ಶಿಕ್ಷಣದಿಂದ ಮಾತ್ರ ಬದಲಾವಣೆ ತರಲು ಸಾಧ್ಯ

KannadaprabhaNewsNetwork |  
Published : Jun 03, 2025, 12:35 AM IST
6 | Kannada Prabha

ಸಾರಾಂಶ

ಮೈಸೂರು: ಬುಡಕಟ್ಟು ಜನಾಂಗದಲ್ಲಿ ಬದಲಾವಣೆ ಕಾಣಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಚಾಮರಾಜನಗರ ವಿವಿ ಕುಲಪತಿ ಪ್ರೊ.ಎಂ.ಆರ್. ಗಂಗಾಧರ್ ತಿಳಿಸಿದರು.

ಮೈಸೂರು: ಬುಡಕಟ್ಟು ಜನಾಂಗದಲ್ಲಿ ಬದಲಾವಣೆ ಕಾಣಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಚಾಮರಾಜನಗರ ವಿವಿ ಕುಲಪತಿ ಪ್ರೊ.ಎಂ.ಆರ್. ಗಂಗಾಧರ್ ತಿಳಿಸಿದರು.

ನಗರದ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಸೋಮವಾರ ನಡೆದ ಬುಡಕಟ್ಟು ಶಿಕ್ಷಣ ಸಮಸ್ಯೆಗಳು ಮತ್ತು ಸವಾಲುಗಳು ಕುರಿತ ಎರಡು ದಿನಗಳ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸೀಸನಲ್ ಮೈಗ್ರೇಷನ್‌ ನಿಂದ ಬುಡಕಟ್ಟು ಸಮುದಾಯದ ಮಕ್ಕಳ ಶಿಕ್ಷಣ ಮೊಟಕಾಗುವುದು ಸೇರಿದಂತೆ ನಾನಾ ರೀತಿಯ ಸವಾಲುಗಳನ್ನು ಎದುರಿಸುವಂತಾಗಿದೆ. ಬುಡಕಟ್ಟು ಸಮುದಾಯದವರು ಕೆಲವು ತಿಂಗಳ ಕಾಲ ಕೆಲಸಕ್ಕಾಗಿ ಬೇರೆ ಬೇರೆ ಜಿಲ್ಲೆಗಳಿಗೆ ಹೋಗಿ ನೆಲೆಸುತ್ತಾರೆ. ಆಗ ಅವರ ಮಕ್ಕಳು ಸರಿಯಾಗಿ ಶಿಕ್ಷಣ ಪಡೆಯಲಾಗದೆ ಅರ್ಧಕ್ಕೆ ಮೊಟಕುಗೊಳಿಸುತ್ತಾರೆ ಎಂದರು.

ಕೆಲ ಕಾಫಿ ತೋಟದವರು ಸಾರಾಯಿ ಕೊಟ್ಟು ಒಂದು ತಿಂಗಳ ಕೆಲಸವನ್ನು 15 ದಿನಕ್ಕೆ ಮಾಡಿಸಿಕೊಳ್ಳುತ್ತಾರೆ. ಇದರಿಂದ ಈ ಸಮುದಾಯ ವ್ಯಸನಕ್ಕೆ ಒಳಗಾಗುತ್ತದೆ. ಬುಡಕಟ್ಟು ಸಮುದಾಯ ಬದಲಾದ ಜೀವನ ಶೈಲಿಯಿಂದ ಚಿಕ್ಕವಯಸ್ಸಿನಲ್ಲೆ ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆಗೆ ಒಳಗಾಗುತ್ತಿದ್ದಾರೆ ಎಂದು ಅವರು ಹೇಳಿದರು.

ಬುಡಕಟ್ಟು ಸಮುದಾಯದವರಿಗೆ ಸಮರ್ಪಕವಾಗಿ ಶಿಕ್ಷಣ ದೊರೆಯುತ್ತಿಲ್ಲ. ಸರ್ಕಾರ ಬಜೆಟ್‌ ನಲ್ಲಿ ಬುಡಕಟ್ಟು ಸಮುದಾಯದ ಶಿಕ್ಷಣಕ್ಕೆ ಹೆಚ್ಚು ಹಣ ನೀಡಿದರೂ ಅದು ಖರ್ಚಾಗುತ್ತಿಲ್ಲ. ಏಕೆಂದರೆ ಅಧಿಕಾರಿಗಳಿಗೆ ಇಚ್ಛಾ ಶಕ್ತಿಯಿಲ್ಲ. ಸರ್ಕಾರ ಅಗತ್ಯಕ್ಕೆ ತಕ್ಕಷ್ಟು ಶಿಕ್ಷಕರನ್ನು ನೇಮಕ ಮಾಡಬೇಕು. ಭೂಮಾಲೀಕರು ಮಕ್ಕಳಿಗೆ ಶಿಕ್ಷಣ ಕೊಡಿಸಲು ಆಸಕ್ತಿ ವಹಿಸಬೇಕು. ವಸತಿ ಯೋಜನೆಯಡಿ ವೈಜ್ಞಾನಿಕವಾಗಿ ಮನೆ ನಿರ್ಮಿಸಿ ಕೊಡಬೇಕು. ಭೂಮಿ ನೀಡಿ ವ್ಯವಸಾಯ ಮಾಡಲು ತರಬೇತಿ ನೀಡಬೇಕು ಎಂದರು.

ಪಿಎಚ್.ಡಿ ಮಾಡಿದರೂ ಕೆಲಸ ಸಿಗುತ್ತಿಲ್ಲ

ಮೈಸೂರು ವಿವಿ ಡಾ.ಬಿ.ಆರ್. ಅಂಬೇಡ್ಕರ್ ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ನಿರ್ದೇಶಕ ಪ್ರೊ.ಜೆ. ಸೋಮಶೇಖರ್ ಮಾತನಾಡಿ, ಸಮಾಜದಲ್ಲಿ ಬಡವರಿಗೊಂದು ಶಿಕ್ಷಣ, ಶ್ರೀಮಂತರಿಗೊಂದು ಶಿಕ್ಷಣ ಇರುವಾಗ ಬುಡಕಟ್ಟು ಸಮುದಾಯದವರ ಸ್ಥಿತಿಯೇನು? ಬುಡಕಟ್ಟು ಸಮುದಾಯದವರು ಪಿಎಚ್.ಡಿ ಮಾಡಿದರೂ ಕೆಲಸ ಸಿಗುತ್ತಿಲ್ಲ. ನಿಜವಾದ ಬುಡಕಟ್ಟುಗಳ ಸ್ಥಾನವೇನು ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರ ಬುಡಕಟ್ಟು ಸಮುದಾಯದ ಮಕ್ಕಳ ಶಿಕ್ಷಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಕಾಡಿನಲ್ಲಿರುವ ಬುಡಕಟ್ಟು ಸಮುದಾಯದವರ ಬದುಕನ್ನು ಸಮಾಜದ ಮುಖ್ಯವಾಹಿನಿಗೆ ತರದಿದ್ದರೆ ಭಾರತಕ್ಕೆ ಬಹುದೊಡ್ಡ ಸವಾಲಾಗುತ್ತದೆ. ನಮ್ಮ ಅಂಬೇಡ್ಕರ್ ಕೇಂದ್ರದ ವತಿಯಿಂದ ಬುಡಕಟ್ಟು ಸಮುದಾಯದ ಮಕ್ಕಳ ಶಿಕ್ಷಣದ ಬಗ್ಗೆ ನಿಮ್ಮ ಜೊತೆ ಕೈಜೋಡಿಸಲು ಉತ್ಸುಕವಾಗಿದೆ ಎಂದರು.

ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪ ನಿರ್ದೇಶಕಿ ಬಿ.ಎಸ್. ಪ್ರಭಾ ಅರಸ್ ಮಾತನಾಡಿ, ಭಾರತದಲ್ಲಿ ಶೈಕ್ಷಣಿಕ ಪ್ರಗತಿ ಶೇ.77 ರಷ್ಟಿದ್ದರೆ ಪರಿಶಿಷ್ಠ ಪಂಗಡದ ಶೈಕ್ಷಣಿಕ ಪ್ರಗತಿ ಶೇ.58 ರಷ್ಟಿದೆ. ಅದರಲ್ಲೂ ಗ್ರಾಮೀಣ ಬುಡಕಟ್ಟು ಜನರ ಶೈಕ್ಷಣಿಕ ಪ್ರಗತಿ ಶೇ.42 ರಷ್ಟಿದೆ. ಪಿವಿಟಿಜಿ ಸಮುದಾಯದವರ ಶೈಕ್ಷಣಿಕ ಪ್ರಗತಿ ತೀರ ಕಡಿಮೆ ಇದ್ದು ಶೇ.40 ರಷ್ಟು ವಿದ್ಯಾರ್ಥಿಗಳು 8ನೇ ತರಗತಿಯಲ್ಲೇ ಶಾಲೆ ಬಿಡುತ್ತಿದ್ದಾರೆ. ಶೇ.2 ರಷ್ಟು ಜೇನು ಕುರುಬ ಮಕ್ಕಳು ಕಾಲೇಜು ಶಿಕ್ಷಣ ಪಡೆಯುತ್ತಿದ್ದಾರೆ. ಆದ್ದರಿಂದ ಈ ವಿಚಾರ ಸಂಕಿರಣ ಮಾಡಲಾಗುತ್ತಿದೆ ಎಂದರು.

ವಿಚಾರ ಸಂಕಿರಣದಲ್ಲಿ ವೀಡಿಯೋ ಕಾನ್ಫೆರನ್ಸ್ ಮೂಲಕ ಬುಡಕಟ್ಟು ಸಮುದಾಯದ ಮುಖಂಡರು ಹೇಳಿದ ಸಮಸ್ಯೆಗಳನ್ನು ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಿ. ರಂದೀಪ್, ನಿರ್ದೇಶಕ ಟಿ. ಯೋಗೀಶ್ ಆಲಿಸಿ, ಸರ್ಕಾರದ ಮಟ್ಟದಲ್ಲಿ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರೊ.ಜಿ. ವೆಂಕಟೇಶ್‌ ಕುಮಾರ್, ಪ್ರೊ. ರಮಣಯ್ಯ, ಸಂಶೋಧನಾಧಿಕಾರಿ ಎಲ್. ಶ್ರೀನಿವಾಸ, ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಎಂ.ಕೆ. ಮಲ್ಲೇಶ್, ಡಾ. ಮೋಹನ್‌ ಕುಮಾರ್, ಡಾ. ಮಂಜುನಾಥ್, ಡಾ. ರವಿಕುಮಾರ್, ಡಾ. ಕಲಾವತಿ, ಭವ್ಯಾ, ಗುಣಧರ್, ಪುಷ್ಪಲತಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ