ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ತಾಲೂಕಿನ ಕೆಆರ್ಎಸ್ ಬಳಿ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ನಿವೃತ್ತ ಅರಣ್ಯಾಧಿಕಾರಿ ಹಾಗೂ ಹಿರಿಯ ಪರಿಸರವಾದಿ ಡಾ.ಅ.ನ.ಯಲ್ಲಪ್ಪರೆಡ್ಡಿ ಅಮ್ಯೂಸ್ ಮೆಂಟ್ ಪಾರ್ಕಿನಿಂದಾಗುವ ಹಾನಿ ಹಾಗೂ ದುಷ್ಪರಿಣಾಮಗಳ ಕುರಿತು ಮಾತನಾಡಿದರು.
90 ವರ್ಷಗಳ ಇತಿಹಾಸವಿರುವ ಕೆಆರ್ಎಸ್ ಅಣೆಕಟ್ಟೆ ಬಳಿಯ ಪ್ರದೇಶಗಳನ್ನು ಪ್ರವಾಸೋದ್ಯಮದ ಹೆಸರಿನಲ್ಲಿ ರೈತರಿಂದ ಭೂಮಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಸುಮಾರು 2663 ಕೋಟಿ ರು. ವೆಚ್ಚದಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಿಸಿ ಖಾಸಗಿ ವ್ಯವಸ್ಥೆಗೆ 34 ವರ್ಷಗಳಿಗೆ ಗುತ್ತಿಗೆ ನೀಡಲು ಸರ್ಕಾರ ಮುಂದಾಗಿರುವುದು ಅಪಾಯಕಾರಿ ಬೆಳವಣಿಗೆ. ಇದನ್ನು ಸಾರ್ವಜನಿಕರು ತೀವ್ರವಾಗಿ ವಿರೋಧಿಸಬೇಕು ಎಂದರು.ಈ ಯೋಜನೆ ರೈತ ವಿರೋಧಿ ಕೃತ್ಯವಾಗಿದ್ದು, ಜೊತೆಗೆ ಕೆಆರ್ಎಸ್ನ ವಿಶ್ವವಿಖ್ಯಾತ ಬೃಂದಾವನವನ್ನು ಉನ್ನತೀಕರಣ ಹೆಸರಿನಲ್ಲಿ ಇಲ್ಲಿನ ಪರಿಸರಕ್ಕೂ ಹಾನಿ ಮಾಡಿ ಈ ಪ್ರದೇಶವನ್ನು ನಾಶಪಡಿಸಲಾಗುತ್ತಿದೆ. ಇದು ಜನ ವಿರೋಧಿಯಾಗಿದ್ದು, ಪ್ರವಾಸೋದ್ಯಮ ಅಭಿವೃದ್ಧಿ ಹೆಸರಿನಲ್ಲಿ ಕೆಆರ್ಎಸ್ ಅಣೆಕಟ್ಟೆಯ ಭದ್ರತೆ ಹಾಗೂ ಕೆಆರ್ಎಸ್ ಅಣೆಕಟ್ಟೆಯ ಸುತ್ತಲ ಗ್ರಾಮಗಳ ಕೃಷಿ ಬದುಕು, ರೈತರ ಬೇಸಾಯದ ಬದುಕು ಪಲ್ಲಟಗೊಳಿಸುವ ಅವೈಜ್ಞಾನಿಕವಾಗಿದ್ದು, ಜೀವ ವಿರೋಧಿ, ಜನವಿರೋಧಿ, ಸಂವಿಧಾನ ವಿರೋಧಿ, ಕರಾಳ, ಅಪಾಯಕಾರಿಯಾಗಿದೆ ಎಂದರು.
ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷೆ ಸುನಂದಾ ಜಯರಾಂ ಮಾತನಾಡಿ, ಕೆಆರ್ಎಸ್ ಅಣೆಕಟ್ಟೆ ಭದ್ರತೆ ಹಾಗೂ ಸುರಕ್ಷತೆ ಹಿತ ದೃಷ್ಟಿಯಿಂದ ಇರುವ ಅಣೆಕಟ್ಟೆಗೆ ಜೋಡಣೆಯ ಸಮಾನಂತರ ಇನ್ನೊಂದು ಅಣೆಕಟ್ಟನ್ನು ತುರ್ತಾಗಿ ನಿರ್ಮಾಣ ಮಾಡಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣಕ್ಕೆ ಬಳಸಲು ಮುಂದಾಗಿರುವ 2663 ಕೋಟಿ ರು. ಹಣವನ್ನೇ ಈ ಕಾಮಗಾರಿಗೆ ಉಪಯೋಗಿಸಬೇಕು ಎಂದು ಒತ್ತಾಯಿಸಿದರು.
ಕೆಆರ್ಎಸ್ ಗ್ರಾ.ಪಂ ಅಧ್ಯಕ್ಷ ಜೆ.ರವಿಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೈತ ಮುಖಂಡರಾದ ಪಚ್ಚೆ ನಂಜುಂಡಸ್ವಾಮಿ, ಇಂಡವಾಳು ಚಂದ್ರಶೇಖರ್, ಬೋರಯ್ಯ, ಡಿಎಸ್ಎಸ್ ಮುಖಂಡ ಎಂ.ವಿ.ಕೃಷ್ಣ, ಜಯಕರ್ನಾಟಕ ಸಂಘಟನೆ ನಾರಾಯಣ ಸಭೆ ಕುರಿತು ಮಾತನಾಡಿದರು.