತಳ ಸಮುದಾಯದ ಜನರಿಗೆ ಹಾಗೂ ಅಸಮಾನತೆ ನಿರ್ಮೂಲನೆ ಮಾಡಲು ಅವಕಾಶ ವಂಚಿತರಿಗೆ ಉತ್ತಮ ಸೌಲಭ್ಯ ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ. ಸಮ ಸಮಾಜ ನಿರ್ಮಾಣಕ್ಕಾಗಿ ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಗಾಂಧೀಜಿಯವರು ಸಮಾಜದ ಕಟ್ಟಕಡೆಯ ಜನರನ್ನು ಸ್ವಾವಲಂಬಿಯಾಗಿಸಬೇಕು ಎಂಬುದಕ್ಕೆ ಶ್ರಮಿಸಿದವರು. ಅಸಮಾನತೆ ತೊಡೆದು ಹಾಕಲು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದರು.
ಬೆಳಗಾವಿ ನಗರಕ್ಕೆ ನೂರು ಎಲೆಕ್ಟ್ರಿಕ್ ಬಸ್:
ಶೀಘ್ರದಲ್ಲಿಯೇ 100 ವಿದ್ಯುತ್ ಚಾಲಿತ ಬಸ್ಗಳನ್ನು ಬೆಳಗಾವಿ ನಗರಕ್ಕೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಶಕ್ತಿ ಯೋಜನೆಯಡಿ ಇದುವರೆಗೆ 565 ಕೋಟಿ ಮಹಿಳೆಯರು ಶೂನ್ಯ ಮೊತ್ತದ ಟಿಕೆಟ್ ಪಡೆದು ಉಚಿತ ಪ್ರಯಾಣ ಮಾಡಿರುವುದು ದಾಖಲೆಯಾಗಿದೆ. 1.25 ಲಕ್ಷ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ತಲಾ ಎರಡು ಸಾವಿರ ರು. ನೀಡಲಾಗುತ್ತಿದೆ. ಅಲ್ಲದೇ ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ ಯೋಜನೆಗಳ ಮೂಲಕ ಜನರ ಬದುಕು ಉತ್ತಮಪಡಿಸಿ ತನ್ಮೂಲಕ ಸಮಾಜದಲ್ಲಿನ ಅಸಮಾನತೆ ತೊಡೆದುಹಾಕಲು ಶ್ರಮಿಸಲಾಗುತ್ತಿದೆ ಎಂದರು.
ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿಯಿಂದ ಅಪಾರ ಪ್ರಮಾಣದ ಬೆಳೆಹಾನಿಯಾಗಿದೆ. ರಾಜ್ಯದಲ್ಲಿ ಹತ್ತು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ಖುಷ್ಕಿ ಬೆಳೆಹಾನಿ ₹8.5 ಸಾವಿರ ಪರಿಹಾರದಂತೆ ಹಾಗೂ ಎನ್ಡಿಆರ್ಎಫ್ ಮಾರ್ಗಸೂಚಿ ₹8.5 ಸಾವಿರ ಸೇರಿಸಿ ಒಟ್ಟು ₹17 ಸಾವಿರ ಪರಿಹಾರ ನೀಡಲಾಗುತ್ತಿದೆ. ನೀರಾವರಿ ಬೆಳೆಹಾನಿಗೆ ₹21,500 ಪರಿಹಾರ ನೀಡಲು ನಿರ್ಧರಿಸಲಾಗಿದೆ. ಇನ್ನೂ ಅನೇಕ ಕಡೆ ಮಳೆಯಾಗುತ್ತಿದ್ದು, ಬೆಳೆಹಾನಿ ಸಮೀಕ್ಷೆ ಬಳಿಕ ಪರಿಹಾರ ವಿತರಣೆ ಮಾಡಲಾಗುವುದು ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಬಡವರಿಗೆ ಉತ್ತಮ ಚಿಕಿತ್ಸೆ ನೀಡಲು ಸ್ಥಾಪಿಸಲಾಗಿದೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆಯಬೇಕು. ಸರ್ಕಾರಿ ಸಂಸ್ಥೆಗಳಲ್ಲಿ ಸಾರ್ವಜನಿಕರು ಸ್ವಚ್ಛತೆ ಕಾಪಾಡಬೇಕು. ಬಸ್ ನಿಲ್ದಾಣ, ಆಸ್ಪತ್ರೆ ಸೇರಿದಂತೆ ಎಲ್ಲ ಸರ್ಕಾರಿ ಆಸ್ತಿಗಳ ರಕ್ಷಣೆ ಹಾಗೂ ಸಮರ್ಪಕ ನಿರ್ವಹಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿ, ಸರ್ಕಾರ ಜಾರಿಗೆ ತಂದಿರುವ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯಡಿ ಇದುವರೆಗೆ 565 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿರುತ್ತಾರೆ ಎಂದರು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಕಟ್ಟಡ ಕಾಮಗಾರಿ ಮುಕ್ತಾಯದ ಹಂತದಲ್ಲಿವೆ. ಪಿಎಂ-ಉಷಾ(ಮೇರು) ಯೋಜನೆಯಡಿ ಸಂಶೋಧನೆ ಮತ್ತು ಕೌಶಲ್ಯಾಭಿವೃದ್ಧಿಗಾಗಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಲೋಕೋಪಯೋಗಿ ಇಲಾಖೆಯಿಂದ ₹9 ಕೋಟಿ ವೆಚ್ಚದಲ್ಲಿ ಹೆದ್ದಾರಿಯಿಂದ ರಾಣಿ ಚನ್ನಮ್ಮ ವಿವಿಗೆ ಸಂಪರ್ಕ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ತಾಂತ್ರಿಕ ಶಿಕ್ಷಣಕ್ಕೂ ಆದ್ಯತೆ ನೀಡಲಾಗಿದೆ. ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಸರ್ಕಾರ ಒಪ್ಪಿಗೆ ನೀಡಿದ್ದು, ನೇಮಕಾತಿ ಪ್ರಕ್ರಿಯೆ ಶೀಘ್ರ ಆರಂಭಗೊಳ್ಳಲಿದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಉತ್ತರ ಶಾಸಕ ಆಸಿಫ್(ರಾಜು) ಸೇಠ್ ಮಾತನಾಡಿ, ಬಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪ್ರತಿದಿನ 2500ಕ್ಕೂ ಅಧಿಕ ಜನರು ಓಪಿಡಿ ವಿಭಾಗದಿಂದ ಚಿಕಿತ್ಸೆ ಪಡೆಯುತ್ತಾರೆ. ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ್ ಕೋರೆ ಅವರು 20 ವೈದ್ಯರನ್ನು ಬಿಮ್ಸ್ಗೆ ಉಚಿತವಾಗಿ ನಿಯೋಜಿಸುವ ಮೂಲಕ ಬಡವರ ಚಿಕಿತ್ಸೆಗಾಗಿ ಸರ್ಕಾರದೊಂದಿಗೆ ಕೈಜೋಡಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಸ್ವಾವಲಂಬಿ ಜೀವನಕ್ಕೆ ನೆರವಾಗುವುದರ ಜತೆಗೆ ಅಭಿವೃದ್ಧಿ ಕಾಮಗಾರಿಗಳಿಗೂ ಸರ್ಕಾರ ಸಾಕಷ್ಟು ಅನುದಾನ ನೀಡುತ್ತಿದೆ ಎಂದು ಹೇಳಿದರು.ವಿಧಾನಸಭೆಯ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಕೌಜಲಗಿ, ವಾಯವ್ಯ ಸಾರಿಗೆ ಸಂಸ್ಥೆಯ ಅಧ್ಯಕ್ಷ ಭರಮಗೌಡ ಕಾಗೆ, ಶಾಸಕ ಬಾಬಾಸಾಹೇಬ್ ಪಾಟೀಲ, ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಕೆಎಲ್ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ್ ಕೋರೆ ಮತ್ತಿತರರು ಉಪಸ್ಥಿತರಿದ್ದರು.