ಗದಗ: ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಕಾರ್ಯಾಗಾರ ಹಾಗೂ ಉತ್ಸವ ಸಮಾವೇಶ ಫೆ. 18ರಂದು ಬೆಳಗ್ಗೆ 11ಕ್ಕೆ ನಗರದ ವಿವೇಕಾನಂದ ಸಭಾಭವನದಲ್ಲಿ ಜರುಗಲಿದ್ದು, ಈ ಉತ್ಸವ ಸಮಾವೇಶವನ್ನು ಸಂಭ್ರಮದಿಂದ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ತಿಳಿಸಿದರು.
ಪಂಚ ಗ್ಯಾರಂಟಿ ಯೋಜನೆಗಳ ಹಾಗೂ ವಿವಿಧ ಇಲಾಖೆಗಳ ಯೋಜನೆಗಳ ಕುರಿತು ಬಿಂಬಿಸುವ ಮಳಿಗೆಗಳನ್ನು(ಸ್ಟಾಲ್ಗಳನ್ನು) ನಿರ್ಮಿಸಲು ಕ್ರಮ ವಹಿಸಬೇಕು. ಸಮಾವೇಶವು ಯಾವುದೇ ಲೋಪದೋಷಗಳಿಲ್ಲದಂತೆ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಜರುಗುವಂತೆ ನೋಡಿಕೊಳ್ಳಬೇಕು ಎಂದರು.
ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಮಾತನಾಡಿ, ಫೆ. 18ರಂದು ಜರುಗುವ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಕಾರ್ಯಾಗಾರ ಹಾಗೂ ಉತ್ಸವ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಪಾಲ್ಗೊಳ್ಳುವಂತೆ ಕ್ರಮ ವಹಿಸಬೇಕು ಎಂದರು.ಕಾರ್ಯಕ್ರಮದ ಸ್ಥಳವು ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು. ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ಕಾರ್ಯಕ್ರಮದ ಸ್ಥಳದಲ್ಲಿ ಸೂಕ್ತ ಆಸನದ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ ಇರುವಂತೆ ನೋಡಿಕೊಳ್ಳಬೇಕು. ಅರ್ಹ ಫಲಾನುಭವಿಗಳಿಗೆ ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ವಿಳಂಬವಿಲ್ಲದೇ ದೊರಕುವಂತಾಗಬೇಕು ಎಂದರು.
ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ ಸಾವಿತ್ರಿ ಹೂಗಾರ, ಶಂಭು ಕಾಳೆ, ಮೀನಾಕ್ಷಿ ಬೆನಕಣ್ಣವರ, ದಯಾನಂದ ಪವಾರ, ಸಂಗಮೇಶ ಕೆರಕಲಮಟ್ಟಿ, ಭಾಷಾಸಾಬ ಮಲ್ಲಸಮುದ್ರ, ನಿಂಗಪ್ಪ ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿಕಾಯ್ಕರ್, ದೇವರಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ, ಗಣೇಶಸಿಂಗ್ ಮಿಟಾಡೆ, ಮಲ್ಲಪ್ಪ ಬಾರಕೇರ ಹಾಗೂ ಅಧಿಕಾರಿಗಳು ಇದ್ದರು.