ಬೆಂಗಳೂರು : ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ನಾಯಕತ್ವದಲ್ಲಿ ಸಂಘಟನೆಯ ವಿಜಯದ ಪಥ ಮತ್ತಷ್ಟು ವಿಸ್ತರಿಸಲು ನಾವು ಶಕ್ತಿಮೀರಿ ಶ್ರಮಿಸುವ ಭರವಸೆ ನೀಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ತಮ್ಮ ಸೈದ್ಧಾಂತಿಕ ಬದ್ಧತೆ, ಕ್ರಿಯಾಶೀಲ ನಾಯಕತ್ವ, ಸುದೀರ್ಘ ರಾಜಕೀಯ ಅನುಭವ ಹಾಗೂ ತಲಸ್ಪರ್ಶಿ ಸಂಘಟನಾ ಸಾಮಥ್ರ್ಯವು ಪಕ್ಷವನ್ನು ಮತ್ತಷ್ಟು ಉತ್ತುಂಗಕ್ಕೆ ಕೊಂಡೊಯ್ಯಲಿದೆ ಎಂಬ ಅಚಲ ವಿಶ್ವಾಸ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಇದೆ. ತಮ್ಮ ದಕ್ಷ ನಾಯಕತ್ವದಲ್ಲಿ ಸಂಘಟನೆಗೆ ಹೊಸ ವೇಗ, ಕಾರ್ಯಕರ್ತರಿಗೆ ಹೊಸ ಉತ್ಸಾಹ ಮೂಡಿದೆ ಎಂದು ಹೇಳಿದ್ದಾರೆ.
ನಮ್ಮ ಎಲ್ಲ ಹಿರಿಯ ನಾಯಕರ ಬೆಂಬಲದೊಂದಿಗೆ, ದೇಶದ ಏಳಿಗೆಯ ಗುರಿಯೆಡೆಗೆ ಪಕ್ಷವನ್ನು ತಾವು ಸಮರ್ಥವಾಗಿ ಮುನ್ನಡೆಸುವ ವಿಶ್ವಾಸ ನಮ್ಮೆಲ್ಲರಿಗೆ ಇದೆ. ರಾಜ್ಯದ ಸಮಸ್ತ ಕಾರ್ಯಕರ್ತರ ಪರವಾಗಿ ತಮಗೆ ಹೆಮ್ಮೆಯ ಶುಭ ಹಾರೈಕೆಗಳು ಎಂದು ವಿಜಯೇಂದ್ರ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಪಟ್ಟರು.
ಹುಬ್ಬಳ್ಳಿಯಲ್ಲಿ ಜೆ.ಸಿ.ನಗರದ ಹು-ಧಾ ಸೆಂಟ್ರಲ್ ಕ್ಷೇತ್ರದ ಶಾಸಕರ ಕಚೇರಿ ಬಳಿ ಮಂಗಳವಾರ ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಯಿತು. ಯಾದಗಿರಿ ಜಿಲ್ಲೆ ಶಹಾಪುರದ ಬಸವೇಶ್ವರ ವೃತ್ತದಲ್ಲಿ ಸಿಹಿ ಹಂಚಿ, ಪಟಾಕಿ ಹಚ್ಚಿ ಘೋಷಣೆಗಳನ್ನು ಕೂಗಿ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು. ವಿಜಯಪುರದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ನೇತೃತ್ವದಲ್ಲಿ ಸಮಾವೇಶಗೊಂಡ ಬಿಜೆಪಿ ಮುಖಂಡರು, ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ ನೂತನ ಅಧ್ಯಕ್ಷರಿಗೆ ಶುಭ ಕೋರಿದರು.
ಮಂಗಳೂರು, ಬೀದರ್, ಬೆಳಗಾವಿ, ಶಿವಮೊಗ್ಗ, ಮೈಸೂರು ಸೇರಿ ರಾಜ್ಯದ ಇತರೆಡೆಯೂ ಸಂಭ್ರಮಾಚರಣೆಗಳು ನಡೆದವು. ==