ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಂಗಳವಾರ ಕಾರ್ಗಲ್ ನ ಭಟ್ಕಳ ವೃತ್ತದಲ್ಲಿರುವ ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿ) ರಿಕ್ರಿಯೇಶನ್ ಕ್ಲಬ್ನ ಸಭಾಂಗಣದಲ್ಲಿ ಸಾರ್ವಜನಿಕರ ಅಹವಾಲು ಆಲಿಕೆ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಯಿತು.
10,500 ಕೋಟಿ ವೆಚ್ಚದಲ್ಲಿ 2000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿ ಶೇಖರಣೆ ಮಾಡುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ಅನುಷ್ಠಾನಗೊಳಿಸಲು ಕರ್ನಾಟಕ ವಿದ್ಯುತ್ ನಿಗಮ ಮುಂದಾಗಿದೆ. ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಯೋಜನೆಯ ಬಾಧಿತ ಪ್ರದೇಶವಾಗಿವೆ.ಸಾರ್ವಜನಿಕರ ಅಹವಾಲು ಆಲಿಕೆ ಸಭೆಯಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ಇವರಲ್ಲಿ ಅನೇಕರು, ಪ್ರಸ್ತಾವಿತ ಯೋಜನೆಯ ಬಗ್ಗೆ ಡಿಪಿಆರ್ ಇಂಗ್ಲಿಷಿನಲ್ಲಿದ್ದು ಸ್ಥಳೀಯ ಭಾಷೆಯಲ್ಲಿ ಪ್ರಕಟಿಸಿ ಸಾರ್ವಜನಿಕರಿಗೆ ವಿತರಿಸಬೇಕಾಗಿತ್ತು. ಆದರೆ ಆ ಕೆಲಸವನ್ನು ಸಂಬಂಧಿಸಿದವರು ಮಾಡಲಿಲ್ಲ. ಇನ್ನಾದರೂ ಡಿಪಿಆರ್ ನ್ನು ಕನ್ನಡದಲ್ಲಿ ಅನುವಾದಿಸಿ ಸಾರ್ವಜನಿಕರಿಗೆ ತಲುಪಿಸಿ 45 ದಿನ ಮುಂದೂಡಿ ಎಂಬ ಒತ್ತಾಯವನ್ನು ಮಾಡಿದರು.
ಪ್ರಸ್ತಾವಿತ ಯೋಜನೆಯು ಪರಿಸರ, ಐತಿಹಾಸಿಕ ಸ್ಮಾರಕ, ಜನ ಜಾನುವಾರುಗಳಿಗೆ ಮಾರಕವಾಗಿದ್ದು, ಯೋಜನೆಯನ್ನು ಸಂಪೂರ್ಣ ಕೈಬಿಡಬೇಕು ಎಂದು ಒಕ್ಕೋರಲಿನಿಂದ ಆಗ್ರಹಿಸಿದರು.
ಯಾವುದೇ ಕಾರಣಕ್ಕೂ ಸದರಿ ಸಭೆಯನ್ನು ಮುಂದೂಡಲು ಸಾಧ್ಯವಿಲ್ಲ. ನೀವು ಕೊಡುವ ಅಭಿಪ್ರಾಯ, ಸಲಹೆ ಸೂಚನೆಗಳನ್ನು ಸರ್ಕಾರಕ್ಕೆ ಕಳುಹಿಸುವುದಾಗಿ ಸಭೆಯಲ್ಲಿ ಭಾಗಿಯಾದ ಅಧಿಕಾರಿಗಳು ಸಮಜಾಯಿಷಿ ನೀಡಲು ಪ್ರಯತ್ನಿಸಿದರೂ ಸಾರ್ವಜನಿಕರು ಒಪ್ಪಲಿಲ್ಲ.
ಸಭೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಅರಣ್ಯ ಇಲಾಖೆ ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಸನ್ನ ಕೃಷ್ಣ ಪಟಗಾರ, ಮಾಲಿನ್ಯ ನಿಯಂತ್ರಣ ಮಂಡಳಿ ಹಿರಿಯ ಪರಿಸರ ಅಧಿಕಾರಿ ರಮೇಶ ನಾಯಕ್, ಶಿವಮೊಗ್ಗ ಜಿಲ್ಲಾ ಪರಿಸರ ಅಧಿಕಾರಿ ಶಿಲ್ಪಾ, ಕೆಪಿಸಿಎಲ್ ಅಧಿಕಾರಿ ವಿಜಯ್ ಮೊದಲಾದವರು ಉಪಸ್ಥಿತರಿದ್ದರು.
ಸಾಗರ ತಾಲೂಕಿನ ಕಾರ್ಗಲ್ನ ಶರಾವತಿ ಕಣಿವೆಯಲ್ಲಿ ಉದ್ದೇಶಿತ ಪಂಪ್ಡ್ ಸ್ಟೋರೇಜ್ ಯೋಜನೆ ಬಾಧಿತ ಪ್ರದೇಶದಲ್ಲಿ ಕಾಣಸಿಗುವ ಸಸ್ತನಿ, ಸರೀಸೃಪ ಹಾಗೂ ಜಲಚರಗಳ ಮಾಹಿತಿಯನ್ನು ಅವುಗಳ ವೈಜ್ಞಾನಿಕ ಹೆಸರಲ್ಲಿ ಕರ್ನಾಟಕ ವಿದ್ಯುತ್ ನಿಗಮ ನೀಡಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಯಿತು.
ಆಗ ಮಧ್ಯ ಪ್ರವೇಶಿಸಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಅರ್ಧ ಗಂಟೆ ಸಮಯಾವಕಾಶ ನೀಡಿದಲ್ಲಿ ವೈಜ್ಞಾನಿಕ ಹೆಸರನ್ನು ಸ್ಥಳೀಯ ಹೆಸರಿಗೆ ತರ್ಜುಮೆ ಮಾಡಿಸಿ ಮಾಹಿತಿ ಒದಗಿಸುವುದಾಗಿ ಭರವಸೆ ನೀಡಿ ಸಭೆ ಮುಂದುವರೆಸಿದರು.