ರಾಮನಗರ: ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡುವ ಮೂಲಕ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಪೋಸ್ಟರ್ ಗಳನ್ನು ಅಂಟಿಸಿ ಪ್ರತಿಭಟಿಸಿದರು.
ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಿತಿಕೇಶ್ ಕಂಠಿ ಶೆಲ್ಕೆ ಮಾತನಾಡಿ, ಕೇಂದ್ರ ಸರ್ಕಾರ ತಾಯಿ ಸ್ಥಾನದಲ್ಲಿ ನಿಂತು ಪ್ರತಿ ರಾಜ್ಯಗಳಿಗೆ ನ್ಯಾಯ ಕಲ್ಪಿಸಬೇಕು. ಆದರೆ, ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಲೇ ಇದೆ ಎಂದು ದೂರಿದರು.
ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಕರ್ನಾಟಕ ರಾಜ್ಯ 100 ರು. ತೆರಿಗೆ ಕಟ್ಟಿದರೆ ಅದಕ್ಕೆ 12-13 ರು. ಕೇಂದ್ರ ನೀಡುತ್ತಿದೆ. ಅದೇ ಉತ್ತರ ಪ್ರದೇಶ ಸರ್ಕಾರ 100 ರು. ನೀಡಿದರೆ, ಅವರಿಗೆ 300 ರು. ವಾಪಸ್ ಕೊಡುತ್ತಿದೆ. ಈ ತಾರತಮ್ಯವನ್ನು ನಾಡಿನ ಜನರು ಸಹಿಸುವುದಿಲ್ಲ. ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗುರುಪ್ರಸಾದ್ ಮಾತನಾಡಿ, ಕೇಂದ್ರಕ್ಕೆ ಅಧಿಕ ತೆರಿಗೆ ಆದಾಯ ತಂದು ಕೊಡುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ತೆರಿಗೆ ಪಾಲು ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ನೀತಿ ಖಂಡನೀಯ. ಈ ಬಗ್ಗೆ ರಾಜ್ಯದ ಬಿಜೆಪಿ ಸಂಸದರು ಬಾಯಿಗೆ ಬೀಗ ಹಾಕಿಕೊಡುವಂತೆ ಮೌನ ವಹಿಸದೆ ತುಟಿ ಬಿಚ್ಚಬೇಕು. ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು, ಅನುದಾನ, ಸವಲತ್ತುಗಳ ಬಗ್ಗೆ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡದ ಬಿಜೆಪಿ ಸಂಸದರನ್ನು ಆಯ್ಕೆ ಮಾಡಿದ್ದೇವೆ. ಸಬ್ ಕಾ ಸಾಥ್ , ಸಬ್ ಕಾ ವಿಕಾಸ್ ಎನ್ನುವ ಪ್ರಧಾನಿ ಮೋದಿಯವರು ರಾಜ್ಯದ ಜಿಎಸ್ ಟಿ ಪಾಲು ಹಂಚಿಕೆಯಲ್ಲಿ ಅನ್ಯಾಯ ಮಾಡುತ್ತಿರುವುದ ಏಕೆ ಎಂದು ಪ್ರಶ್ನಿಸಿದರು.
16ಕೆಆರ್ ಎಂಎನ್ 1.ಜೆಪಿಜಿ