ರಾಜಿ ಸಂಧಾನದಿಂದ ಪ್ರಕರಣ ಇತ್ಯರ್ಥಕ್ಕೆ ಅವಕಾಶ: ನ್ಯಾ.ಬಿ.ಎಸ್‌ ರೇಖಾ

KannadaprabhaNewsNetwork |  
Published : Feb 10, 2024, 01:51 AM IST
ಯಾದಗಿರಿ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾ ಸತ್ರ ನ್ಯಾಯಾಧೀಶರಾದ ಬಿ. ಎಸ್. ರೇಖಾ ಅವರು, ಮಾರ್ಚ್ 9 ರಂದು ರಾಷ್ಟ್ರೀಯ ಲೋಕ್ ಅದಾಲತ್ ಬಗ್ಗೆ ವಿವರಿಸಿದರು. | Kannada Prabha

ಸಾರಾಂಶ

ಮಾ.9ರಂದು ಯಾದಗಿರಿಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಅದಾಲತ್‌ನಲ್ಲಿ 2383 ಪ್ರಕರಣಗಳನ್ನು ಜಿಲ್ಲೆಯಲ್ಲಿ ಗುರುತಿಸಿದ್ದು, ಇನ್ನೂ ಹೆಚ್ಚಿಗೆ ಆಗಲಿವೆ. ಸಾರ್ವಜನಿಕರು ಅದಾಲತ್‌ನಲ್ಲಿ ಪಾಲ್ಗೊಂಡು ಪ್ರಕರಣ ಇತ್ಯರ್ಥಪಡಿಸಕೊಳ್ಳುವಂತೆ ನ್ಯಾಯಾಧೀಶೆ ರೇಖಾ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಯಾದಗಿರಿ

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳನ್ನು 2024ರ ಮಾರ್ಚ್ 9 ರಂದು ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತೀ ಶೀಘ್ರವಾಗಿ ರಾಜಿ ಸಂಧಾನದ ಮೂಲಕ ಪರಿಹರಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ಜಿಲ್ಲಾ ಸತ್ರ ನ್ಯಾಯಾಧೀಶರಾದ ಬಿ. ಎಸ್. ರೇಖಾ ಅವರು ತಿಳಿಸಿದ್ದಾರೆ.

ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಯಾದಗಿರಿ ವತಿಯಿಂದ ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಬರುವ 2024ರ ಮಾರ್ಚ್ 9 ರಂದು ಜಿಲ್ಲೆಯ ಎಲ್ಲ ನ್ಯಾಯಾಲಯದ ಆವರಣಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.

ಅದಾಲತ್‌ನಲ್ಲಿ 2383 ಪ್ರಕರಣಗಳನ್ನು ಜಿಲ್ಲೆಯಲ್ಲಿ ಗುರುತಿಸಿದ್ದು, ಇನ್ನೂ ಹೆಚ್ಚಿಗೆ ಆಗಲಿವೆ. ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಕಾರ್ಮಿಕ ವಿವಾದಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೈಮ್‌ಗಳು, ಭೂಸ್ವಾಧೀನ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಸಾರ್ವಜನಿಕ ಉಪಯಕ್ತತೆ ಸೇವೆಗಳಿಗೆ ಸಂಬಂಧಿಸಿದ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಅದಾಲತ್‌ನಲ್ಲಿ ಇತ್ಯರ್ಥಕ್ಕೆ ಅವಕಾಶವಿದೆ ಎಂದು ನ್ಯಾ. ರೇಖಾ ತಿಳಿಸಿದರು.

ಕಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ವೈವಾಹಿಕ/ಕುಟುಂಬ ನ್ಯಾಯಾಲಯ ಪ್ರಕರಣಗಳು (ವಿಚ್ಛೇದನೆಯನ್ನು ಹೊರತುಪಡಿಸಿ) ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳ ಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೆ ಇರುವ ಪ್ರಕರಣಗಳನ್ನು ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದು ಹೇಳಿದರು.

ಮಾಹಿತಿಗಾಗಿ ಬೆಂಗಳೂರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಟೋಲ್ ಫ್ರಿ ಸಂ.1800-425-90900, ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ ಆವರಣ ಯಾದಗಿರಿ ಇವರನ್ನು ಸಂಪರ್ಕಿಸಬಹುದು ಅಥವಾ ದೂ. 08473 253243 ಇಲ್ಲಿಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ರವೀಂದ್ರ ಹೊನೋಲೆ, ಶಹಾಪೂರ (ಜೆ.ಎಮ್.ಎಫ್.ಸಿ) ಸಿವಿಲ್ ನ್ಯಾಯಾಧೀಶರಾದ ಸಿದ್ದರಾಮ ಟಿ.ಪಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಸಿ.ಎಸ್.ಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ