ಪುತ್ತೂರು: ಭವಿಷ್ಯದಲ್ಲಿ ವಿದ್ಯಾರ್ಥಿಗಳು ತಾವು ಆಯ್ಕೆ ಮಾಡಿಕೊಂಡ ಕ್ಷೇತ್ರದಲ್ಲಿ ಉತ್ತಮ ಕಾರ್ಯನಿರ್ವಹಿಸಿದಾಗ ನಮ್ಮ ರಾಷ್ಟ್ರದ ಪ್ರಗತಿ ಉತ್ತಮವಾಗಿರುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಸಿಗುವ ಸಮಯವನ್ನು ವ್ಯರ್ಥ ಮಾಡದೆ ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ನಾವು ಮಾಡುವ ಸಾಧನೆಯಿಂದ ಇತರರಿಗೆ ಪ್ರೇರಣೆ ದೊರಕಿದಾಗ ಅದು ಸಾರ್ಥಕ ಸಾಧನೆ ಎಂದೆನಿಸಿಕೊಳ್ಳುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಸಿ.ಟಿ ರವಿ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇದರ ಐಕ್ಯೂಎಸಿ ಸಹಯೋಗದಲ್ಲಿ ನಡೆದ ೨೦೨೬-೨೭ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಮಾತನಾಡಿ, ವಿವೇಕಾನಂದ ವಿದ್ಯಾಸಂಸ್ಥೆ ಶಿಕ್ಷಣದ ಜೊತೆಗೆ ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸುತ್ತಾ ಬಂದಿದೆ. ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ರೂಪಿಸಿಕೊಂಡು ಬೆಳೆದಾಗ ಮಾತ್ರ ರಾಷ್ಟ್ರ ನಿರ್ಮಾಣ ಕಾರ್ಯ ಸಾಧ್ಯ. ರಾಷ್ಟ್ರದ ವಿಚಾರ, ಚಿಂತನೆಗಳು ಬಂದಾಗ ಎಲ್ಲ ವಿದ್ಯಾರ್ಥಿಗಳು ಒಗ್ಗಟ್ಟಾಗಿ ಮುಂದೆ ಬರಬೇಕಾದುದು ಮುಖ್ಯ ಎಂದು ಹೇಳಿದರು.ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ, ಸಂಚಾಲಕ ಹಾಗೂ ನ್ಯಾಯವಾದಿ ಮುರಳಿಕೃಷ್ಣ ಕೆ.ಎನ್., ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್, ಕಾಲೇಜಿನ ವಿಶೇಷ ಅಧಿಕಾರಿ (ಆಡಳಿತ) ಹಾಗೂ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮನಮೋಹನ ಎಂ. ಹಾಗೂ ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಎ. ವಿದ್ಯಾಲಕ್ಷ್ಮೀ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ಪ್ರತಿನಿಧಿಗಳೊಂದಿಗೆ ತರಗತಿ ಪ್ರತಿನಿಧಿಗಳು ಪ್ರಮಾಣವಚನ ಸ್ವೀಕರಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಣಮ್ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೇಯಸ್ ಕೆ.ಆರ್. ವಂದಿಸಿದರು. ವಿದ್ಯಾರ್ಥಿನಿ ಅವನಿ ಕೆ. ನಿರೂಪಿಸಿದರು.