- ಸರ್ಕಾರಿ ಕಾಲೇಜಿನಲ್ಲಿ ಡ್ರಗ್ಸ್ ವಿರುದ್ಧ ಜಾಗೃತಿ ನಡಿಗೆ ಕಾರ್ಯಕ್ರಮ
ಚನ್ನಗಿರಿ: ಅಪ್ರಾಪ್ತರು, ಯುವಜನರು ಪ್ರಸ್ತುತ ದಿನಗಳಲ್ಲಿ ಅನೇಕ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಅಮೂಲ್ಯವಾದ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ತಾಲೂಕಿನ ಎಲ್ಲ ಶಾಲಾ-ಕಾಲೇಜುಗಳಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ನಡಿಗೆ ಎಂಬ ಕಾರ್ಯಕ್ರಮವನ್ನು ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗುತ್ತಿದೆ ಎಂದು ಪೊಲೀಸ್ ಉಪಾಧೀಕ್ಷಕ ರುದ್ರಪ್ಪ ಎಸ್. ಉಜ್ಜನಕೊಪ್ಪ ಹೇಳಿದರು.
ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಶನಿವಾರ ಚನ್ನಗಿರಿ ಉಪ ವಿಭಾಗದಿಂದ ಮಾದಕವಸ್ತು ದುರುಪಯೋಗ ಮತ್ತು ಅಕ್ರಮ ಸಾಗಾಟದ ವಿರುದ್ಧ ಹಮ್ಮಿಕೊಂಡಿದ್ದ ಅಂತರ ರಾಷ್ಟ್ರೀಯ ಡ್ರಗ್ಸ್ ವಿರುದ್ಧ ಜಾಗೃತಿ ನಡಿಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಿಕ್ಷಣ ಕಲಿಯುವ ಸಮಯದಲ್ಲಿ ಓದುವ ಕಡೆಗೆ ಹೆಚ್ಚು ಗಮನಹರಿಸಬೇಕು. ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದು. ಮಾದರಿ ಜೀವನ ಕಟ್ಟಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಇದು ಎಐ ತಂತ್ರಜ್ಞಾನ ಕಾಲವಾಗಿದ್ದು, ನಿಮಗೆ ಎಲ್ಲ ವಿಷಯಗಳು ಸುಲಭವಾಗಿ ದೊರೆಯುತ್ತಿವೆ. ಒಳ್ಳೆಯ ವಿಚಾರಗಳನ್ನು ಮೈಗೂಡಿಸಿಕೊಂಡು ಹೋದಾಗ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಜೀವನ ನಡೆಸಲು ಸಾಧ್ಯವಾಗಲಿದೆ. ಮಾದಕ ವ್ಯಸನಗಳಿಂದ ಜನರ ರಕ್ಷಿಸಲು ಪೊಲೀಸ್ ಇಲಾಖೆ ವತಿಯಿಂದ ಸನ್ಮಿತ್ರ ಎಂಬ ಯೋಜನೆಯನ್ನು ಪ್ರಾರಂಭಿಸಿದ್ದು ಒಬ್ಬ ವ್ಯಸನಿಗೆ ಒಬ್ಬ ಪೊಲೀಸ್ ಸಿಬ್ಬಂದಿ ನೇಮಕ ಮಾಡಿ ಅವರನ್ನು ವ್ಯಸನದಿಂದ ಮುಕ್ತಿಗೊಳಿಸುವಲ್ಲಿ ನಿರತರಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ರವೀಶ್, ಪಿಎಸ್ಐ ರೂಪ್ಲಿಬಾಯಿ, ಶ್ರೀನಿವಾಸ್ ಕುಮಾರ್, ಪ್ರಾಚಾರ್ಯ ದೇವರಾಜ್, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.
-6ಕೆಸಿಎನ್ಜಿ1: