ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ, ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನ ರಾಮ್ ಸಂಘಗಳ ಒಕ್ಕೂಟವು ಭಾನುವಾರ ಆಯೋಜಿಸಿದ್ದ ಡಾ. ಬಾಬು ಜಗಜೀವನರಾಮ್ ಅವರ 119ನೇ ಜನ್ಮ ದಿನಾಚರಣೆಯನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಸಮಾಜಕ್ಕೆ ಕೊಡುಗೆಯನ್ನು ನೀಡಿದ ಮಹನೀಯರಾದ ಡಾ.ಬಿ.ಆರ್.ಅಂಬೇಡ್ಕರ್, ಮಹಾತ್ಮ ಗಾಂಧೀಜಿ, ಡಾ.ಬಾಬು ಜಗಜೀವನ್ ರಾಮ್ ಮುಂತಾದವರನ್ನು ಆಧಾರವಾಗಿಟ್ಟಿಕೊಂಡು ಪ್ರಾಮಾಣಿಕವಾಗಿ, ಪರಿಶುದ್ಧ ಮನಸ್ಸಿನಿಂದ ಪ್ರತಿಯೊಬ್ಬರೂ ಸಾಧನೆ ಮಾಡಲೇಬೇಕು ಎಂದರು.ಅಂತರ್ಜಾತಿಯ ವಿವಾಹವಾದರೆ ಕೊಲೆಗಳು ಹಾಗೂ ಹಳ್ಳಿಗಳಲ್ಲೋ ದಲಿತರನ್ನು ದೂರ ಇಡುವುದು ಹಿಂದಿನ ಕಾಲದಿಂದಲೂ ನಡೆಯುತ್ತಿತ್ತು, ಇದರ ವಿರುದ್ಧ ಹೋರಾಟವನ್ನು ಪ್ರಾರಂಭಿಸಿದವರು ಬಾಬೂಜಿ ಅವರು. ಸ್ವತಂತ್ರ ಪೂರ್ವದಲ್ಲಿ ಚಳವಳಿಯನ್ನು ಮಾಡಿ ಗಾಂಧೀಜಿ ಅವರ ಬೆನ್ನೆಲುಬಾಗಿ ನಿಂತು, ದೇಶಕ್ಕೆ ಅಪಾರ ಕೊಡುಗೆ ನೀಡಿದರು. ಅವರ ಕೊಡುಗೆ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.
ಶಾಸಕರಾದ ಕೆ. ಹರೀಶ್ ಗೌಡ, ಸಿ.ಎನ್.ಮಂಜೇಗೌಡ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಎಸ್.ಯುಕೇಶ್ ಕುಮಾರ್, ನಗರ ಪಾಲಿಕೆಯ ಆಯುಕ್ತ ಶೇಖ್ ತನ್ವೀರ್ ಆಸೀಫ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ, ಸಹಾಯಕ ನಿರ್ದೇಶಕ ಎ.ಎನ್. ಜನಾರ್ಧನ್ ಮೊದಲಾದವರು ಇದ್ದರು.
ಡಾ. ಬಾಬು ಜಗಜೀವನ ರಾಮ್ ಅವರು ಕೃಷಿ ಸಚಿವ, ರಕ್ಷಣಾ ಸಚಿವ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಿದ್ದು, ಅವರು ಎಲ್ಲಾ ಕ್ಷೇತ್ರದಲ್ಲೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಶಾಸಕ ಕೆ.ಹರೀಶ್ ಗೌಡ ತಿಳಿಸಿದರು.
ಶಿಕ್ಷಣಕ್ಕೆ ಪ್ರತಿಯೊಬ್ಬರೂ ಹೆಚ್ಚು ಒತ್ತು ನೀಡಬೇಕು. ಬಡವರು, ಹಿಂದುಳಿದ ಪ್ರತಿಯೊಂದು ಸ್ತರದ ಜನರು ಶಿಕ್ಷಣ ಪಡೆಯಬೇಕು. ಇಂದಿನ ದಿನಗಳಲ್ಲಿ ಉನ್ನತ ಶಿಕ್ಷಣಕ್ಕೆ ಹೆಣ್ಣು ಮಕ್ಕಳು ಆಸಕ್ತಿ ತೋರುತ್ತಿದ್ದು, ಇತ್ತೀಚಿಗೆ ಗಂಡು ಮಕ್ಕಳಲ್ಲಿ ಶಿಕ್ಷಣದ ಮೇಲಿನ ಆಸಕ್ತಿ ಕಡಿಮೆಯಾಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಜಯಂತಿಗಳನ್ನು ಆಚರಿಸುವ ಉದ್ದೇಶ ಮಹಾನ್ ವ್ಯಕ್ತಿಗಳು ಬಿಟ್ಟು ಹೋಗಿರುವ ಆಶಯಗಳನ್ನು ಅಳವಡಿಸಿಕೊಳ್ಳಲೆಂದು, ಅವರ ಆದರ್ಶ ಹಾಗೂ ವ್ಯಕ್ತಿತ್ವವನ್ನು ಅನುಸರಿಸಲು. ಈ ದೇಶವನ್ನು ಭವ್ಯ ದಾರಿಯಲ್ಲಿ ತೆಗೆದುಕೊಂಡು ಹೋಗಬೇಕಾದರೆ ಪ್ರಜೆಗಳಾಗಿರುವ ನಾವು ಮಹಾನೀಯರ ಮಾರ್ಗದರ್ಶನವನ್ನು ಅನುಸರಿಸಿ ಅಳವಡಿಸಿಕೊಳ್ಳಬೇಕು.