ಹೊಸಕೋಟೆ: 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 25ಕ್ಕೂ ಹೆಚ್ಚಿನ ಲೋಕಸಭಾ ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಮುಖಂಡರು, ಕಾರ್ಯಕರ್ತರು ಮತ್ತಷ್ಟು ಪರಿಣಾಮಕಾರಿಯಾಗಿ ಸಂಘಟಿತರಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದರು.
ಬಿಜೆಪಿ ಹೈಕಮಾಂಡ್ ನನ್ನ ಮೇಲೆ ವಿಶ್ವಾಸವಿಟ್ಟು ರಾಜ್ಯಾಧ್ಯಕ್ಷರ ದೊಡ್ಡ ಜವಾಬ್ದಾರಿಯನ್ನು ಹೆಗಲಿಗೇರಿಸಿದೆ. ಪ್ರತಿಯೊಬ್ಬ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ ಮಾಡುವ ಕೆಲಸ ನಿರಂತರವಾಗಿ ಮಾಡುತ್ತೇನೆ. ಅದಕ್ಕೆ ತಮ್ಮೆಲ್ಲರ ಸಹಕಾರ ಅತ್ಯಗತ್ಯ. ಮೊದಲು ಲೋಕಸಭೆ ಚುನಾವಣೆ ಗೆಲ್ಲುವ ಗುರಿ ನಮ್ಮ ಮುಂದಿದೆ. ಆದ್ದರಿಂದ ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಯಾವುದೇ ರೀತಿಯ ಭಿನ್ನಾಭಿಪ್ರಾಯ, ಮನಸ್ತಾಪಗಳನ್ನು ಬದಿಗಿಟ್ಟು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಹೇಳಿದರು.
ಮೂರನೇ ಬಾರಿ ದೇಶದಲ್ಲಿ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿ ನೋಡಬೇಕಾದರೆ ಬಿಜೆಪಿ ಪಕ್ಷವನ್ನು ಬಹುಮತದಿಂದ ಗೆಲ್ಲಿಸಿ ಅಧಿಕಾರ ಚುಕ್ಕಾಣಿ ಹಿಡಿಯಲು ನಾವೆಲ್ಲರೂ ಶ್ರಮಿಸಬೇಕು. ಪ್ರತಿಯೊಬ್ಬ ಕಾರ್ಯಕರ್ತರು ತಮ್ಮ ಜವಾಬ್ದಾರಿಯನ್ನು ಅರಿತು ವಿಶಾಲ ಮನಸ್ಸಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ. ಕಾರ್ಯಕರ್ತರೇ ಪಕ್ಷದ ಜೀವಾಳ. ಬಿಜೆಪಿ ಪಕ್ಷವನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಬೇಕು. ಹಿರಿಯರ ಮಾರ್ಗದರ್ಶನದಲ್ಲಿ ಕಿರಿಯರನ್ನು ಸಂಘಟಿಸಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ಹೇಳಿದರು.ಬಿಜೆಪಿ ಯುವ ಮುಖಂಡ ಹುಲ್ಲೂರು ಕಿರಣ್ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರು ಆಯ್ಕೆಯಾದ ನಂತರ ಬಿಜೆಪಿ ಪಕ್ಷದಲ್ಲಿ ಹಾಗೂ ಕಾರ್ಯಕರ್ತರಲ್ಲಿ ಸಾಕಷ್ಟು ಹುಮ್ಮಸ್ಸು ಬಂದಿದೆ. ವಿಜಯೇಂದ್ರ ಅವರು ಪಕ್ಷ ಸಂಘಟನೆಯ ನೈಪುಣ್ಯತೆಯನ್ನು ಹೊಂದಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವುದರಲ್ಲಿ ಯಾವುದೇ ಸಂದೇಹವಿಲ್ಲ. ಬಿಜೆಪಿ ಪಕ್ಷದ ಸಂಘಟನೆ ನಿರಂತರವಾಗಿ ಆಗಬೇಕು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೊಮ್ಮೆ ಪ್ರಧಾನಿ ಪಟ್ಟವನ್ನು ಕಟ್ಟಬೇಕು. ಅದಕ್ಕೆ ನಾವೆಲ್ಲರೂ ಸಂಘಟಿತರಾಗಿ ಶ್ರಮಿಸಬೇಕು ಎಂದು ತಿಳಿಸಿದರು.
ಈ ವೇಳೆ ತಾಲೂಕು ಬಿಜೆಪಿ ಅಧ್ಯಕ್ಷ ಹುಲ್ಲೂರು ಕೆ. ಸತೀಶ್, ನಗರಸಭೆ ಸದಸ್ಯರಾದ ಕೆ ದೇವರಾಜ್, ಸಿಪಿಎನ್ ನವೀನ್, ಅರುಣ್ ಕುಮಾರ್, ಸೇರಿದಂತೆ ಸ್ಥಳೀಯ ಮುಖಂಡರು ಹಾಜರಿದ್ದರು.ಫೋಟೋ : 16 ಹೆಚ್ಎಸ್ಕೆ 1ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಕೋಲಾರಕ್ಕೆ ತೆರಳುವ ಮಾರ್ಗಮಧ್ಯೆ ಹೊಸಕೋಟೆ ಟೋಲ್ ಬಳಿ ಬಿಜೆಪಿ ಕಾರ್ಯಕರ್ತರು ಹಾಗೂ ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಅಭಿನಂದಿಸಿದರು.