ಕನ್ನಡಪ್ರಭ ವಾರ್ತೆ ಮಂಗಳೂರು
ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಎಸ್.ಜೆ. ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯಲ್ಲಿ ನಡೆಯಿತು.ಶಾಲೆ ಕಾಲೇಜುಗಳಲ್ಲಿ ಮಕ್ಕಳಿಗೆ ತಂಬಾಕು ಸೇವನೆಯ ಕೆಟ್ಟ ಪರಿಣಾಮದ ಬಗ್ಗೆ ಅರಿವು ಮೂಡಿಸುವುದರ ಜತೆಗೆ ಶಾಲಾ-ಕಾಲೇಜು ಮತ್ತು ಗ್ರಾಮ ಪಂಚಾಯ್ತಿ ಸಮನ್ವಯದೊಂದಿಗೆ ಐ.ಇ. ಸಿ ಚಟುವಟಿಕೆಗಳನ್ನು ಹಮ್ಮಿಕೊಂಡು ಶಿಕ್ಷಣ ಸಂಸ್ಥೆಗಳನ್ನು ತಂಬಾಕು ಮುಕ್ತವಾಗಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಅವರು ಹೇಳಿದರು.ಸಾರ್ವಜನಿಕ ಸ್ಥಳಗಳಲ್ಲಿ ಸಿಗರೆಟ್ ಮತ್ತು ತಂಬಾಕು ಸೇವನೆ ನಿಯಂತ್ರಿಸಲು ಆರೋಗ್ಯ ಇಲಾಖೆ ಜತೆ ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಪಂಚಾಯತ್ ರಾಜ್ ಇಲಾಖೆ ಸಮನ್ವಯದೊಂದಿಗೆ ತಾಲೂಕು ಮಟ್ಟದಲ್ಲಿ ತಿಂಗಳಿಗೊಮ್ಮೆ ಕೋಟ್ಪಾ ಕಾರ್ಯಾಚರಣೆ ನಡೆಸಬೇಕು ಎಂದು ಅವರು ಸೂಚಿಸಿದರು.
ಮಂಗಳೂರು ತಾಲೂಕಿನಲ್ಲಿ ಕೋಟ್ಪಾ ಕಾಯ್ದೆಯಡಿ ಡಿಸೆಂಬರ್ 2024ರಿಂದ ಜೂನ್ 2025ರವರೆಗೆ 87 ಪ್ರಕರಣಗಳು ದಾಖಲಾಗಿದ್ದು, ಒಟ್ಟು 22700 ರು. ದಂಡ ಸಂಗ್ರಹಿಸಲಾಗಿದೆ ಎಂದು ಹರ್ಷವರ್ಧನ್ ತಿಳಿಸಿದರು.ಜಿಲ್ಲೆಯಲ್ಲಿ ಒಟ್ಟು 43 ದಡಾರ ರುಬೆಲ್ಲಾ ಸಂಶಯಾಸ್ಪದ ಪ್ರಕರಣಗಳು ದಾಖಲಾಗಿದ್ದು, ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಇಲಾಖೆ ಹೆಚ್ಚು ಗಮನ ಹರಿಸಬೇಕು. ಜ್ವರ, ದದ್ದುಗಳು ಕಂಡುಬಂದರೆ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ವರದಿ ಮಾಡುವಂತೆ ಅವರು ಸೂಚಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಮಾತನಾಡಿ, ಪ್ರಸ್ತುತ ಮಳೆಗಾಲದ ಸಂದರ್ಭದಲ್ಲಿ ಕಲುಷಿತ ನೀರಿನಿಂದ ಅಥವಾ ಪಾನೀಯ ಮುಂತಾದ ಆಹಾರ ಪದಾರ್ಥಗಳ ಸೇವನೆಯಿಂದ ಸೋಂಕು ಕಾಣಿಸಿಕೊಂಡು ಮಕ್ಕಳಲ್ಲಿ ಅತಿಸಾರ ಸಮಸ್ಯೆ ಉಂಟಾಗಬಹುದು. ಅತಿಸಾರ ತಡೆಗಟ್ಟಲು ಮನೆಗಳಲ್ಲಿ ಒ.ಆರ್.ಎಸ್ ಇಟ್ಟುಕೊಳ್ಳಬೇಕು. ಶಾಲೆಗಳಲ್ಲಿ ಮಕ್ಕಳಿಗೆ ನೈರ್ಮಲ್ಯದ ಬಗ್ಗೆ ಮಾಹಿತಿ ನೀಡುವುದರ ಜತೆಗೆ ಅಗತ್ಯ ಸೌಲಭ್ಯಗಳನ್ನು ಅವರಿಗೆ ನೀಡಬೇಕು ಎಂದು ಅವರು ಹೇಳಿದರು.ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕೆ., ಮಂಗಳೂರು ತಾಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಮಹೇಶ್ ಹೊಳ್ಳ ಮತ್ತಿತರರಿದ್ದರು.