ಕೊಪ್ಪಳ: ಕಾಂಗ್ರೆಸ್ ದೇಶದಲ್ಲಿ 60 ವರ್ಷ ದುರಾಡಳಿತ ಮಾಡಿದೆ. ಕಾಂಗ್ರೆಸ್ ಅವಧಿಯಲ್ಲಿ ಭಾರತ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರವಾಗಿಯೇ ಇತ್ತು. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬಂದ ಮೇಲೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ರೂಪುಗೊಂಡಿದೆ. ಅಭಿವೃದ್ಧಿ ಎನ್ನುವುದು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಸಂಸದ ಕರಡಿ ಸಂಗಣ್ಣ ಅಭಿಪ್ರಾಯಪಟ್ಟರು.
ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಒಂಬತ್ತು ವರ್ಷದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಜನತೆಯ ಅವಶ್ಯಕತೆಗಳನ್ನು ಅರಿತು ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ. ಜನತೆಗೆ ಎಲ್ಲವೂ ಅರ್ಥವಾಗುತ್ತದೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಜನತೆ ವಿಕಾಸದ ಹಾದಿ ಬಯಸುತ್ತಿದ್ದಾರೆ. ವಿಕಾಸ ಬಯಸುವವರು ಎಂದಿಗೂ ಕಾಂಗ್ರೆಸ್ ಆಯ್ಕೆ ಮಾಡಿಕೊಳ್ಳುವುದಿಲ್ಲ. ಸರ್ವಾಂಗೀಣ ಅಭಿವೃದ್ಧಿಗಾಗಿ ಮತ್ತೊಮ್ಮೆ ಬಿಜೆಪಿಗೆ ಆಶೀರ್ವದಿಸಿ ಎಂದು ಮನವಿ ಮಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಜನಧನ್, ಉಜ್ವಲ, ಸ್ವಚ್ಛ ಭಾರತ್, ಕಿಸಾನ್ ಸನ್ಮಾನ್ ಸೇರಿದಂತೆ ಹಲವು ಯೋಜನೆಗಳ ಮೂಲಕ ಅಭಿವೃದ್ಧಿಪರ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಎಲ್ಲ ವರ್ಗದ ಜನರ ಅಭಿವೃದ್ಧಿಯ ದೃಷ್ಟಿಕೋನದೊಂದಿಗೆ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಎಲ್ಲ ಯೋಜನೆಗಳು ಕೊಪ್ಪಳ ಲೋಕಸಭಾ ಕ್ಷೇತ್ರದ ಜನತೆ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಲತಾ, ಕಾರಟಗಿ ಮಂಡಲ ಅಧ್ಯಕ್ಷ ಚಂದ್ರಶೇಖರ್ ಮಸಾಲಿ, ಮುಖಂಡರಾದ ಶರಣಪ್ಪ ಬಾವಿ, ಮೌನೇಶ್ ದಡೇಸೂಗುರ, ಮಾಜಿ ತಾಪಂ ಸದಸ್ಯ ತಿಪ್ಪಣ್ಣ ಉಪಸ್ಥಿತರಿದ್ದರು.