ಕನ್ನಡಪ್ರಭ ವಾರ್ತೆ ದಾಂಡೇಲಿ
ದಾಂಡೇಲಿಯ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ನಗರಸಭೆ, ಶಿಕ್ಷಣ ಇಲಾಖೆ ಮತ್ತು ಸ.ಪ.ಪೂ ಮಹಾವಿದ್ಯಾಲಯ ಹಳೆ ದಾಂಡೇಲಿ ಇವರ ಸಂಯುಕ್ತ ಆಶ್ರಯದಡಿ ಸ.ಪ.ಪೂ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣ ಒಂದೇ ಪ್ರಮುಖ ಅಸ್ತ್ರವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲಿಯಾದರೂ 14 ವರ್ಷದೊಳಗಿನ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುವುದು ಕಂಡು ಬಂದಲ್ಲಿ ತಕ್ಷಣವೇ ಶಿಕ್ಷಣ ಇಲಾಖೆಗೆ ಇಲ್ಲವೇ ಕಾರ್ಮಿಕ ಇಲಾಖೆಗೆ ಮಾಹಿತಿಯನ್ನು ನೀಡಿ ಅಂತಹ ಮಕ್ಕಳನ್ನು ಶಾಲೆಗೆ ಸೇರಿಸುವ ನಿಟ್ಟಿನಲ್ಲಿ ಸಮಾಜವು ಸಂಬಂಧ ಪಟ್ಟ ಇಲಾಖೆಗಳ ಜೊತೆ ಕೈಜೋಡಿಸಬೇಕು ಎಂದು ಕರೆ ನೀಡಿದರು.ನಗರಸಭೆಯ ಪೌರಾಯುಕ್ತ ವಿವೇಕ ಬನ್ನೆ ಮಾತನಾಡಿ, ಸಮಾಜದಲ್ಲಿ ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ. ಶಿಕ್ಷಣದಿಂದ ಮಾತ್ರ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದ್ದು, ಪ್ರತಿಯೊಬ್ಬರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವುದರ ಮೂಲಕ ಬಾಲ ಕಾರ್ಮಿಕ ಪದ್ಧತಿಯನ್ನು ಬುಡಸಮೇತ ಕಿತ್ತೊಗೆಯಲು ಕಂಕಣಬದ್ಧರಾಗಬೇಕೆಂದರು.
ಸಹಾಯಕ ಸರಕಾರಿ ಅಭಿಯೋಜಕ ರಮೇಶ ಎಂ.ಬಂಕಾಪುರ, ಹಿರಿಯ ನ್ಯಾಯವಾದಿ ಎಂ.ಸಿ.ಹೆಗಡೆ, ಕಾರ್ಮಿಕ ನಿರೀಕ್ಷಕ ಚೇತನಕುಮಾರ್ ಎಸ್.ಹುಕುಮನವರ ಮಾತನಾಡಿದರು.
ಶಿಕ್ಷಕರಾದ ಸಿಕಂದರ್ ಮತ್ತು ಆಶಾ ದೇಶಭಂಡಾರಿ, ಸಿ.ಆರ್.ಪಿಗಳಾದ ಲಲಿತಾ, ಬೀಬಿ ಹಾಜೀರಾ ಮತ್ತು ಶ್ರೀದೇವಿ ಉಪಸ್ಥಿತರಿದ್ದರು.
ಚೇತನಕುಮಾರ್ ಎಸ್.ಹುಕುಮನವರ ಸ್ವಾಗತಿಸಿ, ಉಪನ್ಯಾಸಕಿ ಅನಿತಾ ಕುಮಾರಿ ನಿರೂಪಿಸಿದರು.