ಚಿಕ್ಕಮಗಳೂರು : ಮುಳ್ಳಯ್ಯನಗಿರಿ ಪ್ರವಾಸಿ ತಾಣಕ್ಕೆ ಬರುವ ಪ್ರವಾಸಿಗರಿಗೆ ಆನ್ ಲೈನ್ ವ್ಯವಸ್ಥೆ ಜಾರಿಗೆ ತರುವ ಮುನ್ನ ಸಮಾಲೋಚನ ಸಭೆ ಕರೆಯಬೇಕೆಂದು ಕಸ್ತೂರಿ ರಂಗನ್ ವರದಿ ವಿರೋಧಿ ಮತ್ತು ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶ ವಿರೋಧಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಎಸ್. ವಿಜಯ್ಕುಮಾರ್ ಆಗ್ರಹಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಜಿಲ್ಲೆಗೆ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಆನ್ಲೈನ್ ಮೂಲಕ ಬುಕ್ಕಿಂಗ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿರುವುದರಿಂದ ಅನೇಕ ಜನರಿಗೆ ತೊಂದರೆಯಾಗಲಿದೆ ಎಂದು ಹೇಳಿದರು.
ಪ್ರವಾಸಿ ತಾಣಗಳ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವಾಗ ಜಿಲ್ಲಾಡಳಿತ, ಸರ್ವ ಪಕ್ಷಗಳು, ಸ್ಥಳೀಯರು, ಸ್ಥಳೀಯ ಸಂಘ ಸಂಸ್ಥೆಗಳು, ಹೋರಾಟಗಾರರೊಂದಿಗೆ ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಳ್ಳಬೇಕು. ಆದರೆ, ಜಿಲ್ಲಾಡಳಿತ ಕೆಲವೇ ಜನರ ಹಿತಾಸಕ್ತಿಗನುಗುಣವಾಗಿ ತೀರ್ಮಾನ ಕೈಗೊಳ್ಳುತ್ತಿರುವುದರಿಂದ ಪ್ರವಾಸಿಗರಿಗೆ ಅನಾನುಕೂಲವಾಗುವ ಜೊತೆಗೆ ಪ್ರವಾಸೋದ್ಯಮ ಅಭಿವೃದ್ಧಿಗೂ ಹಿನ್ನೆಡೆಯಾಗಲಿದೆ ಎಂದು ಹೇಳಿದರು.
ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವುದನ್ನು ತಡೆಯುವ ಪ್ರಯತ್ನ ನಡೆಸುತ್ತಿದೆಯೇ ಹೊರತು ಪ್ರವಾಸಿಗರಿಗೆ ಅನುಕೂಲ ಕಲ್ಪಿಸಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವುದರಿಂದ ಸಂಚಾರ ವ್ಯವಸ್ಥೆ ತೀವ್ರವಾಗಿ ಹಾಳಾಗಿದ್ದು, ಟ್ರಾಫಿಕ್ ವ್ಯವಸ್ಥೆ ಸರಿಪಡಿಸಬೇಕಾದ ಪೊಲೀಸರು ಕೇವಲ ದಂಡ ವಸೂಲಿಯಲ್ಲಿ ಹೆಚ್ಚಿನ ನಿಗಾ ವಹಿಸುತ್ತಿದ್ದಾರೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಇಂತಹ ನಿರ್ಧಾರಗಳ ಪರಿಣಾಮವಾಗಿ ಜಿಲ್ಲೆಯಲ್ಲಿರುವ ಹೋಂಸ್ಟೇಗಳು, ರೆಸಾರ್ಟ್ಗಳು, ಲಾಡ್ಜ್ಗಳು ದುಬಾರಿ ಹಣ ವಸೂಲಿ ಮಾಡುತ್ತಿವೆ ಎಂದು ಟೀಕಿಸಿದರು.
ಮೂಡಿಗೆರೆ ತಾಲೂಕಿನ ಎತ್ತಿನ ಭುಜ ಪ್ರವಾಸಿ ತಾಣ ಪ್ರವೇಶಕ್ಕೆ ನಿರ್ಬಂಧ ಹೇರಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಗಿರಿ ಪ್ರದೇಶಗಳಿಗೆ ಬರುತ್ತಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಲು ಕಾರಣವಾಗಿದೆ. ಇದನ್ನು ಸರಿಪಡಿಸ ಬೇಕಾದರೆ ಶಿವಮೊಗ್ಗ, ಬಾಳೇಹೊನ್ನೂರು ಕಡೆಗಳಿಂದ ಬರುವ ಪ್ರವಾಸಿಗರಿಗೆ ಪರ್ಯಾಯ ಮಾರ್ಗಗಳ ವ್ಯವಸ್ಥೆ ಮಾಡಿ ಜನ ಹಾಗೂ ವಾಹನಗಳ ದಟ್ಟಣೆ ಸರಿದೂಗಿಸಬಹುದು ಎಂದು ಹೇಳಿದರು.
ಜಿಲ್ಲೆಗೆ ಬರುವ ಪ್ರವಾಸಿಗರಿಂದ ಲಕ್ಷಾಂತರ ರು. ಹಣ ಸಂಗ್ರಹಿಸಲಾಗುತ್ತಿದೆ. ಹಣದ ಬಗ್ಗೆ ಸಾರ್ವಜನಿಕರಿಗೆ ಯಾವುದೇ ಮಾಹಿತಿ ನೀಡದೆ ರಹಸ್ಯವಾಗಿ ಖರ್ಚು ಮಾಡಲಾಗುತ್ತಿದೆ. ಪ್ರವಾಸಿಗರಿಂದ ಸಂಗ್ರಹವಾಗುವ ಲಕ್ಷಾಂತರ ರು. ಹಣವನ್ನು ಸ್ಥಳೀಯ ಗ್ರಾಮ ಪಂಚಾಯಿತಿಗಳಾದ ಅತ್ತಿಗುಂಡಿ, ಹಿರೇಕೊಳಲೆ, ಅಲ್ಲಂಪುರ ಗ್ರಾಮ ಪಂಚಾಯಿತಿಗಳ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಗೆ ಬಳಕೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.ಸುದ್ದಿಗೋಷ್ಠಿಯಲ್ಲಿ ಸಮಿತಿ ಸಂಚಾಲಕರಾದ ಕೆ.ಕೆ. ರಘು, ಶಾಂತಕುಮಾರ್, ಮಹಮದ್ ಯೂಸೂಫ್, ಅತಾವುಲ್ಲಾಖಾನ್ ಇದ್ದರು.