ಹಸಿದವರಿಗೆ ಮಾತ್ರ ಗೊತ್ತು ಅನ್ನದ ಅಗುಳಿನ ಮಹತ್ವ: ಶ್ವೇತಾ ರಾವ್

KannadaprabhaNewsNetwork |  
Published : Jun 05, 2025, 03:32 AM IST
ಪೋಟೋ: 04ಎಸ್‌ಎಂಜಿಕೆಪಿ01ಶಿವಮೊಗ್ಗ ನಗರದ ನವ್ಯಶ್ರೀ ಈಶ್ವರವನ ಚಾರಿಟೆಬಲ್ ಟ್ರಸ್ಟ್ ಮತ್ತು ಯೂನಿವರ್ಸಲ್ ನಾಲೆಡ್ಜ್ ಸಹಯೋಗದಲ್ಲಿ ಮಂಗಳವಾರ ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಡೆದ 59ನೇ ಉಚಿತ ಅನ್ನದಾನ ಕಾರ್ಯಕ್ರಮದಲ್ಲಿ ಕೃಷಿಕರು, ಕಾಂಡಿಮೆಂಟ್ಸ್ ವ್ಯಾಪಾರಿಗಳೂ ಆದ ಎಸ್‌.ಸುಬ್ರಹ್ಮಣ್ಯ ಇವರ 60ನೇ ಜನ್ಮದಿನ  ಪ್ರಯುಕ್ತ ಅನ್ನಸಂತಾರ್ಪಣೆ ನಡೆಯಿತು. | Kannada Prabha

ಸಾರಾಂಶ

ಅನ್ನ ಮನುಷ್ಯನ ಜೀವಧಾತು. ಅನ್ನದ ಬಗ್ಗೆ ಅಹಂಕಾರ ಸಲ್ಲದು. ಅನ್ನದ ಅಗುಳಿನ ಮಹತ್ವ ಹಸಿದವನಿಗೆ ಚೆನ್ನಾಗಿ ತಿಳಿದಿರುತ್ತದೆ. ಅನ್ನ ಪರಬ್ರಹ್ಮ. ಬದುಕಿಗೆ ನೀಡುವಷ್ಟೇ ಪ್ರಾಧಾನ್ಯತೆಯನ್ನು ಅನ್ನಕ್ಕೂ ನೀಡಬೇಕು ಎಂದು ಜೋತಿಷ್ಯ ತಜ್ಞೆ ಶ್ವೇತಾ ರಾವ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಅನ್ನ ಮನುಷ್ಯನ ಜೀವಧಾತು. ಅನ್ನದ ಬಗ್ಗೆ ಅಹಂಕಾರ ಸಲ್ಲದು. ಅನ್ನದ ಅಗುಳಿನ ಮಹತ್ವ ಹಸಿದವನಿಗೆ ಚೆನ್ನಾಗಿ ತಿಳಿದಿರುತ್ತದೆ. ಅನ್ನ ಪರಬ್ರಹ್ಮ. ಬದುಕಿಗೆ ನೀಡುವಷ್ಟೇ ಪ್ರಾಧಾನ್ಯತೆಯನ್ನು ಅನ್ನಕ್ಕೂ ನೀಡಬೇಕು ಎಂದು ಜೋತಿಷ್ಯ ತಜ್ಞೆ ಶ್ವೇತಾ ರಾವ್‌ ಹೇಳಿದರು.

ನಗರದ ನವ್ಯಶ್ರೀ ಈಶ್ವರವನ ಚಾರಿಟೆಬಲ್ ಟ್ರಸ್ಟ್ ಮತ್ತು ಯೂನಿವರ್ಸಲ್ ನಾಲೆಡ್ಜ್ ಸಹಯೋಗದಲ್ಲಿ ಮಂಗಳವಾರ ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಡೆದ 59ನೇ ಉಚಿತ ಅನ್ನದಾನ ಕಾರ್ಯಕ್ರಮದಲ್ಲಿ ಕೃಷಿಕರು, ಕಾಂಡಿಮೆಂಟ್ಸ್ ವ್ಯಾಪಾರಿಗಳೂ ಆದ ಎಸ್‌.ಸುಬ್ರಹ್ಮಣ್ಯ ಇವರ 60ನೇ ಜನ್ಮದಿನ ಪ್ರಯುಕ್ತ ಸಿಹಿಯೂಟ ವಿತರಣಾ ಸೇವೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿ, ಅನ್ನದ ಒಂದು ಅಗುಳಿನ ಉಳಿತಾಯ ನೂರು ಅಗುಳಿನ ಉತ್ಪಾದನೆಗಿಂತಲೂ ಮಹತ್ವದ್ದು ಎಂಬುದನ್ನು ಎಲ್ಲರೂ ಅರಿಯಬೇಕು. ನಾಲ್ಕು ಅಗುಳು ಕಡಿಮೆ ತಿಂದರೂ ಪರವಾಗಿಲ್ಲ, ಹತ್ತು ಅಗುಳು ಹಾಳಾಗದಂತೆ ನೋಡಿಕೊಳ್ಳಬೇಕು. ಆಹಾರವನ್ನು ವ್ಯರ್ಥ ಮಾಡಬಾರದು ಎಂದರು.

ಅತ್ಯಂತ ಶ್ರೇಷ್ಠ ದಾನಗಳಲ್ಲಿ ಅನ್ನದಾನ ಸಹ ಒಂದು. ಮನುಷ್ಯನಿಗೆ ಧನ, ಕನಕ, ಆಸ್ತಿ ಅಥವಾ ಮತ್ತಿನ್ಯಾವ ಸಂಪತ್ತನ್ನು ದಾನವಾಗಿ ನೀಡಿದರೂ ಸಂತೃಪ್ತಿ ಪಡಿಸಲು ಸಾಧ್ಯವಿಲ್ಲ. ಇನ್ನಷ್ಟು ಬೇಕು, ಮತ್ತಷ್ಟು ಸಿಕ್ಕಿದ್ದರೆ ಚೆನ್ನಾಗಿತ್ತು ಎಂಬ ಲಾಲಸೆ ಸಹಜ. ಆದರೆ ಹಸಿದವನಿಗೆ ಅನ್ನವನ್ನು ಹೊಟ್ಟೆ ತುಂಬಾ ನೀಡಿದರೆ ಆತ ಸಂತೃಪ್ತನಾಗುತ್ತಾನೆ. ಹೊಟ್ಟೆ ತುಂಬಿದ ನಂತರ ತಿನ್ನಲು ಮತ್ತಷ್ಟು ಅನ್ನ ನೀಡಿದರೂ ಆತ ಅದನ್ನು ಸೇವಿಸುವುದಿಲ್ಲ ಎಂದು ತಿಳಿಸಿದರು.

ಅನ್ನವನ್ನು ತಿನ್ನುವ ಹಕ್ಕಿದೆಯೇ ವಿನಾ ಅದನ್ನು ಬಿಸಾಡುವ ಹಕ್ಕಿಲ್ಲ. ನಾವು ತಿನ್ನುವ ಪ್ರತಿಯೊಂದು ಅಗುಳಿನ ಮೇಲೂ ಅದನ್ನು ತಿನ್ನುವವನ ಹೆಸರು ಬರೆದಿರುತ್ತದೆ ಎಂಬ ಮಾತು ಜನಜನಿತ. ಸಮಾರಂಭಗಳಲ್ಲಿ ಮನುಷ್ಯನ ಹೊಟ್ಟೆ ಸೇರಬೇಕಾದ ಅನ್ನ ಸ್ವೇಚ್ಛಾಚಾರ, ಆಡಂಬರ, ತೋರ್ಪಡಿಕೆಯಿಂದಾಗಿ ಕಸದ ಬುಟ್ಟಿ ಸೇರುತ್ತಿದೆ ಎಂದು ವಿಷಾದಿಸಿದರು.

ಸಕಲ ಜೀವ ರಾಶಿಗಳಿಗೆ ಶಕ್ತಿಯನ್ನು ಕೊಡುವುದೇ ಅನ್ನ. ಅದಕ್ಕಾಗಿಯೇ ಶಂಕರಾಚಾರ್ಯರು ಶಕ್ತಿ ಸ್ವರೂಪಿಣಿಯಾದ ಜಗನ್ಮಾತೆಯನ್ನು “ಅನ್ನಪೂರ್ಣೇ ಸದಾಪೂರ್ಣೇ ಶಂಕರ ಪ್ರಾಣವಲ್ಲಭೇ ಎಂದು ಸ್ತುತಿಸಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮೂನ್ನೂರಕ್ಕೂ ಹೆಚ್ಚು ಮಂದಿಗೆ ಊಟ ವಿತರಿಸಲಾಯಿತು. ನವ್ಯಶ್ರೀ ಈಶ್ವರವನ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ನವ್ಯಶ್ರೀ ನಾಗೇಶ್, ನಾಗರಾಜ್ ಶೆಟ್ಟರ್, ಎಸ್‌.ಸುಬ್ರಹ್ಮಣ್ಯ , ಜ್ಯೋತಿ, ಪಿ.ಪ್ರದೀಪ್ , ದಿನೇಶ್ ಬಾಬು, ಎಂ.ಕೆ.ಬಾಲಚಂದ್ರ, ಮನೋಹರ ವಿಜಾಪುರ ಮತ್ತಿತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ