ಕೊಪ್ಪಳ: ಜಿಲ್ಲಾ ಕೇಂದ್ರದಲ್ಲಿ ಜ.26ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಎಲ್ಲ ಇಲಾಖೆಗಳು, ಸಮಿತಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ ಎಂದು ಜಿಲ್ಲಾಧಿಕಾರಿ ನಳಿನ್ ಅತುಲ್ ಅಧಿಕಾರಿಗಳಿಗೆ ಸೂಚಿಸಿದರು.ಗಣರಾಜ್ಯೋತ್ಸವ ದಿನಾಚರಣೆ ಕುರಿತು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಅಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಧ್ವಜಾರೋಹಣ ನಡೆಯಲಿದೆ. ನಂತರ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು. ಧ್ವಜಾರೋಹಣ ಕಾರ್ಯಕ್ರಮಕ್ಕೆ ಎಲ್ಲ ಇಲಾಖೆಗಳು ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಕಾರ್ಯಕ್ರಮದ ಅಚ್ಚುಕಟ್ಟು ವ್ಯವಸ್ಥೆಗಾಗಿ ರಚಿಸಿದ ಎಲ್ಲ ಸಮಿತಿಗಳಿಗೆ ನಿಯೋಜಿಸಿದ ಅಧಿಕಾರಿ, ಸಿಬ್ಬಂದಿ ಪರಸ್ಪರ ಸಮನ್ವತೆಯಿಂದ ಕಾರ್ಯನಿರ್ವಹಿಸಬೇಕು. ಅಂದು ನಡೆಯುವ ಎಲ್ಲ ಕಾರ್ಯಕ್ರಮಗಳ ಪಟ್ಟಿಯು ಜ.24ರಂದೇ ಅಂತಿಮಗೊಳ್ಳಬೇಕು. ಸನ್ಮಾನ, ಪ್ರಶಸ್ತಿ ವಿತರಣೆ ಮುಂತಾದ ಯಾವುದೇ ಕಾರ್ಯಕ್ರಮಗಳು ಕೊನೆ ಕ್ಷಣದಲ್ಲಿ ನಿರ್ಧರಿಸುವಂತವುಗಳಲ್ಲ. ಯಾವುದೇ ಇಲಾಖೆಗಳ ಕಾರ್ಯಕ್ರಮಕ್ಕೆ ಚಾಲನೆ, ಸಾಧಕರ ಸನ್ಮಾನ, ಪ್ರಶಸ್ತಿ ವಿತರಣೆ ಕುರಿತು ಜ.24ರೊಳಗೆ ಪಟ್ಟಿ ನೀಡಿ ಅಂತಿಮಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.ಅಚ್ಚುಕಟ್ಟು ವ್ಯವಸ್ಥೆಗೆ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಯಲ್ಲಿ ಹಂಚಿಕೆ ಮಾಡಿದ ಎಲ್ಲ ಕಾರ್ಯಗಳನ್ನು ಯಾವುದೇ ಲೋಪದೋಷವಿಲ್ಲದಂತೆ, ಬೇಜವಾಬ್ದಾರಿ ತೋರದೇ ವ್ಯವಸ್ಥಿತವಾಗಿ ನಿರ್ವಹಿಸಬೇಕು. ಗೊಂದಲಗಳಿದ್ದಲ್ಲಿ ಸಂಬಂಧಿಸಿದ ಮೇಲಧಿಕಾರಿ ಸಂಪರ್ಕಿಸಬೇಕು. ಕ್ರೀಡಾಂಗಣದ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆಯನ್ನು, ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಸ್ವಚ್ಛತೆ ಹಾಗೂ ವಿದ್ಯುತ್ ದೀಪಗಳ ಅಲಂಕಾರವನ್ನು ನಗರಸಭೆ ನಿರ್ವಹಿಸಬೇಕು. ಶಾಲಾ ಮಕ್ಕಳು ಕ್ರೀಡಾಂಗಣ ಹಾಗೂ ಕ್ರೀಡಾಂಗಣದಿಂದ ಶಾಲೆಗಳಿಗೆ ತೆರಳಲು ಕೆಎಸ್ಆರ್ಟಿಸಿಯಿಂದ ಬಸ್ ವ್ಯವಸ್ಥೆ ಕಲ್ಪಿಸಬೇಕು. ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಕಲ್ಪಿಸಬೇಕು. ವೇದಿಕೆ ಅಲಂಕಾರಕ್ಕೆ ತೋಟಗಾರಿಕೆ ಇಲಾಖೆಯಿಂದ ಗಿಡಗಳನ್ನು ಒದಗಿಸಬೇಕು. ಸಚಿವರು ಅಂದು ಬೆಳಿಗ್ಗೆ ಕಾರ್ಯಕ್ರಮಕ್ಕೆ ಅರ್ಧ ಗಂಟೆ ಮುಂಚಿತವಾಗಿ ಕ್ರೀಡಾಂಗಣಕ್ಕೆ ಆಗಮಿಸುವುದರಿಂದ ಎಲ್ಲ ಅಧಿಕಾರಿಗಳು ಅದಕ್ಕೂ ಮೊದಲೇ ಕ್ರೀಡಾಂಗಣದಲ್ಲಿ ಹಾಜರಿರಬೇಕು. ಸ್ವಾತಂತ್ರ್ಯ ಹೋರಾಟಗಾರರು, ವಿಶೇಷ ಸಾಧಕರಿಗೆ ಸನ್ಮಾನಕ್ಕೆ ಕ್ರಮ ವಹಿಸಬೇಕು ಎಂದು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು.ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ ಮಾತನಾಡಿ, ಗಣರಾಜ್ಯೋತ್ಸವ ದಿನದಂದು ಪರೇಡ್ಗೆ ಆಗಮಿಸುವ ಶಾಲಾ, ಕಾಲೇಜು ಮಕ್ಕಳಿಗೆ ಬಿಸ್ಕಿಟ್ ಹಾಗೂ ನಿಂಬು ಪಾನೀಯ ಒದಗಿಸಬೇಕು. ಕ್ರೀಡಾಂಗಣದಲ್ಲಿ ಬಿಸಿಲಿಗೆ ಮಕ್ಕಳು ಬಳಲದಂತೆ ಸೂಕ್ತ ನೆರಳಿನ ವ್ಯವಸ್ಥೆ ಕಲ್ಪಿಸಬೇಕು. ಅಂದು ಸಮಾಜ ಕಲ್ಯಾಣ ಇಲಾಖೆಯಿಂದ ಸಂವಿಧಾನ ಜಾಗೃತಿ ಜಾಥಾ ಆರಂಭವಾಗುವುದರಿಂದ ಸಚಿವರು ಜಾಥಾಕ್ಕೆ ಚಾಲನೆ ನೀಡುವರು. ಎಲ್ಲ ರೀತಿಯ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು, ಪರೇಡ್ ತಂಡಗಳನ್ನು ನಿಯಮಾನುಸಾರ ವ್ಯವಸ್ಥಿತವಾಗಿ ನಿರ್ವಹಿಸಬೇಕು. ಉಳಿದಂತೆ ನಿಯೋಜಿತ ಸಮಿತಿ ಸದಸ್ಯರು ತಮಗೆ ವಹಿಸಿದ ಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಎಡಿಸಿ ಸಾವಿತ್ರಿ ಕಡಿ, ಎಸಿ ಕ್ಯಾ.ಮಹೇಶ್ ಮಾಲಗಿತ್ತಿ, ತಹಶೀಲ್ದಾರ ವಿಠ್ಠಲ್ ಚೌಗಲಾ, ಎಎಸ್ಪಿ ಹೇಮಂತಕುಮಾರ್, ಡಿಡಿಪಿಐ ಶ್ರೀಶೈಲ ಬಿರಾದಾರ, ಡಿಡಿಪಿಯು ಜಗದೀಶ್ ಎಚ್.ಎಸ್., ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜು ತಳವಾರ, ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ, ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಜುಮ್ಮನ್ನವರ ಇದ್ದರು.